ಮಳೆಯಿಂದ ಹಾನಿ; ಕೇಂದ್ರ ಪರಿಹಾರದ ಭರವಸೆ ಕೊಟ್ಟ ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು, ಜುಲೈ 12: ಕಾಫಿನಾಡಿನಲ್ಲಿ ಮಳೆಯ ಅಬ್ಬರ ಕೊಂಚಮಟ್ಟಿಗೆ ತಗ್ಗಿದ್ದು ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದಮಟ್ಟದಲ್ಲೇ ಹರಿಯುತ್ತಿದ್ದು, ಹಳ್ಳ ಕೊಳ್ಳಗಳಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದೆ.
ಮೂಡಿಗೆರೆ, ಕಳಸ, ಕೊಟ್ಟಿಗೆಹಾರ ಕುದುರೆಮುಖ, ಶೃಂಗೇರಿ, ಕೊಪ್ಪ, ನರಸಿಂಹರಾಜ ಪುರ ಸುತ್ತಮುತ್ತ ಮಂಗಳವಾರ ಬೆಳಗ್ಗೆ ಮಳೆ ಕೊಂಚ ಬಿಡುವು ನೀಡಿದ್ದು ಸಂಜೆ ಯಾಗುತ್ತಿದ್ದಂತೆ ಮಳೆಯಾಗುತ್ತಿದೆ. ಕೆಲವೆಡೆಗಳಲ್ಲಿ ಮರ ಮತ್ತು ವಿದ್ಯುತ್ ಕಂಬಗಳ ಧರೆಗುರುಳಿವೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ಹಳ್ಳದಾಟಲು ಗ್ರಾಮಸ್ಥರು ಪರದಾಡುತ್ತಿದ್ದಾರೆ.
ತಾಲ್ಲೂಕಿನ ಆವತಿ ಹೋಬಳಿ ಕಲ್ಲಳ್ಳಿಯಲ್ಲಿ ಹಳ್ಳ ಉಕ್ಕಿ ಹರಿಯುತ್ತಿದ್ದು ಜನರು ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟಲು ಹರಸಾಹಸ ಪಡುತ್ತಿದ್ದಾರೆ. ಕಲ್ಲಳ್ಳಿ, ಬೆರಣ ಗೋಡು, ಬಸರವಳ್ಳಿ ಗ್ರಾಮದ ಸಂಪರ್ಕ ಕಡಿತಗೊಂಡಿದೆ.
ಭಾರೀ ಗಾಳಿ ಮಳೆಗೆ ತೋಟಗಳಲ್ಲಿನ ಮರಗಳು ಉರುಳಿ ಬಿದ್ದಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕಾರ್ಮಿಕರು ಕೆಲಸಕ್ಕೆ ತೆರಳಲು ಸಾಧ್ಯ ವಾಗದೆ ಮನೆಯಲ್ಲೇ ಕುಳಿತು ಕಾಲ ಕಳೆಯುವಂತಾಗಿದೆ.

ಭಾರೀ ಮಳೆಗೆ ಕೃಷಿ ಚಟುವಟಿಕೆ ಸ್ಥಗಿತ
ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲೇ ಹರಿಯುತ್ತಿವೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಭಾರೀ ಮಳೆಗೆ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಮನೆಗಳು ಕುಸಿದಿವೆ. ಮರ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ವ್ಯತ್ಯಾಯಗೊಂಡಿದೆ. ರಸ್ತೆಗಳ ಹಾನಿಯಾಗಿದ್ದು ಸಂಪರ್ಕ ಕಡಿತಗೊಂಡಿದೆ. ಒಟ್ಟಾರೆ ಭಾರೀ ಮಳೆಗೆ ಜನರು ತತ್ತರಿಸಿದ್ದಾರೆ.

