ಕೈ ತಪ್ಪಿದ ಟಿಕೆಟ್: ಬಿಜೆಪಿ ತೊರೆದು ಜೆಡಿಎಸ್ ಸೇರ್ತಾರಾ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ?
ಚಿಕ್ಕಮಗಳೂರು, ಏಪ್ರಿಲ್ 13 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 23 ಮಂದಿ ಅಭ್ಯರ್ಥಿಗಳಿಗೆ ಬಿಜೆಪಿ ಹೈಕಮಾಂಡ್ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್ ಹಂಚಿಕೆಯಲ್ಲಿ ಈ ಬಾರಿ ಅನೇಕ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದ ಟಿಕೆಟ್ ಹಾಲಿ ಶಾಸಕ ಹಾಗೂ ಮೂರು ಬಾರಿ ಗೆದ್ದ ಎಂ.ಪಿ.ಕುಮಾರಸ್ವಾಮಿಗೆ ಕೈ ತಪ್ಪಿದೆ. ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಎಂದು ಆಕ್ರೋಶ ಹೊರಹಾಕಿದ್ದ ಪರಿಣಾಮ ಬಿಜೆಪಿ ಹೈಕಮಾಂಡ್ ಈ ಬಾರಿ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್ ನೀಡಲು ನಿರಾಕರಿಸಿದೆ.

ಎಂ.ಪಿ.ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮೂಡಿಗೆರೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಅನೇಕರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಐದಾರು ಜನರ ತೀವ್ರ ಪೈಪೋಟಿ ಮಧ್ಯೆ ಅಚ್ಚರಿ ಎಂಬಂತೆ ಬಿಜೆಪಿ ಕಾರ್ಯಕರ್ತ ದೀಪಕ್ ದೊಡ್ಡಯ್ಯಗೆ ಹೈ ಕಮಾಂಡ್ ಮಣೆ ಹಾಕಿದೆ. ಕುಮಾರಸ್ವಾಮಿ ಕೂಡ, ಶತಾಯಗತಾಯ ಟಿಕೆಟ್ ತಂದು ಗೆದ್ದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮಂತ್ರಿ ಆಗುವ ಕನಸು ಕಂಡಿದ್ದರು. ಆದರೆ, ಕುಮಾರಸ್ವಾಮಿಯ ಮೇಲಿನ ಆರೋಪಗಳಿಂದ ಬಿಜೆಪಿ ಕಾರ್ಯಕರ್ತರೇ ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿದ್ದರು.
ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಎಂದು ವಿಜಯ ಸಂಕಲ್ಪ ಯಾತ್ರೆ ವೇಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನ ರಸ್ತೆ ಮಧ್ಯೆಯೇ ತಡೆದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸಿ.ಟಿ. ರವಿ ಹಾಗೂ ಎಂ.ಕೆ. ಪ್ರಾಣೇಶ್ ಮನೆಗೆ ತೆರಳಿದ್ದ ಸಾವಿರಾರು ಕಾರ್ಯಕರ್ತರು ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ ಎಂದು ಮನವಿ ಮಾಡಿದ್ದರು. ಕಾರ್ಯಕರ್ತರ ಮನವಿಯಂತೆ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ದು ಬಿಜೆಪಿ ಕಾರ್ಯಕರ್ತ ದೀಪಕ್ ದೊಡ್ಡಯ್ಯ ಅವರಿಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಅವಕಾಶ ನೀಡಿದೆ.
ಇನ್ನು ಬಿಜೆಪಿ ಟಿಕೆಟ್ ನೀಡಿದ ದೀಪಕ್ ದೊಡ್ಡಯ್ಯ ಮೇಲೂ ಕ್ಷೇತ್ರದಲ್ಲಿ ಕೆಲ ಕಾರ್ಯಕರ್ತರಿಗೆ ಅಸಮಾಧಾನಗಳಿವೆ. ಮತದಾನಕ್ಕೆ 30 ದಿನಗಳು ಇರುವ ಈ ಸಮಯದಲ್ಲಿ ಮೂಡಿಗೆರೆ ತಾಲೂಕಿನ ಜನ ದೀಪಕ್ ದೊಡ್ಡಯ್ಯ ಅವರನ್ನ ಹೇಗೆ ಒಪ್ಪಿಕೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

