ತರೀಕೆರೆ: ದಾಖಲೆಯಿಲ್ಲದ ₹4,00,00,000ಗೂ ಅಧಿಕ ಮೌಲ್ಯದ ಚಿನ್ನಾಭರಣ ವಶ
ಚಿಕ್ಕಮಗಳೂರು, ಮಾರ್ಚ್, 26: ಲೋಕಸಭಾ ಚುನಾವಣೆ ಹಿನ್ನೆಲೆ ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಈ ವೇಳೆ ಅಕ್ರಮವಾಗಿ ಹಣ ಸಾಗಿಸುತ್ತಾರಂತಲೇ ಪೊಲೀಸರು ಚೆಕ್ಪೋಸ್ಟ್ಗಳಲ್ಲಿ ಸೂಕ್ತ ನಿಗಾವಹಿಸಿದ್ದಾರೆ. ಇನ್ನು ಇಂದು (ಮಾರ್ಚ್ 26) ಅಕ್ರಮವಾಗಿ ಸಾಗಿಸುತ್ತಿದ್ದ 4 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ, 1.873 ಗ್ರಾಂ ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ MC ಹಳ್ಳಿ ಚೆಕ್ ಪೋಸ್ಟ್ ಬಳಿಯ ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಖಲೆಯಿಲ್ಲದ ಬರೋಬ್ಬರಿ 6.5 ಕೆ.ಜಿ ಚಿನ್ನ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದ್ದು, ಇದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪರಿಶೀಲನೆ ವೇಳೆ ದಾಖಲೆ ನೀಡದ ಹಿನ್ನೆಲೆ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣವನ್ನು ತೆರಿಗೆ ಇಲಾಖೆಗೆ ತನಿಖೆಗೆ ಹಸ್ತಾಂತರ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
₹3,00,000 ಲಕ್ಷಕ್ಕೂ ಅಧಿಕ ಹಣ ವಶ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 3 ಲಕ್ಷಕ್ಕೂ ಅಧಿಕ ಹಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೊಸ್ಟ್ನಲ್ಲಿ ನಡೆದಿತ್ತು.
ಲೋಕಸಭಾ ಚುನಾವಣೆಯಲ್ಲಿ ಹಿನ್ನೆಲೆ ತಾಲೂಕಿನ ಕೇರಳ ಹಾಗೂ ತಮಿಳುನಾಡು ಗಡಿ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ದಾಖಲೆ ಇಲ್ಲದ 3 ಲಕ್ಷಕ್ಕೂ ಅಧಿಕ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಮಧ್ಯೆ ಗುರುವಾರ ಖುದ್ದು ತಪಾಸಣೆಗೆ ಇಳಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಮತ್ತು ತಂಡ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಈಚರ್ ವಾಹನ ಚಾಲಕ ಹ್ಯಾರಿಸ್ನಿಂದ 97,000 ರೂಪಾಯಿ, ಪಿಕ್ ಅಪ್ ಚಾಲಕ ಜಂಶೀರ್ ನಿಂದ 1,17 ಲಕ್ಷ ರೂಪಾಯಿ ಹಾಗೂ ಕಾರು ಚಾಲಕ ಜೋಶ್ ಕೈನಾಂಡಿ ಅವರಿಂದ 1 ಲಕ್ಷ ರೂಪಾಯಿ ಸೇರಿ ಒಟ್ಟು 3.14 ಲಕ್ಷ ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ತಮಿಳುನಾಡಿನ ಕೆಕ್ಕನಹಳ್ಳ ಚೆಕ್ ಪೋಸ್ಟ್ ಮಾರ್ಗವಾಗಿ ರಾಜ್ಯ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪೊಲೀಸರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಜಂಟಿಯಾಗಿ ತಪಾಸಣೆ ನಡೆಸುತ್ತಿದ್ದು, ವಾಹನ ಹಾಗೂ ಮೊಬೈಲ್ ನಂಬರ್ ಪಡೆದುಕೊಳ್ಳಲಾಗುತ್ತಿದೆ.
1,24,800 ರೂಪಾಯಿ ಹಣ ವಶ: ಪಾಲರ್ ಚೆಕ್ ಪೋಸ್ಟ್ನಲ್ಲಿ ಫೀಕಪ್ ವಾಹನವೊಂದರಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1,24,800 ರೂಪಾಯಿ ನಗದನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಗುರುವಾರ (ಮಾರ್ಚ್ 21) ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಹನೂರು ತಾಲ್ಲೂಕಿನ ತಮಿಳುನಾಡು ಗಡಿಹಂಚಿನಲ್ಲಿ ತೆರೆಯಲಾಗಿರುವ ಅಂತರ ರಾಜ್ಯ ಚೆಕ್ ಪೊಸ್ಟ್ನಲ್ಲಿ ಚುನಾವಣೆ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮೆಟ್ಟೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಪೀಕಪ್ ವಾಹನವನ್ನು ತಪಾಸಣೆಗೆ ಒಳಪಡಿಸಿದಾಗ ನಗದು ಇರುವುದು ಕಂಡುಬಂದಿದೆ. ಹಣದ ಬಗ್ಗೆ ವಿಚಾರಿಸಿದಾಗ ಸ್ಪಷ್ಟ ಮತ್ತು ಸಮಂಜಸ ಉತ್ತರವನ್ನು ನೀಡದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಹಾಗೂ ಚುನಾವಣೆ ಅಧಿಕಾರಿಗಳ ತಂಡ ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.












Click it and Unblock the Notifications