ಚಿತ್ರದುರ್ಗಕ್ಕೆ ಭದ್ರಾ ನೀರು ಹರಿಯಲು ಇದ್ದ ತಡೆ ನಿವಾರಣೆ
ಚಿಕ್ಕಮಗಳೂರು, ಜೂನ್ 26 : ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿಗೆ ಇದ್ದ ಅಡೆ-ತಡೆ ನಿವಾರಣೆಯಾಗಿದೆ. ಅಜ್ಜಂಪುರ-ಶಿವಾನಿ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಮುಕ್ತಾಯವಾಗಿದೆ ಎಂದು ನೈಋತ್ಯ ರೈಲ್ವೆ ಘೋಷಣೆ ಮಾಡಿದೆ.
ಶುಕ್ರವಾರ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅಜ್ಜಂಪುರ-ಶಿವಾನಿ ರೈಲ್ವೆ ಅಂಡರ್ ಪಾಸ್ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಈ ಅಂಡರ್ ಪಾಸ್ ಕಾಮಗಾರಿ ಕಾರಣದಿಂದಾಗಿ ವಿಳಂಬವಾಗಿತ್ತು.
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯ ವ್ಯಾಪ್ತಿಗೆ ಬರುವ ಸುಮಾರು 5 ರಿಂದ 6 ಲಕ್ಷ ಎಕರೆ ಕೃಷಿ ಭೂಮಿಗೆ ನೀರಾವರಿ ಯೋಜನೆ ಕಲ್ಪಿಸುವ ಯೋಜನೆಯಾಗಿದೆ.
ಚಿತ್ರದುರ್ಗ ಸಂಸದ ಎ. ನಾರಾಯಣ ಸ್ವಾಮಿ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದರು.
ಸಚಿವರ ಸೂಚನೆಯಂತೆ ರೈಲ್ವೆ ಅಂಡರ್ ಪಾಸ್ ಕಾಮಗಾರಿಯನ್ನು ಕೇವಲ 30 ದಿನಗಳಲ್ಲಿ ಪೂರ್ಣಗೊಳಿಸಲಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ಕೆಲಸಕ್ಕೆ ಅವಕಾಶ ಮಾಡಿಕೊಡಲಾಗಿದೆ.
"ರೈತರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದು ನಮ್ಮ ಕರ್ತವ್ಯ. ನೀರಾವರಿ ಸೌಕರ್ಯ ಒದಗಿಸಿದರೆ ರೈತರಿಗೆ ಆನೆ ಬಲ ನೀಡಿದಂತಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡರೆ ರೈತರಿಗೆ ಸಹಾಯಕವಾಗಲಿದೆ" ಎಂದು ಸುರೇಶ್ ಅಂಗಡಿ ಹೇಳಿದರು.