ಚಿಕ್ಕಮಗಳೂರು: ಮಲೆನಾಡಿನಲ್ಲಿ ಮುಂದುವರಿದ ಮಳೆ ಅಬ್ಬರ
ಚಿಕ್ಕಮಗಳೂರು, ಆಗಸ್ಟ್ 07: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದ್ದರಿಂದ ದಕ್ಷಿಣ ಕನ್ನಡ-ಚಿಕ್ಕಮಗಳೂರು ಜಿಲ್ಲೆಯ ರಸ್ತೆ ಸಂಪರ್ಕ ಕಡಿತಗೊಂಡಿದೆ.
Recommended Video
ದಕ್ಷಿಣ ಕನ್ನಡಕ್ಕೆ ತಲುಪುವ ರಸ್ತೆಗೆ ಭಾರೀ ಗಾತ್ರದ ಬಂಡೆ-ಮರ-ಮಣ್ಣು ಬಿದ್ದಿರುವ ಘಟನೆ ಚಾರ್ಮಾಡಿ ಘಾಟ್ ನ ಅಲೇಖಾನ್ ಬಳಿ ನಡೆದಿದೆ. ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ.
ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ಮಣ್ಣು ತೆರವು ಕಾರ್ಯವನ್ನು ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಮಾಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಅಪಾರ ಪ್ರಮಾಣದ ಮಣ್ಣು ಕುಸಿದಿದೆ.

ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗಿದೆ. ಇದರಿಂದ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ರಸ್ತೆಗೆ ನೀರು ನುಗ್ಗಿರುವ ಪರಿಣಾಮ ಶೃಂಗೇರಿ-ಮಂಗಳೂರು ರಸ್ತೆ ಸಂಪರ್ಕ ಬಂದ್ ಆಗಿದೆ.

ಶೃಂಗೇರಿಯ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದ್ದು, ಕಪ್ಪೆ ಶಂಕರ ದೇವಾಲಯ ಕೂಡ ಮುಳುಗಡೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ-ಮಳೆಗೆ ಮಲೆನಾಡಿಗರು ಹೈರಾಣಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.












Click it and Unblock the Notifications