ಎರಡು ರಾಷ್ಟ್ರೀಯ ಪಕ್ಷಗಳ ದುರಾಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ: ಜೆಡಿಎಸ್ ಅಭ್ಯರ್ಥಿ ಆಕ್ರೋಶ
ಚಿಕ್ಕಮಗಳೂರು, ಡಿಸೆಂಬರ್, 22: ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳೇ ಆಗಿಲ್ಲ. ಮತ್ತೊಂದೆಡೆ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿದೆ. ರಾಜ್ಯದಿಂದ ಗೆದ್ದು ಕೇಂದ್ರಕ್ಕೆ ಹೋದ ಸಂಸದರು ಬಾಯಿ ಬಿಡುತ್ತಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ದುರಾಡಳಿತಕ್ಕೆ ಜನರು ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಮೂಡಿಗೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಬಿ.ನಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಪಂಚರತ್ನ ಯಾತ್ರೆಗೆ ರಾಜ್ಯಾದ್ಯಂತ ಜನರಿಂದ ಬೆಂಬಲ, ಪ್ರಶಂಸೆ ವ್ಯಕ್ತ ವಾಗುತ್ತಿದೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಶಿಕ್ಷಣ, ಕೃಷಿ, ಆರೋಗ್ಯ, ವಸತಿ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಿ ಜನರ ಅಭಿವೃದ್ಧಿಗಾಗಿ ಶ್ರಮಿಸಲಿದೆ. ಅಲ್ಲದೆ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.
ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ
ಮೂಡಿಗೆರೆ ಶಾಸಕನಾಗಿದ್ದ ಅವಧಿಯಲ್ಲಿ ತಾಲೂಕಿಗೆ 1,200 ಕೋಟಿ ರೂಪಾಯಿ ಅನುದಾನ ತಂದು ಅಭಿವೃದ್ದಿಪಡಿಸುವ ಕೆಲಸವನ್ನು ಮಾಡಿದ್ದೇನೆ. ಎಂ.ಪಿ.ಕುಮಾರಸ್ವಾಮಿ ಶಾಸಕರಾದ ಬಳಿಕ ತಾಲೂಕಿನಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ಹಳ್ಳಿಗಳಿಗೆ ಹೋದರೆ ಅಲ್ಲಿ ಒಂದೇ ಒಂದು ರಸ್ತೆಯನ್ನೂ ಸಹ ಅಭಿವೃದ್ದಿಪಡಿಸಿಲ್ಲ. ಒಂದು ವೇಳೆ ಅಭಿವೃದ್ದಿಪಡಿಸಿದರೂ ಅದು ಕಳಪೆ ಕಾಮಗಾರಿಯಾಗಿದೆ ಎಂದು ಆರೋಪಿಸಿದರು. ಈ ಹಿಂದಿನ ಅವಧಿಗಳಲ್ಲಿ ಜೆಡಿಎಸ್ ಸರ್ಕಾರವಿದ್ದ ಸಂದರ್ಭದಲ್ಲಿ ಹಳ್ಳಿಗಳನ್ನು ಅಭಿವೃದ್ದಿಪಡಿಸುವ ಕೆಲಸ ಮಾಡಲಾಗಿತ್ತು. ಈ ಮೂಲಕ ರೈತರ ಕಣ್ಣೀರು ಒರೆಸುವ ಕೆಲಸ ಮಾಡಿತ್ತು. ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡಲಾಗಿತ್ತು ಎಂದರು.

ಮನೆ ಕಳ್ಳತನ ಮಾಡಿದ್ದ ಓರ್ವ ಆರೋಪಿ ಅರೆಸ್ಟ್
ಬೀರೂರಿನಲ್ಲಿ ಮನೆ ಮಾಲೀಕರು ಇಲ್ಲದ ಸಮಯದಲ್ಲಿ ಮನೆಯ ಬಾಗಿಲು ಒಡೆದು ಸುಮಾರು 17.20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಯನ್ನು ತರೀಕೆರೆ ತಾಲೂಕಿನ ಲಕ್ಕವಳ್ಳಿ ನಿವಾಸಿ ಕಿರಣ್ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ 17,23,240 ರೂಪಾಯಿ ಮೌಲ್ಯದ 430.810 ಗ್ರಾಂ ಚಿನ್ನಾಭರಣ, 2,500 ರೂಪಾಯಿ ಮೌಲ್ಯದ ಬೆಳ್ಳಿಯ ಆಭರಣಗಳು ಮತ್ತು 606 ಗ್ರಾಂ ಆರ್ಟಿಫಿಶಿಯಲ್ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಂಪೂರ್ಣ ಹಿನ್ನೆಲೆ
ಜಿಲ್ಲೆಯ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅರೇಕಲ್ ಬೀದಿಯಲ್ಲಿರುವ ಅರೇಕಲ್ ಸತೀಶ್ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಡಿಸೆಂಬರ್ 9ರಂದು ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆ ಮಾಲೀಕರು ಇಲ್ಲದಿರುವುದನ್ನು ಗಮನಿಸಿದ್ದ ಆರೋಪಿ ಕಿರಣ್ಕುಮಾರ್ ಮನೆಯ ಹಿಂಬದಿಯ ಬಾಗಿಲು ಒಡೆದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಸಂಬಂಧ ಸತೀಶ್ ಬೀರೂರು ಪೊಲೀಸರಿಗೆ ದೂರು ನೀಡಿದ್ದರು. ಸತೀಶ್ ನೀಡಿದ ದೂರಿನ ಮೇರೆಗೆ ಎಸ್ಪಿ ಉಮಾಪ್ರಶಾಂತ್, ಎಎಸ್ಪಿ ಕೃಷ್ಣಮೂರ್ತಿ, ತರೀಕೆರೆ ಡಿವೈಎಸ್ಪಿ ಕೆ.ಆರ್.ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಬೀರೂರು ವೃತ್ತ ನಿರೀಕ್ಷಕ ಗುರುಪ್ರಸಾದ್ ನೇತೃತ್ವದ ತಂಡ ತನಿಖೆ ನಡೆಸಿದೆ. ತನಿಖೆ ವೇಳೆ ಸಿಸಿ ಕ್ಯಾಮೆರಾಗಳಲ್ಲಿ ಸಿಕ್ಕ ಖಚಿತ ಸುಳಿವಿನ ಮೇರೆಗೆ ಪೊಲೀಸರು ಆರೋಪಿ ಕಿರಣ್ಕುಮಾರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.












Click it and Unblock the Notifications