ಮೂಡಿಗೆರೆ; ನಯನಾ ಮೋಟಮ್ಮ ಪಕ್ಷಕ್ಕಾಗಿ ಏನೂ ಮಾಡುತ್ತಿಲ್ಲ ಎಂದು ಆಕ್ರೋಶ
ಚಿಕ್ಕಮಗಳೂರು, ನವೆಂಬರ್, 04: ಮಾಜಿ ಸಚಿವೆ ಮೋಟಮ್ಮನವರು ಎಂಟು ಬಾರಿ ಟಿಕೆಟ್ ಪಡೆದು, ಕೇವಲ ಮೂರು ಬಾರಿ ಮಾತ್ರ ಗೆಲುವು ಸಾಧಿಸಿದ್ದಾರೆ. ಇದೀಗ ಮತ್ತೆ ಅವರ ಮಗಳಿಗೆ ಟಿಕೆಟ್ ಕೊಡಿಸಲು ಹೋರಾಡುತ್ತಿದ್ದಾರೆ. ಹಾಗಾಗಿ ಕಾರ್ಯಕರ್ತರು ಅವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಎಂದು ಮೂಡಿಗೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಾಗರತ್ನ ಮೋಟಮ್ಮ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಮೋಟಮ್ಮನವರ ಮಗಳಾದ ನಯನಾ ಮೋಟಮ್ಮ ಇತ್ತೀಚೆಗೆ ಪಕ್ಷಕ್ಕೆ ಸೇರಿದ್ದಾರೆ. ಅವರು ಪೆನ್ನು-ಪುಸ್ತಕ ಹಂಚಿಕೊಂಡು ಓಡಾಡುತ್ತಿದ್ದಾರೆ ಅಷ್ಟೆ. ಪಕ್ಷಕ್ಕಾಗಿ ಅವರು ಏನೂ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಅವರು ಕಾಂಗ್ರೆಸ್ಸಿನ ಯಾವುದೇ ನಾಯಕರು, ಬೂತ್ ಅಧ್ಯಕ್ಷರನ್ನು ಭೇಟಿ ಆಗುತ್ತಿಲ್ಲ. ಬರೀ ಮನೆ ಕೆಲಸದವರ ಜೊತೆ ಓಡಾಡುತ್ತಿದ್ದು, ಗುಂಪುಗಾರಿಕೆಯನ್ನೂ ಮಾಡುತ್ತಿದ್ದಾರೆ. ಅಧಿಕಾರ ಸಿಕ್ಕರೆ ಯಾವ ರೀತಿ ಗುಂಪುಗಾರಿಕೆ ಮಾಡಬಹುದು ಎಂದು ಭಾವಿಸಿ ಜನ ಅವರಿಗೆ ಟಿಕೆಟ್ ಬೇಡ ಎಂದಿದ್ದಾರೆ ಅಂತಾ ಕಾರ್ಯಕರ್ತರೇ ಹೇಳುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಕಾರ್ಯಕರ್ತರನ್ನು ವಿರೋಧ ಮಾಡಿಕೊಂಡು ಯಾವತ್ತೂ ಯಾರಿಗೂ ಟಿಕೆಟ್ ನೀಡಿಲ್ಲ. ಹಾಗಾಗಿ ಈ ಬಾರಿ ನನಗೆ ಟಿಕೆಟ್ ಸಿಗುತ್ತದೆ ಎನ್ನುವ ಭರವಸೆಯಲ್ಲಿದ್ದೇನೆ ಎಂದರು.
ಕಾಂಗ್ರೆಸ್ನಲ್ಲಿ ಅಸಮಾಧಾನ: ಮೋಟಮ್ಮ ಪುತ್ರಿಗೆ ಟಿಕೆಟ್ ಕೊಡದಂತೆ ಬಹಿರಂಗ ಸಭೆ
ಗರಿಗೆದರಿದ ರಾಜಕೀಯ ಬೆಳವಣಿಗೆ; ವಿಧಾನಸಭೆ ಚುನಾವಣೆಗೆ ಆರು ತಿಂಗಳು ಇರುವಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. 2023ರ ಚುನಾವಣೆಯಲ್ಲಿ ಬಹುಮತ ಪಡೆಯಲು ಮೂರು ಪಕ್ಷಗಳು ಶತಪ್ರಯತ್ನ ಪಡುತ್ತಿದೆ. ಈ ಮಧ್ಯೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಮೋಟಮ್ಮಾಗೆ ಟಿಕೆಟ್ ಬೇಡವೇ ಬೇಡ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗ ಸಭೆ ನಡೆಸಿದ್ದರು. ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿ ವ್ಯಾಪ್ತಿಯಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಮೋಟಮ್ಮ ಪುತ್ರಿ ನಯನ ಮೋಟಮ್ಮಾಗೆ ಟಿಕೆಟ್ ನೀಡದಂತೆ ರಾಜ್ಯ ನಾಯಕರು ಹಾಗೂ ರಾಷ್ಟ್ರೀಯ ನಾಯಕರಿಗೂ ಮನವಿ ಮಾಡಲು ನಿರ್ಧರಿಸಿದ್ದರು.
ನಯನಾಗೆ ಟಿಕೆಟ್ ನೀಡದಿರಲು ಆಗ್ರಹ; ನಯನಾಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಸೋಲು ಖಚಿತ. ಕ್ಷೇತ್ರದ ಜನ ನಯನಾ ಅವರನ್ನು ಒಪ್ಪುತ್ತಿಲ್ಲ. ಪಕ್ಷದ ಸ್ಥಳೀಯ ಕಾರ್ಯಕರ್ತರು ಹಾಗೂ ಮುಖಂಡರು ಕೂಡ ನಯನಾಗೆ ಟಿಕೆಟ್ ನೀಡಲು ವಿರೋಧಿಸಿದ್ದಾರೆ. ಈಗಾಗಲೇ ಮೊಟ್ಟಮ್ಮ ಐದು ಬಾರಿ ಸೋಲು ಕಂಡಿದ್ದಾರೆ. ಈ ಮಧ್ಯೆ ನಾನು ರಾಜಕೀಯದಿಂದ ನಿವೃತ್ತಿ ಆಗಿದ್ದೇನೆ ಎಂದು ಅವರೇ ಹೇಳಿಕೊಂಡಿದ್ದರು. ಹೀಗಿರುವಾಗ ಅವರ ಮಗಳಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುವುದು ಖಚಿತ ಎನ್ನುವುದು ಬಹುತೇಕ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಹೀಗಾಗಿ ಪಕ್ಷದಿಂದ ಸ್ಥಳೀಯರು ಹಾಗೂ ಹೊಸ ಮುಖಕ್ಕೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಆಗ್ರಹಿಸಿ ನಯನ ವಿರುದ್ಧ ಬಹಿರಂಗ ಸಭೆ ನಡೆಸಿದ್ದರು.