ಚಿಕ್ಕಮಗಳೂರು, ಮಡಿಕೇರಿಯಲ್ಲಿ ಮುಂದುವರೆದ ಮಳೆ: 79 ಪ್ರದೇಶಗಳು ಪ್ರವಾಹ ಪೀಡಿತ
ಚಿಕ್ಕಮಗಳೂರು, ಆಗಸ್ಟ್ 13: ಮುಂದಿನ ಐದು ದಿನಗಳಲ್ಲಿ ಮುಂಗಾರು ಮತ್ತಷ್ಟು ಭೀಕರವಾಗಲಿದ್ದು ಮುಂಜಾಗ್ರತೆಯಾಗಿ ಮುಂದಿನ ಐದು ದಿನಗಳ ಕಾಲ ಚಿಕ್ಕಮಗಳೂರು, ಕೊಡಗಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದದು ಇದುವರೆಗೂ 50ಕ್ಕೂ ಹೆಚ್ಚುಮಂದಿಯನ್ನು ರಕ್ಷಿಸಲಾಗಿದೆ. ಗ್ರಾಮದಿಂದ ಹೊರಗೆ ಬರಲಾರದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ನಾಲ್ಕೈದು ದಿನಗಳಿಂದ ಸಂಪರ್ಕವನ್ನೇ ಕಳೆದುಕೊಂಡಿದ್ದಾರೆ. ಜನರನ್ನು ಸುರಕ್ಷಿತ ಜಾಗಗಳಿಗೆ ಕರೆತರಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.
ಚಿಕ್ಕಮಗಳೂರಿನಲ್ಲಿ ಮಹಾ ಮಳೆಗೆ ಒಟ್ಟು 8 ಮಂದಿ ಬಲಿ
ಕೊಡಗು ಜಿಲ್ಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಅಬ್ಬರ ತಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಕಡಿಮೆಯಾಗುತ್ತಾ ಬರುತ್ತಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ.
ಮಡಿಕೇರಿ ತಾಲೂಕಿನ 30, ವಿರಾಜಪೇಟೆ ತಾಲೂಕಿನಲ್ಲಿ 32, ಸೋಮವಾರಪೇಟೆ ತಾಲೂಕಿನಲ್ಲಿ 4, ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 5, ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಒಟ್ಟು 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗರುತಿಸಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು, ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಮಡಿಕೇರಿಯ ಜನ ಮತ್ತೆ ಮಳೆ ಹಾಗೂ ಭೂಕುಸಿತದ ಆತಂಕದಲ್ಲಿದ್ದಾರೆ.
ಇತ್ತ ಚಿಕ್ಕಮಗಳೂರಿನ 5 ತಾಲೂಕಿನ ಶಾಲಾ-ಕಾಲೇಜಿಗೂ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿ, ಮೂಡಿಗೆರೆಯಲ್ಲಿ ರಜೆ ಘೋಷಿಸಲಾಗಿದೆ. ಚಾಮರಾಜನಗರ ನೆರೆಪೀಡಿತ ಪ್ರದೇಶಗಳ ಶಾಲಾ ಮಕ್ಕಳಿಗೂ ರಜೆ ನೀಡಲಾಗಿದೆ.