ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಜೋರು ಮಳೆ
ಚಿಕ್ಕಮಗಳೂರು, ಆಗಸ್ಟ್ 04: ಮಲೆನಾಡು ಭಾಗದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಿನ್ನೆಯಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಧಿಕ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ಬಿರುಗಾಳಿ ಸಹಿತ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿನ್ನೆ ಚಾರ್ಮಾಡಿ ಘಾಟ್ ನಲ್ಲಿ ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿತ್ತು. ಇಂದು ಕೂಡ ಮಳೆ ಮುಂದುವರೆದಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ವರುಣನ ಅಬ್ಬರ ಜೋರಾಗಿದೆ. ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದೆ.

ಗಾಳಿ ಸಹಿತ ಮಳೆಯಿಂದಾಗಿ ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಕೆಲವೆಡೆ ಗಾಳಿ ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರುಳುತ್ತಿವೆ. ಜೊತೆಗೆ ಕಳೆದ ವರ್ಷ ಇದೇ ತಿಂಗಳಿನಲ್ಲಿ ಸಂಭವಿಸಿದ್ದ ಪ್ರವಾಹದ ನೆನಪನ್ನೂ ಈ ಮಳೆ ಮರುಕಳಿಸುವಂತೆ ಮಾಡಿದೆ.
ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿ: ಭದ್ರಾ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದು ಅಡಿ ಬಾಕಿ
ಇದೆ. ಜೊತೆಗೆ ಮೂಡಿಗೆರೆ ಸಮೀಪ ಮರವೊಂದು ರಸ್ತೆಗುರುಳಿ ಗಂಟೆಗೂ ಹೆಚ್ಚು ಕಾಲ ರಸ್ತೆ ಬಂದ್ ಆಗಿದೆ. ಬಾಳೂರು ಸಮೀಪ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.












Click it and Unblock the Notifications