ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ ಆರೋಪ ತಳ್ಳಿ ಹಾಕಿದ ಪೊಲೀಸರು
ಚಿಕ್ಕಮಗಳೂರು, ನ. 22: ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಆನೆ ದಾಳಿಯಲ್ಲಿ 45 ವರ್ಷದ ಮಹಿಳೆ ಸಾವನ್ನಪ್ಪಿದ ಘಟನೆ ವೇಳೆ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಅವರ ಹೇಳಿಕೆ ಬೆನ್ನಲ್ಲೆ, ಪೊಲೀಸರು ಆರೋಪಗಳನ್ನು ನಿರಾಕರಿಸಿದ್ದಾರೆ.
ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ವಿಡಿಯೋದಲ್ಲಿ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹರಿದ ಅಂಗಿ ಧರಿಸಿ ತಮ್ಮ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿದ್ದಾರೆ. ಮಹಿಳೆಯ ಸಾವಿನ ನಂತರ ಮೂಡಿಗೆರೆ ತಾಲೂಕಿಗೆ ತೆರಳಿದ್ದ ವೇಳೆ ಪ್ರತಿಭಟನಾಕಾರರು ತಮ್ಮ ಬಟ್ಟೆಯನ್ನು ಹರಿದು ಹಾಕಿದ್ದಾರೆ ಎಂದು ಹೇಳಿದ್ದರು.
ನನಗೆ ಚಪ್ಪಲಿಯಲ್ಲಿ ಹೊಡೆದರು: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ
ಘಟನೆ ಬಗ್ಗೆ ತೀವ್ರ ವಾಗ್ವಾದದ ನಂತರ ಪ್ರತಿಭಟನಾಕಾರರು ಹಲ್ಲೆಗೆ ಯತ್ನಿಸಿದರು. ಈ ವೇಳೆ ಕುಮಾರಸ್ವಾಮಿ ಅವರನ್ನು ತಮ್ಮ ಜೀಪಿಗೆ ಕರೆದೊಯ್ದು ಮನೆಗೆ ಕಳುಹಿಸಲಾಯಿತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ಹೇಳಿದ್ದಾರೆ.
ಶಾಸಕ ಕುಮಾರಸ್ವಾಮಿ ಹಲ್ಲೆ ಆರೋಪದ ಬೆನ್ನಲ್ಲೆ ಮತ್ತೊಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಕುಮಾರಸ್ವಾಮಿ ಪೊಲೀಸರ ನೆರವಿನಿಂದ ಜೀಪ್ ಹತ್ತುತ್ತಿರುವ ದೃಶ್ಯವಿದೆ. ಗ್ರಾಮಸ್ಥರು ವಾಹನವನ್ನು ಸುತ್ತುವರೆದಿದ್ದು, ಅವರ ಬಟ್ಟೆಗೆ ಯಾವುದೇ ಹಾನಿಯಾಗಿಲ್ಲ ಎಂಬುದು ಕಾಣಿಸುತ್ತದೆ.
'ಕುಮಾರಸ್ವಾಮಿ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಗ್ರಾಮಸ್ಥರು ಅವರನ್ನು ಪ್ರಶ್ನಿಸಿದಾಗ ಸರ್ಕಲ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಮತ್ತು ನಾನು ಅಲ್ಲಿಯೇ ಇದ್ದೆವು. ವಾಗ್ವಾದದ ನಂತರ ಗ್ರಾಮಸ್ಥರು ಅವರ ಮೇಲೆ ಹಲ್ಲೆಗೆ ಯತ್ನಿಸಿದಾಗ ಲಘು ಲಾಠಿ ಪ್ರಹಾರ ನಡೆಸಿ ಸುರಕ್ಷಿತವಾಗಿ ಬೆಂಗಾವಲು ಮಾಡಿ ಮನೆಗೆ ಕಳುಹಿಸಿದ್ದೇವೆ" ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ತಿಳಿಸಿದ್ದಾರೆ.
"ಕಾಡು ಆನೆಗಳ ಹಾವಳಿಯ ಬಗ್ಗೆ ಗ್ರಾಮಸ್ಥರು, ಅರಣ್ಯ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ವಿರುದ್ಧ ಕೋಪಗೊಂಡಿದ್ದರಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂಬುದು ನಮಗೆ ಗೊತ್ತಿತ್ತು. ಹೀಗಾಗಿ ಘಟನಾ ಸ್ಥಳದಲ್ಲಿ ಭಾನುವಾರ ಬೆಳಗ್ಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದೇವು" ಎಂದಿರುವ ಪುರುಷೋತ್ತಮ್, ಕುಮಾರಸ್ವಾಮಿ ಅವರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಭಾನುವಾರ 45 ವರ್ಷದ ರೈತ ಮಹಿಳೆ ಶೋಭಾ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು. ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ಹುಲ್ಲೇಮನೆ ಕುಂದೂರು ಮತ್ತು ಸುತ್ತಮುತ್ತಲ ಗ್ರಾಮದ ಸಾವಿರಾರು ಜನರು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಶಾಸಕ ಎಂ.ಪಿ ಕುಮಾರಸ್ವಾಮಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಬಿಗಿ ಪೊಲೀಸ್ ಭದ್ರತೆಯ ನಡುವೆ ಸೋಮವಾರ ಮಹಿಳೆಯ ಅಂತ್ಯಕ್ರಿಯೆ ನಡೆಸಲಾಗಿದೆ.
ಘಟನೆಯ ಕುರಿತು ಮಾತನಾಡಿರುವ ಶಾಸಕ ಕುಮಾರಸ್ವಾಮಿ, ತಮ್ಮ ಮೇಲೆ ಉದ್ದೇಶ ಪೂರ್ವಕವಾಗಿ ದಾಳಿ ನಡೆಸಲಾಗಿದೆ ಎಂದಿದ್ದಾರೆ. ಅಲ್ಲಿ ಎಲ್ಲರ ಕೈಯಲ್ಲೂ ದೊಣ್ಣೆ ಇತ್ತು. ಪ್ರತಿಭಟನೆ ನಡೆಸುತ್ತಿದ್ದ ಜನ ನನಗೆ ಚಪ್ಪಲಿಯಲ್ಲಿ ಹೊಡೆದರು ಎನ್ನುವ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಭದ್ರತೆಗೆ ಕೇವಲ 10 ಮಂದಿ ಪೊಲೀಸ್ ಸಿಬ್ಬಂದಿ ಇದ್ದರು ಎಂದು ಆರೋಪಿಸಿದ್ದಾರೆ.