ಮಲೆನಾಡಿನಲ್ಲಿ ಆರ್ಭಟಿಸಿದೆ ಮಳೆ; ಆವರಿಸಿದ ಭೀತಿ
ಚಿಕ್ಕಮಗಳೂರು, ಸೆಪ್ಟೆಂಬರ್ 5: ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮತ್ತೆ ಭಾರೀ ಮಳೆ ಶುರುವಾಗಿದೆ. ಮಳೆಯ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತವಾಗುವ ಲಕ್ಷಣಗಳು ಗೋಚರಿಸಿವೆ.
ಮೂಡಿಗೆರೆಯ ಊರುಬಗೆ, ಹೊಸಕೆರೆ, ಹೊಸಕೋಟೆ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ದುರ್ಗದಹಳ್ಳಿ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಮರಗಳು ಉರುಳುತ್ತಿದ್ದು, ಸಂಚಾರ ವ್ಯತ್ಯಯವಾಗುತ್ತಿದೆ.

ಮಲೆನಾಡು ಪ್ರದೇಶದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ಚಿಕ್ಕಮಗಳೂರಿನ ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ ವ್ಯಾಪ್ತಿಯಲ್ಲಿ ಅಧಿಕ ಮಳೆಯಾಗುತ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ಹೆಬ್ಬಾಳೆ ಸೇತುವೆ ಬಹುತೇಕ ಮುಳುಗಡೆ ಹಂತದಲ್ಲಿದೆ. ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಸಂಪರ್ಕ ಕಡಿತಗೊಳ್ಳಲಿದೆ. ಕೊಡಗು, ಚಿಕ್ಕಮಗಳೂರಿನಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯ ಮಾಹಿತಿ ರವಾನಿಸಲಾಗಿದೆ.
ಮತ್ತೆ ಶುರುವಾಗಿರುವ ಮಳೆಯಿಂದಾಗಿ ಮಲೆನಾಡಿನ ಜನ ಆತಂಕಗೊಂಡಿದ್ದಾರೆ.












Click it and Unblock the Notifications