ಭದ್ರಾ ಹುಲಿ ಯೋಜನೆ; ಚಿಕ್ಕಮಗಳೂರಿನ ಎನ್.ಆರ್.ಪುರ ಸ್ವಯಂ ಬಂದ್
ಚಿಕ್ಕಮಗಳೂರು, ಅಕ್ಟೋಬರ್ 15: ಭದ್ರಾ ಹುಲಿ ಯೋಜನೆಯ ಬಫರ್ ಝೋನ್, ಸೂಕ್ಷ್ಮ ಪರಿಸರ ವಲಯದ ವಿರುದ್ಧ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಜನರು ಹೋರಾಟಕ್ಕಿಳಿದಿದ್ದಾರೆ. ತಾಲೂಕಿನಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸ್ವಯಂ ಬಂದ್ ಘೋಷಿಸಿಕೊಂಡಿದ್ದಾರೆ.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸೇರಿ ಇಡೀ ತಾಲೂಕು ಸ್ತಬ್ಧವಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಮಲೆನಾಡು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್ ನಡೆಯುತ್ತಿದ್ದು, ಬಂದ್ ನಲ್ಲಿ ಸರ್ವ ಪಕ್ಷ, ವಿವಿಧ ಸಂಘಟನೆ ಹಾಗೂ ರೈತರು ಭಾಗಿಯಾಗಿದ್ದಾರೆ.
ಎನ್.ಆರ್ ಪುರ ಪಟ್ಟಣದಲ್ಲಿ ಬೃಹತ್ ಪಾದಯಾತ್ರೆಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೂ ಪಾದಯಾತ್ರೆ ನಡೆಯುತ್ತಿದ್ದು, ಇದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ. ಹಳ್ಳಿಹಳ್ಳಿಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.
ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಸೂಕ್ಷ್ಮ ಪರಿಸರ ವಲಯದಿಂದ ತಾಲೂಕಿನ ಬಹುತೇಕ ಭಾಗವೇ ಇಲ್ಲದಂತಾಗುತ್ತದೆ. ಹಾಗಾಗಿ ಈ ಯೋಜನೆಯನ್ನು ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿದೆ. ಪಕ್ಷಾತೀತವಾಗಿ ತಾಲೂಕಿನ ಎಲ್ಲಾ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಈ ಯೋಜನೆ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.

ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯದ ಹೆಸರಿನಲ್ಲಿ ತಾಲೂಕಿನ ಹತ್ತಾರು ಗ್ರಾಮಗಳು ಕಣ್ಮರೆಯಾಗಲಿವೆ. ಚಿಕ್ಕಮಗಳೂರು ಜಿಲ್ಲೆಯ 51 ಗ್ರಾಮಗಳು ಯೋಜನೆ ವ್ಯಾಪ್ತಿಗೆ ಬರಲಿದ್ದು, 8750 ಕುಟುಂಬ, 75ಕ್ಕೂ ಹೆಚ್ಚು ದೇವಸ್ಥಾನಗಳು, 3 ಚರ್ಚ್, 4 ಮಸೀದಿಗಳು ಈ ಯೋಜನೆ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಈ ಯೋಜನೆಗೆ ಭಾರೀ ವಿರೋಧ ವ್ಯಕ್ತಗೊಂಡಿದೆ.












Click it and Unblock the Notifications