ಗ್ರಾ.ಪಂ. ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೊಟ್ಟ ಮಲೆನಾಡಿಗರು
ಚಿಕ್ಕಮಗಳೂರು, ಡಿಸೆಂಬರ್ 02: ಗ್ರಾಮ ಪಂಚಾಯಿತಿ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆನ್ ಲೈನ್ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸಾರ್ವಜನಿಕರು ಸೂಚಿಸಿದ್ದಾರೆ.
ಗ್ರಾ.ಪಂ. ಚುನಾವಣೆ: ಶಸ್ತ್ರಾಸ್ತ್ರಗಳ ಠೇವಣಿಗೆ ಬಳ್ಳಾರಿ ಡಿಸಿ ಸೂಚನೆ
ಈಗಾಗಲೇ ಮಲೆನಾಡಿಗರ ಬದುಕಿನ ಮೇಲೆ ಹುಲಿ ಯೋಜನೆ, ಬಫರ್ ಜ್ಹೋನ್, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿದೆ. ಸರ್ಕಾರದ ಈ ಯೋಜನೆಗಳಿಂದ ಜಿಲ್ಲೆಯ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಹಾಗಾಗಿ, ಮಲೆನಾಡಿಗರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.
ಖಾಂಡ್ಯ ಹೋಬಳಿಯ ಕಡವಂತಿ, ಹುಯಿಗೆರೆ, ದೇವದಾನ ಹಾಗೂ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈಗಾಗಲೇ ಅಲ್ಲಲ್ಲೇ ಬ್ಯಾನರ್ ಕಟ್ಟಿದ್ದು, ಚುನಾವಣೆಗಿಂತ ಬದುಕು ದೊಡ್ಡದ್ದಾಗಿರೋದರಿಂದ ಮಲೆನಾಡಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಜೋರಾಗಿದೆ.
ಡಿಸೆಂಬರ್ ಅಂತ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದ್ದು, 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ಹಾಗೂ ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ಡಿಸೆಂಬರ್ 7ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.