ಚಿಕ್ಕಮಗಳೂರು; ಮಕ್ಕಳ ನಿರ್ಲಕ್ಷ್ಯಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ
ಚಿಕ್ಕಮಗಳೂರು, ಜೂನ್ 06: ನಮ್ಮ ಮಕ್ಕಳೇ ನಮ್ಮನ್ನು ನೋಡುತ್ತಿಲ್ಲ, ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ನೊಂದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಇಂದು ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ವಾಸಿಸುತ್ತಿದ್ದ ದಂಪತಿ ಗೋಪಾಲಕೃಷ್ಣ (74) ಹಾಗೂ ರತ್ನ (73) ಮೃತ ದುರ್ದೈವಿಗಳು. ಗೋಪಾಲಕೃಷ್ಣ ಅವರು ನೇಣು ಹಾಕಿಕೊಂಡಿದ್ದರೆ, ರತ್ನ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆನ್ಲೈನ್ ತರಗತಿ ಮಿಸ್ ಆಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕಿ
ಇತ್ತೀಚೆಗೆ ಲಾಕ್ ಡೌನ್ ನಿಂದಾಗಿ ಇವರು ಹಣಕಾಸಿನ ಸಮಸ್ಯೆಗೊಳಗಾಗಿದ್ದರು ಎನ್ನಲಾಗಿದೆ. ಈ ದಂಪತಿಯ ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು, ಅನಾರೋಗ್ಯಕ್ಕೆ ತುತ್ತಾಗಿದ್ದ ಈ ವೃದ್ಧ ದಂಪತಿಯ ಯೋಗಕ್ಷೇಮವನ್ನು ವಿಚಾರಿಸುತ್ತಿರಲಿಲ್ಲ, ಯಾವುದೇ ನೆರವು ನೀಡುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಗೂ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದರು. ಇದರಿಂದ ತೀವ್ರವಾಗಿ ನೊಂದ ಈ ದಂಪತಿ ಆತ್ಮಹತ್ಯೆಯ ತೀರ್ಮಾನವನ್ನು ಕೈಗೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.