ಬೈರಾಪುರ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ
ಚಿಕ್ಕಮಗಳೂರು, ಆಗಸ್ಟ್ 4: ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಮಳೆಯ ಕಾರಣಕ್ಕೆ ಮಲೆನಾಡು ಭಾಗದಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ನದಿಗಳ ಹರಿವಿನಲ್ಲಿ ಭಾರೀ ಏರಿಕೆ ಆಗಿದೆ.
ಕರ್ನಾಟಕದ ಐದು ಜಿಲ್ಲೆಗಳಲ್ಲಿ ಪ್ರವಾಹ ಭೀತಿ, ಎಲ್ಲೆಲ್ಲಿ?
ಮೂಡಿಗೆರೆ ತಾಲೂಕಿನ ಬೈರಾಪುರ, ದಾರದಹಳ್ಳಿ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಆಗುತ್ತಿದೆ. ಇನ್ನು ಶೃಂಗೇರಿ, ಎನ್. ಆರ್. ಪುರ, ಕೊಪ್ಪ ಭಾಗದಲ್ಲಿ ಸಾಧಾರಣ ಮಳೆ ಆಗುತ್ತಿದೆ. ಒಟ್ಟಾರೆ ಕಳೆದ ಮೂರು ದಿನದಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಆತಂಕಕ್ಕೂ ಕಾರಣವಾಗಿದೆ.
ಮಳೆಯ ಆರ್ಭಟಕ್ಕೆ ಜನರು ಮನೆಯಿಂದ ಹೊರಬರಲು ಸಹ ಹಿಂದೇಟು ಹಾಕುತ್ತಿದ್ದಾರೆ. ಕೆಲವೆಡೆ ಭಾರೀ ಗಾತ್ರದ ಮರಗಳು ಹಾಗೂ ವಿದ್ಯುತ್ ಕಂಬಗಳೇ ನೆಲಕ್ಕೆ ಉರುಳಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಒಟ್ಟಾರೆಯಾಗಿ ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದ ಮಳೆ ಆಗುತ್ತಿದೆ.