ಮಾಸ್ಕ್ ಹಾಕದ ಯುವಕನಿಗೆ ಥಳಿತ; ಪೊಲೀಸರ ವಿರುದ್ಧ ಪ್ರತಿಭಟನೆ
ಚಿಕ್ಕಮಗಳೂರು, ಡಿಸೆಂಬರ್ 23: ಕೋವಿಡ್ ಸಂದರ್ಭದಲ್ಲಿ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸಿಲ್ಲ ಎಂದು ಯುವಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಪೊಲೀಸರು ಲಕ್ಷ್ಮಣ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಜನರು ಪ್ರತಿಭಟನೆ ನಡೆಸಿದರು. ನೂರಾರು ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದರು.
ಪೊಲೀಸ್ ಇನ್ಸ್ಪೆಕ್ಟರ್ ಶಂಭು ಲಿಂಗಯ್ಯ ಯುವಕ ಲಕ್ಷ್ಮಣನಿಗೆ ಲಾಟಿಯಿಂದ ಹೊಡೆದಿದ್ದಾರೆ. ಇದರಿಂದಾಗಿ ಆತನ ಮೂಗು ಮತ್ತು ಕಣ್ಣಿಗೆ ಗಾಯವಾಗಿದೆ ಎಂದು ಜನರು ಆರೋಪಿಸಿದರು. ಶಂಭು ಲಿಂಗಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು, ವಾಗ್ವಾದ ನಡೆಸಿದರು.

ಸಾರ್ವಜನಿಕರಿಂದ ಠಾಣೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲಿ ಕೆಲವು ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪಿಎಸ್ಐ ಶಂಭುಲಿಂಗಯ್ಯರನ್ನು ತರಾಟೆಗೆ ತೆಗೆದುಕೊಂಡ ಜನರು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೋವಿಡ್ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಹಾಕುವುದು ಕಡ್ಡಾಯವಾಗಿದೆ. ನಗರ ಪ್ರದೇಶದಲ್ಲಿ ಮಾಸ್ಕ್ ಹಾಕದಿದ್ದರೆ 250 ರೂ., ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡವನ್ನು ಕಟ್ಟಬೇಕಿದೆ.
ಮಂಗಳವಾರದ ವರದಿಯಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 8 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 13,604ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 126.












Click it and Unblock the Notifications