ಗಿಫ್ಟ್ ಬೇಡ ಮೋದಿಗೆ ಓಟ್ ಹಾಕಿ, ಮದುವೆ ಕಾರ್ಡ್ನಲ್ಲಿ ಲೋಕಸಭೆ ಚುನಾವಣೆ ಪ್ರಚಾರ
ಚಿಕ್ಕಮಗಳೂರು, ಜನವರಿ 30: ಇತ್ತೀಚಿಗೆ ಮದುವೆಗಳು ಎಷ್ಟು ವಿಭಿನ್ನವಾಗಿ ನಡೆಯುತ್ತದೆಯೋ, ಅದೇ ರೀತಿ ಮದುವೆ ಆಮಂತ್ರಣದ ಕಾರ್ಡ್ಗಳು ಕೂಡ ಅಷ್ಟೇ ಒಂದಕ್ಕಿಂದ ಒಂದು ವಿಭಿನ್ನವಾಗಿರುತ್ತದೆ. ಸಾಮಾನ್ಯವಾಗಿ ಮದುವೆಯಲ್ಲಿ ಆಶೀರ್ವಾದವೇ ಉಡುಗೊರೆ, ನಿಮ್ಮ ಸಂತಸದ ಆಗಮನವೇ ಸಂಭ್ರಮ ಉಡುಗೊರೆ ಎಂದೆಲ್ಲಾ ಬರೆದಿರುವುದನ್ನು ಕಾಣಬಹುದು. ಆದರೆ ಇಲ್ಲೊಬ್ಬರು ಮದುವೆ ಕಾರ್ಡ್ನಲ್ಲೇ ಲೋಕಸಭಾ ಚುನಾವಣೆ ಪ್ರಚಾರ ಮಾಡಿದ್ದಾರೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ವಿಭಿನ್ನವಾದ ಮದುವೆಯ ಆಮಂತ್ರಣ ಪತ್ರಿಕೆಯೊಂದು ಸಖತ್ ವೈರಲ್ ಆಗುತ್ತಿದೆ. ಈ ಆಮಂತ್ರಣ ಪತ್ರಿಕೆಯಲ್ಲಿ ವಧುವಿನ ಅಣ್ಣನಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗಳ ಮೇಲಿರುವ ಪ್ರೀತಿ ಹಾಗೂ ಬಿಜೆಪಿ ಪಕ್ಷದ ಮೇಲಿರುವ ನಿಯತ್ತು ಪ್ರದರ್ಶನವಾಗಿದ್ದು, ಬಿಜೆಪಿ ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿ ಮದುವೆಯ ಆಮಂತ್ರಣ ಪತ್ರಿಕೆ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ.

ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿ ಆಲ್ದೂರು ಎನ್ನುವವರು ತನ್ನ ತಂಗಿ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಪ್ರಚಾರ ಮಾಡಿದ್ದಾರೆ. ಮದುವೆಯಲ್ಲಿ ವಧುವರರಿಗೆ ಉಡುಗೊರೆ ನೀಡುವುದು ಬೇಡ ಎಂದಿರುವ ಶಶಿ ಆಲ್ದೂರು, ವಧು-ವರರಿಗೆ ಉಡುಗೊರೆ ನೀಡಬೇಕೆಂದಿದ್ದರೆ, ತಾವು ಖಂಡಿತವಾಗಿಯೂ ಈ ಬಾರಿ ನರೇಂದ್ರ ಮೋದಿ ಅವರಿಗೆ ಮತ ನೀಡಿ. ಯಾಕೆಂದರೆ ಅವರ ಭವಿಷ್ಯದ ಭಾರತ ಸುಭದ್ರವಾಗಿರಬೇಕು ಎಂದು ಮದುವೆ ಆಮಂತ್ರಣದಲ್ಲಿ ಮುದ್ರಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿ ಆಲ್ದೂರು ಅವರ ತಂಗಿ ವಕೀಲೆ ಸಹನಾ ಹಾಗೂ ಮೈಸೂರಿನ ಹುಣಸೂರಿನ ಸಚಿನ್ ಮದುವೆ ವಿವಾಹ ಫೆಬ್ರವರಿ 5ರಂದು ಚಿಕ್ಕಮಗಳೂರಿನಲ್ಲಿ ನಡೆಯಲಿದೆ. ಈ ವಿವಾಹ ಆಮಂತ್ರಣ ಪತ್ರಿಕೆಯ ಮೂಲಕ ಚಿಕ್ಕಮಗಳೂರಿನಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಆರಂಭವಾಗಿದೆ.

ಇನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ಗಾಗಿ ಹಲವು ಆಕಾಂಕ್ಷಿಗಳ ಹೆಸರು ಕೇಳಿಬರುತ್ತಿದೆ. ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರಿನಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸುತ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಸಿ.ಟಿ.ರವಿ, ಡಿ.ಎನ್.ಜೀವರಾಜ್ ಹೆಸರು ಕೇಳಿ ಬರುತ್ತಿದ್ದು, ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಕೂಡ ಸ್ಪರ್ಧಿಸಲು ಉತ್ಸುಹಕರಾಗಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿರುವ ಸಿ.ಟಿ ರವಿ ಹಾಗೂ ಪ್ರಮೋದ್ ಮಧ್ವರಾಜ್ ಅವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರಮುಖವಾಗಿ ಪರಿಗಣಿಸಬೇಕು ಎನ್ನುವ ಆಗ್ರಹಗಳು ಕೇಳಿ ಬರುತ್ತಿದೆ. ಯಾಕೆಂದರೆ ಸಿ.ಟಿ ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಾಬಲ್ಯತೆ ಹೊಂದಿದ್ದರೆ, ಪ್ರಮೋದ್ ಮಧ್ವರಾಜ್ ಉಡುಪಿ ಜಿಲ್ಲೆಯಲ್ಲಿ ಹಿಡಿತ ಸಾಧಿಸಿದ್ದಾರೆ. ಆದರೆ ಶೋಭಾ ಕರಂದ್ಲಾಜೆ ಬಗ್ಗೆ ಎರಡು ಜಿಲ್ಲೆಯ ಮತದಾರರಲ್ಲಿ ಅಸಮಾಧಾನವಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಕಾಂಗ್ರೆಸ್ ಪ್ರಾಬಲ್ಯ ಸಾಧಿಸುತ್ತಿರುವ ಚಿಕ್ಕಮಗಳೂರಿಗೆ ಬಿಜೆಪಿಯಿಂದ ಸಮರ್ಥ ಅಭ್ಯರ್ಥಿಯ ಅವಶ್ಯಕತೆ ಹೆಚ್ಚಾಗಿದೆ.












Click it and Unblock the Notifications