ಈ ನಡುವೆ ಪ್ರಮುಖ ವಿಚಾರವೊಂದು ಬೆಳಕಿಗೆ ಬಂದಿದ್ದು, ಈಗಾಗಲೇ ಮೂಡಿಗೆರೆ ಹಾಲಿ ಶಾಸಕ ಕುಮಾರಸ್ವಾಮಿ, ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿ ಮೂಡಿಗೆರೆ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ಹರಿದಾಡುತ್ತಿದೆ.
ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಎಂ.ಪಿ ಕುಮಾರಸ್ವಾಮಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಗಲಿರಿಗೆ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. 'ಆತ್ಮೀಯ ಕ್ಷೇತ್ರದ ಮತದಾರ ಬಂಧುಗಳೇ, ನಾನೆಂದು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಕ್ಷೇತ್ರದ ಎಲ್ಲಾ ಜಾತಿ, ಧರ್ಮದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಂಡಿದ್ದು ಹೈಕಮಾಂಡ್ ಗೇ ತಪ್ಪಾಗಿ ಕಂಡಿದ್ದು ಪರಮಾಶ್ಚರ್ಯ.
ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷ ಪ್ರತಿ ಸರ್ವೇಯಲ್ಲಿ ಮುನ್ನಡೆಯಿದ್ದರು, ಟಿಕೆಟ್ ನಿರಾಕರಿಸಿದ್ದು ನೋವಿನ ವಿಚಾರ. ಮಳೆಯಿಂದಾಗಿ ಬೆಳೆ ಕಳೆದುಕೊಂಡ ಕ್ಷೇತ್ರದ ರೈತ ಭಾಂದವರಿಗೋಸ್ಕರ ವಿಧಾನಸೌಧದ ಗಾಂಧಿಪ್ರತಿಮೆ ಮುಂದೆ ಏಕಾಂಗಿಯಾಗಿ ಧರಣಿ ಕುಳಿತಿದ್ದು ಹೈ ಕಮಾಂಡ್ಗೆ ತಪ್ಪು ಅನ್ನಿಸಿದ್ದು ಇನ್ನೂ ಪರಮಾಶ್ಚರ್ಯ.
ನಿಮಗೆಲ್ಲಾ ತಳಿದಿರುವಂತೆ ಶತ್ರುಗಳಿಗೂ ಕೂಡ ಕೇಡು ಬಯಸದೇ ಎಲ್ಲರನ್ನು ಸದಾ ಗೌರವಿಸುತ್ತಾ ಪ್ರೀತಿಯಿಂದ ಕಾಣುತ್ತಲೇ ಬಂದೆ. ಪಕ್ಷದ ಕಾರ್ಯಕರ್ತರನ್ನ ಬೆಳೆಸಿದ್ದೇನೆ ಹೊರತು ನನ್ನ ಮನೆಯವರನ್ನಲ್ಲಾ. ಯೋಚಿಸುವ ಶಕ್ತಿ ನಿಮ್ಮಲ್ಲಿದೆ. ನನಗೆ ಶಕ್ತಿ ತುಂಬುವ ಕೈಗಳು ನೀವು. ಇನ್ನು ಮುಂದೆಯೂ ನಿಮ್ಮೊಂದಿಗೆ ಸದಾ ಜೊತೆಯಲ್ಲಿರುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನ ಮೇಲಿರುತ್ತದೆ ಎಂಬ ನಂಬಿಕೆ ನನಗಿದೆ' ಎಂದು ಭಾವನಾತ್ಮಕ ಸಂದೇಶ ಬರೆದುಕೊಂಡಿದ್ದಾರೆ.












Click it and Unblock the Notifications