KFD Death: ಮಂಗನ ಕಾಯಿಲೆಗೆ ಮೊದಲ ಬಲಿ: ಬೆಚ್ಚಿಬಿದ್ದ ಕಾಫಿನಾಡು
ಚಿಕ್ಕಮಗಳೂರು, ಫೆಬ್ರವರಿ 03: ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷ ಮೊದಲ ಸಾವಾಗಿದ್ದು, ಕೆಎಫ್ಡಿ ವೈರಸ್ ಮೊದಲ ಬಲಿ ಪಡೆದುಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನೇ ದಿನೇ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರದಲ್ಲಿ ಆತಂಕ ಮನೆ ಮಾಡಿದೆ.
ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ಮೂರು ದಿನಗಳ ಕಾಲ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಅವರು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ದಾಖಲಾಗಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ.

ಶೃಂಗೇರಿ ತಾಲೂಕಿನಲ್ಲಿ ಮಂಗನ ಕಾಯಿಲೆ ಪ್ರಕರಣ ಕಾಣಿಸಿಕೊಂಡಿರಲಿಲ್ಲ, ಇದೇ ಮೊದಲ ಪ್ರಕರಣವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಇದುವರೆಗೂ ಮೂರು ಪ್ರಕರಣಗಳು ಕಾಣಿಸಿಕೊಂಡಿದೆ.
ಕೊಪ್ಪ ತಾಲೂಕಿನ ಜೋಗಿಸರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ 35 ವರ್ಷದ ಮಹಿಳೆಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇ ಕೊಪ್ಪ ತಾಲೂಕಿನ 65 ವರ್ಷದ ವ್ಯಕ್ತಿಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದ್ದು ಇವರು ಗುಣಮುಖರಾಗಿದ್ದಾರೆ.
ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಯುವತಿ ಬಲಿ
ಶಿವಮೊಗ್ಗ ಜಿಲ್ಲೆಯಲ್ಲೂ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತುದ್ದು, ಮಂಗನ ಕಾಯಿಲೆ ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ಕಳೆದ ತಿಂಗಳು ಮಂಗನ ಕಾಯಿಲೆಯಿಂದ ಹೊಸನಗರ ತಾಲೂಕಿನ ಅರಳಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಪ್ಪನಮನೆ ಗ್ರಾಮದ 18 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಇದು ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷ ಮೃತಪಟ್ಟ ಮೊದಲ ಪ್ರಕರಣವಾಗಿದೆ.
ಉತ್ತರ ಕನ್ನಡ ಜನರ ನಿದ್ದೆಗೆಡಿಸಿದ ಮಂಗನ ಕಾಯಿಲೆ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಈ ಕಾಯಿಲೆಯಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಸಿದ್ದಾಪುರದ ಕೊರ್ಲಕೈದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 7 ಪ್ರಕರಣಗಳು ಬೆಳಕಿಗೆ ಬಂದಿದ್ದು, ಜಿಲ್ಲೆಯಲ್ಲಿ ಕೇವಲ 10 ದಿನದಲ್ಲಿ 16 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಕಳೆದ ಐದು ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿದ್ದು, ಈ ಪೈಕಿ 8 ಜನ ಕಾಯಿಲೆ ಉಲ್ಬಣಗೊಂಡು ಸಾವನ್ನಪ್ಪಿದ್ದರು. ಇದೀಗ ಮತ್ತೆ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಹೆಚ್ಚಾಗಿದೆ.












Click it and Unblock the Notifications