ರಸ್ತೆ ದುರಸ್ತಿಗೆ ನಿರ್ಲಕ್ಷ್ಯ: ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ
ಚಿಕ್ಕಮಗಳೂರು, ಜನವರಿ 24: ಎರಡು ತಾಲೂಕು ವ್ಯಾಪ್ತಿಗೆ ಸೇರಿರುವ ಹೊನ್ನಗುಂಡಿ, ಶಂಕರಕೂಡಿಗೆ, ಸೋಮೇಶ್ವರ್ ಖಾನ್ ಗ್ರಾಮಗಳ ಸಂಪರ್ಕ ರಸ್ತೆ ದುರಸ್ತಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಳೆದ 2 ದಶಕಗಳಿಂದ ನಿರ್ಲಕ್ಷ್ಯ ವಹಿಸಿದ್ದು, ರಸ್ತೆ ಅವ್ಯವಸ್ಥೆಯಿಂದಾಗಿ ಈ ಗ್ರಾಮಗಳ ಶಾಲಾ ಕಾಲೇಜು ಮಕ್ಕಳು ಮತ್ತು ಗ್ರಾಮದ ನಿವಾಸಿಗಳು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆ ದುರಸ್ತಿಗೆ ಅನುದಾನ ಮಂಜೂರಾಗಿದ್ದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸುಸಜ್ಜಿತ ರಸ್ತೆ ಮರೀಚಿಕೆಯಾಗಿದೆ ಎಂದು ಆರೋಪಿಸಿ ಕಳಸ ತಾಲೂಕು ವ್ಯಾಪ್ತಿಯ ಶಂಕರಕೂಡಿಗೆ ಹಾಗೂ ಅತ್ತಿಕೂಡಿಗೆ ಗ್ರಾಮಗಳ ನಿವಾಸಿಗಳು ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದರು.
ಕಳಸ ತಾಲೂಕು ವ್ಯಾಪ್ತಿಯಲ್ಲಿರುವ ಶಂಕರಕೂಡಿಗೆ ಗ್ರಾಮದಲ್ಲಿ 60ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಜನಾಂಗದ ಕುಟುಂಬಗಳಿದ್ದು, ಈ ಗ್ರಾಮದ ನಿವಾಸಿಗಳು ತಮ್ಮ ದೈನಂದಿನ ಅಗತ್ಯಗಳೂ ಸೇರಿದಂತೆ ಶಾಲೆ, ಕಾಲೇಜಿಗೆ ಸೋಮೇಶ್ವರಖಾನ್, ಹೊನ್ನಗುಂಡಿ ಗ್ರಾಮಗಳ ಸಂಪರ್ಕ ರಸ್ತೆ ಮೂಲಕ ಕಳಸ, ಬಸರೀಕಟ್ಟೆಗೆ ಬರಬೇಕಿದೆ. ಆದರೆ, ಈ ರಸ್ತೆ ಅವ್ಯವಸ್ಥೆಯಿಂದಾಗಿ ನಿವಾಸಿಗಳು ಭಾರೀ ಸಮಸ್ಯೆ ಎದುರಿಸುವಂತಾಗಿದೆ.
ರಸ್ತೆ ಅವ್ಯವಸ್ಥೆಯಿಂದಾಗಿ ಶಾಲಾ ಕಾಲೇಜು ಮಕ್ಕಳ ವ್ಯಾಸಂಗಕ್ಕೆ ತೊಂದರೆಯಾಗಿದ್ದು, ಬಾಡಿಗೆ ವಾಹನಗಳೂ ಗ್ರಾಮದತ್ತ ಬರಲು ಹಿಂದೇಟು ಹಾಕುತ್ತಿದ್ದಾರೆ. ರಸ್ತೆ ದುರಸ್ತಿಗೆ ಮನವಿ ಮಾಡಿದ್ದರಿಂದ ಈ ಹಿಂದೆ ಈ ರಸ್ತೆ ದುರಸ್ತಿಗೆ 70ಲಕ್ಷ ರೂಪಾಯಿ ಅನುದಾನವನ್ನು ಸರ್ಕಾರ ಮಂಜೂರು ಮಾಡಿದ್ದು, ಈ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವ ಸಲುವಾಗಿ ಗುತ್ತಿಗೆದಾರರೊಬ್ಬರು ರಸ್ತೆಯನ್ನು ಅಗೆದು ಹಾಕಿದ್ದಾರೆ. ಆದರೆ ವರ್ಷ ಕಳೆದರೂ ಕಾಂಕ್ರೀಟ್ ರಸ್ತೆ ಕಾಮಗಾರಿ ಮಾತ್ರ ಆರಂಭವಾಗಿಲ್ಲ ಎಂದು ಆರೋಪಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಸೇರಿದಂತೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಹಾಗೂ ಶೃಂಗೇರಿ ಶಾಸಕ ರಾಜೇಗೌಡ ಅವರಿಗೂ ಮನವಿ ಮಾಡಿದರೂ ಪ್ರಯೋಜವಾಗಿಲ್ಲ. ಈ ಕಾರಣಕ್ಕೆ ಮುಂದಿನ ವಿಧಾನಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡಲು ಗ್ರಾಮಸ್ಥರು ನಿರ್ಧರಿಸಿದ್ದು, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಕೂಡಲೇ ರಸ್ತೆ ದುರಸ್ತಿಗೆ ಕ್ರಮವಹಿಸಬೇಕು. ತಪ್ಪಿದಲ್ಲಿ ಯಾವುದೇ ರಾಜಕಾರಣಿಗಳು, ಅಧಿಕಾರಿಗಳನ್ನು ಗ್ರಾಮಕ್ಕೆ ಬಿಟ್ಟುಕೊಳ್ಳದೇ ಬಹಿಷ್ಕಾರ ಹಾಕಲಾಗುವುದು ಎಂದು ಇದೇ ವೇಳೆ ಮುಖಂಡರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ದಸಂಸ ಮುಖಂಡ ಸತೀಶ್ ಅಮೀನ್, ಗ್ರಾಮಸ್ಥರಾದ ರಂಜಿತ್, ಮಂಜುಳಾ, ಜ್ಯೋತಿ ಸೇರಿದಂತೆ ಹತ್ತಾರು ಗ್ರಾಮಸ್ಥರು ಭಾಗಿಯಾಗಿದ್ದಾರೆ.