9 ದಿನವಾದರೂ ಸಿಗದ ಬಾಲಕಿ ಮೃತದೇಹ
ಚಿಕ್ಕಮಗಳೂರು ತಾಲ್ಲೂಕಿನ ಹೊಸಪೇಟೆಯ ತೋಟದಹಳ್ಳದಲ್ಲಿ ಕೊಚ್ಚಿಹೋಗಿದ್ದ 1ನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಪತ್ತೆ ಕಾರ್ಯ 9ನೇ ದಿನಕ್ಕೆ ಕಾಲಿಟ್ಟಿದೆ. ಬಾಲಕಿ ಸುಳಿವು ಸಿಕ್ಕಿಲ್ಲ. ಎಸ್ಡಿಆರ್ಎಫ್, ಅಗ್ನಿಶಾಮಕದಳ, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡಗಳು ಹಾಗೂ ಸ್ಥಳೀಯವರು ಶೋಧಕಾರ್ಯವನ್ನು ಮುಂದುವರೆಸಿದ್ದಾರೆ.
ಕಾಫಿತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಹರಪನಹಳ್ಳಿ ಮೂಲಕ ಯು ವತಿ ಪ್ರೀಯಾಂಕ ಮರಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ಉಂಡೇ ದಾಸರಹಳ್ಳಿ ಸಮೀಪ ಹರಿಯುವ ಹಳ್ಳದಲ್ಲಿ ಚಿಂದಿ ಆಯಾಲು ಹೋದ 40 ವರ್ಷದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾರೆಂದು ಶಂಕಿಸಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸೇರಿದಂತೆ ಅಧಿಕಾರಿಗಳ ತಂಡ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಶೋಭ ಕರಂದ್ಲಾಜೆ ಭೇಟಿ
ಮಂಗಳವಾರ ಅಧಿಕಾರಿಗಳ ತಂಡದೊಂದಿಗೆ ಮಲೆನಾಡು ಭಾಗದ ಅತೀವೃಷ್ಟಿ ಪ್ರದೇಶಗಳಿಗೆ ಭೇಟಿನೀಡಿ ಸಚಿವೆ ಶೋಭಾ ಕರಂದ್ಲಾಜೆ ಪರಿಶೀಲನೆ ನಡೆಸಿದರು. ಗುಡ್ಡೇತೋಟ ಗ್ರಾಮದಲ್ಲಿ ಅತೀ ಹೆಚ್ಚು ಮಳೆಯಿಂದ ಗುಡ್ಡಕುಸಿತದಿಂದ ಹಾನಿಯಾಗಿರುವ ಮನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕು. ಗ್ರಾಮದಲ್ಲಿ 60 ಎಕರೆ ಖಾಲಿ ಜಾಗ ಗುರುತಿಸಿದ್ದು ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೇ ಕಾರ್ಯ ನಡೆಸಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಕೇಂದ್ರದಿಂದಲೂ ಪರಿಹಾರಕ್ಕೆ ಪ್ರಯತ್ನ
ಚಿಕ್ಕಮಗಳೂರು, ಕೊಡಗು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕಳೆದ 2-3 ವರ್ಷಗಳಿಂದ ಭಾರೀ ಮಳೆಯಾಗುತ್ತಿದೆ. ಗುಡ್ಡಕುಸಿತ, ಸೇತುವೆ ಹಾನಿ, ರಸ್ತೆ ಸಂಪರ್ಕ ಕಡಿತ ಮನೆ ಹಾನಿ ಅಪಾರ ಹಾನಿಯಾಗಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಪ್ರಾಣ ಹಾನಿ ಹಾಗೂ ಮನೆಹಾನಿ ಕಡಿಮೆಯಾಗಿದೆ.
ಎನ್ಡಿಆರ್ಎಫ್ ಹಾಗೂ ಎಸ್ಡಿ ಆರ್ಎಫ್ನಲ್ಲಿ ಸಂತ್ರಸ್ಥರಿಗೆ ಪರಿಹಾರ ಒದಗಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತಿವೃಷ್ಟಿ ಹಾನಿ ಪ್ರದೇಶಗಳಿಗೆ ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದಿಂದ ಪರಿಹಾರ ಕಾರ್ಯ ಕೈ ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಅಧಿಕಾರಿಗಳು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಬೆಳೆಹಾನಿಯ ಬಗ್ಗೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದರೆ ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳಲಾಗುತ್ತದೆ ಎಂದ ಅವರು, ಕೇಂದ್ರ ಸರಕಾರದಿಂದ ಮಳೆಹಾನಿಗೆ ಪರಿಹಾರ ದೊರಕಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.












Click it and Unblock the Notifications