ನೀರಾವರಿ ಯೋಜನೆಗೆ ಆಗ್ರಹಿಸಿ ಕಡೂರು, ಬೀರೂರಿನಲ್ಲಿ ಬಂದ್, ಪ್ರತಿಭಟನೆ
ಚಿಕ್ಕಮಗಳೂರು, ಜುಲೈ 9: ಹೆಬ್ಬೆ ತಿರುವು ಹಾಗೂ ಗೊಂದಿನಾಲೆ ಯೋಜನೆಗೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಅವಳಿ ಪಟ್ಟಣಗಳಾದ ಕಡೂರು ಹಾಗೂ ಬೀರೂರು ಪಟ್ಟಣಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಅಡಿಕೆ ಬೆಳೆಗಾರರ ಸಂಘ ಹಾಗೂ ವಿವಿಧ ಸಂಘಟನೆಗಳು ಕರೆದಿದ್ದ ಬಂದ್ ಗೆ ಮುಂಜಾನೆಯಿಂದಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಆಟೋ ಚಾಲಕರು ಸ್ವಯಂಕೃತವಾಗಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು.
ಜಲ ಸಮಸ್ಯೆ: ಕೇಂದ್ರದ ಮೊರೆ ಹೋದ ಶಾಶ್ವತ ನೀರಾವರಿ ಹೋರಾಟ ಸಮಿತಿ
ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದ ಪ್ರಮುಖ ಮುಖಂಡರು ಬಂದ್ ಗೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತಪಡಿಸಿದರು. ಬಂದ್ ಹಿನ್ನಲೆಯಲ್ಲಿ ವಿವಿಧ ಸಂಘಟನೆಯ ಸಾವಿರಾರು ಜನರು ನಗರದ ಈಶ್ಬರ ದೇವಸ್ಥಾನದಿಂದ ಕಡೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕಡೂರು ತಾಲ್ಲೂಕು ದಶಕಗಳಿಂದ ಬರದ ಪರಿಸ್ಥಿತಿ ಎದುರಿಸುತ್ತಿದ್ದು, ತಾಲ್ಲೂಕಿನ ಜನ ಹನಿ ನೀರಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಈ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.