ಹಾಸನದಲ್ಲಿ ಕೊರೊನಾ; ಪಕ್ಕದ ಚಿಕ್ಕಮಗಳೂರಿನ ರಸ್ತೆ ಬಂದ್
ಚಿಕ್ಕಮಗಳೂರು, ಮೇ 12: ಮೊನ್ನೆ ಶಿವಮೊಗ್ಗ, ಇಂದು ಹಾಸನದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದಂತೆ ಈ ಎರಡೂ ಜಿಲ್ಲೆಯ ಪಕ್ಕದ ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಆತಂಕ ಶುರುವಾಗಿದೆ.
ಇಂದು ಹಾಸನದಲ್ಲಿ ಐದು ಪಾಸಿಟಿವ್ ಕೇಸ್ ಕಾಣಿಸಿಕೊಳ್ಳುತ್ತಿದ್ದಂತೆ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹಾಸನಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಮತ್ತೆ ಬಂದ್ ಮಾಡುತ್ತಿದ್ದಾರೆ. ಇಂದು ಕೂಡ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಗ್ರಾಮೀಣ ಭಾಗದಿಂದ ಸಕಲೇಶಪುರ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಮರಗುಂದ-ದೇವಾಲಕೆರೆಯ ಜಪಾವತಿ ಸೇತುವೆ ಮೇಲೆ ಬೃಹತ್ ಬಂಡೆಕಲ್ಲುಗಳನ್ನು ರಸ್ತೆಗೆ ಅಡ್ಡಲಾಗಿ ಹಾಕಿ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.

ಈ ಮಾರ್ಗವಾಗಿ ಯಾರೂ ಹೋಗುವಂತಿಲ್ಲ, ಬರುವಂತಿಲ್ಲ. ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯಲ್ಲಿ ಒಂದೇ ಒಂದು ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ. ಗ್ರೀನ್ ಝೋನ್ ಕಾಫಿನಾಡು ಹಸಿರು ಜಿಲ್ಲೆಯಾಗೇ ಉಳಿದುಕೊಳ್ಳಲಿ ಎಂದು ಹಳ್ಳಿಗರು ಈ ನಿರ್ಧಾರಕ್ಕೆ ಮುಂದಾಗಿದ್ದಾರೆ. ಈಗಾಗಲೇ ಸರ್ಕಾರ ಕೂಡ ಲಾಕ್ ಡೌನ್ ಸಡಿಲಿಕೆ ಮಾಡಿರುವುದರಿಂದ ಹೊರಜಿಲ್ಲೆಗಳಿಗೆ ಹೋಗಿ ಬರುವವರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಾಗಿದೆ. ಹಾಗಾಗಿ, ಮಲೆನಾಡಿಗರೇ ಸ್ವಯಂ ಪ್ರೇರಿತರಾಗಿ ರಸ್ತೆಗಳನ್ನು ಬಂದ್ ಮಾಡಿ ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸಲು ಮುಂದಾಗಿದ್ದಾರೆ.












Click it and Unblock the Notifications