ಬಿಎಸ್ವೈಗೆ ತೊಂದರೆ ಕೊಟ್ಟರೆ ಹೋರಾಟ; ಸ್ವಾಮೀಜಿ ಎಚ್ಚರಿಕೆ
ಚಿಕ್ಕಮಗಳೂರು, ಜುಲೈ 21; " ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಲೆಲ್ಲಾ ತೊಂದರೆ ನೀಡಲಾಗುತ್ತಿದೆ. ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ" ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ವಿವಿಧ ಮಠಾಧೀಶರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ.
ಕಡೂರಿನಲ್ಲಿ ಮಾತನಾಡಿದ ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ, "ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಬೇಡವೇ ಬೇಡ. ಯಡಿಯೂರಪ್ಪ ಎಲ್ಲರನ್ನೂ ಒಗ್ಗೂಡಿಸಿ ಕೊಂಡು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ" ಎಂದರು.

"ಅವರ ಅವಧಿ ಮುಗಿಯುವವರೆಗೂ ಕಾಲಾವಕಾಶ ನೀಡಬೇಕು. ಯಡಿಯೂರಪ್ಪ ದಕ್ಷ, ಪ್ರಮಾಣಿಕ ಸಮರ್ಥ ನಾಯಕರು ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಇಂತಹ ಸಂದರ್ಭದಲ್ಲಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸಮಂಜಸವಲ್ಲ" ಎಂದು ಹೇಳಿದರು.
"ಕಳೆದ ಎರಡು ವರ್ಷದ ಕೊರೊನಾ ಸಂದರ್ಭದಲ್ಲಿ ತಮ್ಮ ವಯಸ್ಸನ್ನು ಮರೆತು ಯುವಕರಂತೆ ಹೋರಾಟ ಮಾಡಿ ನಾಡಿನ ಹಿತದೃಷ್ಟಿಯಿಂದ ಉತ್ತಮ ಕೆಲಸ ಮಾಡಿದ್ದಾರೆ. ಇದನ್ನು ಹೈಕಮಾಂಡ್ ಮನಗಂಡು ತೀರ್ಮಾನ ತಗೆದುಕೊಳ್ಳಬೇಕು" ಎಂದು ಸ್ವಾಮೀಜಿ ಒತ್ತಾಯಿಸಿದರು.
ಮುಖ್ಯಮಂತ್ರಿ ಬದಲಾವಣೆ; ಬಿ. ಎಸ್. ಯಡಿಯೂರಪ್ಪ ಶನಿವಾರ ದೆಹಲಿ ಪ್ರವಾಸ ಕೈಗೊಂಡಿದ್ದರು. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ಆಗ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿದೆ ಎಂಬುದು ಸುದ್ದಿ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಜುಲೈ 26ಕ್ಕೆ ಎರಡು ವರ್ಷವಾಗಲಿದೆ. ಅಂದು ಸಂಜೆ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಭಾರೀ ಚರ್ಚೆಗೆ ಕಾರಣವಾಗಿವೆ. ಹಲವಾರು ನಾಯಕರು ಈ ಕುರಿತು ಸ್ಪಷ್ಟನೆಗಳನ್ನು ಸಹ ನೀಡಿದ್ದಾರೆ.
ನಾಯಕತ್ವ ಬದಲಾವಣೆ ಬಳಿಕ ಮುಂದೇನು?, ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಪ್ರಶ್ನೆಗೆ ರಾಜ್ಯ ಬಿಜೆಪಿ ನಾಯಕರ ಬಳಿ ಉತ್ತರವಿಲ್ಲ. ಕರ್ನಾಟಕ ರಾಜಕೀಯದಲ್ಲಿ ಇಷ್ಟು ಬೆಳವಣಿಗೆ ನಡೆಯುತ್ತಿದ್ದರೂ ಹೈಕಮಾಂಡ್ ನಾಯಕರು ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.
ರಾಜ್ಯದ ವಿವಿಧ ಮಠಾಧೀಶರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ವಿವಿಧ ಕಡೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ.












Click it and Unblock the Notifications