ಚಿಕ್ಕಮಗಳೂರು: 15 ಪಂಚಾಯಿತಿಗಳಲ್ಲಿ ಚುನಾವಣೆ ಬಹಿಷ್ಕಾರ
ಚಿಕ್ಕಮಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಮೊದಲನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮತದಾನ ಆರಂಭವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 194 ಗ್ರಾಮ ಪಂಚಾಯಿತಿಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.
ಮಂಗಳವಾರ ಬೆಳಗ್ಗೆ ಜಿಲ್ಲೆಯ 1002 ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. 194 ಗ್ರಾಮ ಪಂಚಾಯಿತಿಗಳಲ್ಲಿ 5290 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ದತ್ತ ಜಯಂತಿ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸಲಾಗುತ್ತಿದೆ.
5290 ಅಭ್ಯರ್ಥಿಗಳ ಭವಿಷ್ಯವನ್ನು ಮಂಗಳವಾರ 6,29,665 ಮತದಾರರು ಬರೆಯಲಿದ್ದಾರೆ. 107 ಸದಸ್ಯರು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಜೆ 5 ಗಂಟೆಯ ತನಕ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಚುನಾವಣೆ ಬಹಿಷ್ಕಾರ: ಚಿಕ್ಕಮಗಳೂರು ಜಿಲ್ಲೆಯಲ್ಲಿ 15 ಗ್ರಾಮ ಪಂಚಾಯಿತಿಗಳಲ್ಲಿ ಜನರು ಮತದಾವನ್ನು ಬಹಿಷ್ಕಾರ ಮಾಡಿದ್ದಾರೆ. ನಾಮಪತ್ರಗಳನ್ನು ಸಲ್ಲಿಸದೇ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಡಾ. ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಇದರಿಂದಾಗಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಬರುವ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜನರಲ್ಲಿ ಆತಂಕ ಎದುರಾಗಿದೆ. ಆದ್ದರಿಂದ, 15 ಗ್ರಾಮ ಪಂಚಾಯಿತಿಗಳ ಜನರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ.












Click it and Unblock the Notifications