ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಒಂದೇ ಹಂತದ ಗ್ರಾ.ಪಂ. ಚುನಾವಣೆ
ಚಿಕ್ಕಮಗಳೂರು, ಡಿಸೆಂಬರ್ 06: ದತ್ತಜಯಂತಿಯ ಅಂಗವಾಗಿ ಎರಡು ಹಂತದಲ್ಲಿ ನಡೆಯಬೇಕಿದ್ದ ಚಿಕ್ಕಮಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಡಿಸೆಂಬರ್ 22 ಹಾಗೂ 27ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿರುವುದಾಗಿ ಆಯೋಗ ದಿನಾಂಕ ನಿಗದಿ ಮಾಡಿತ್ತು. ಡಿ.22ರಂದು ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ ಹಾಗೂ ಕೊಪ್ಪ ತಾಲೂಕುಗಳಲ್ಲಿ ಹಾಗೂ 27ರಂದು ಎರಡನೇ ಹಂತದ ಚುನಾವಣೆಯಲ್ಲಿ ಕಡೂರು, ತರೀಕೆರೆ, ಎನ್.ಆರ್.ಪುರ ಹಾಗೂ ಅಜ್ಜಂಪುರ ತಾಲೂಕುಗಳಲ್ಲಿ ಚುನಾವಣೆ ನಡೆಯಬೇಕಿತ್ತು.
ಆದರೆ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಡಿ.27 ರಿಂದ 29ರವರೆಗೆ ದತ್ತಜಯಂತಿ ಅಭಿಯಾನ ನಡೆಯಲಿದ್ದು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಒಂದೇ ಹಂತದಲ್ಲಿ ಚುನಾವಣೆ ನಡೆಸಿದರೆ ಸೂಕ್ತ ಎಂದು ಮನವಿ ಮಾಡಿಕೊಂಡಿದ್ದರು.

ಕಾಫಿನಾಡು ಸೂಕ್ಷ್ಮ ಜಿಲ್ಲೆಯಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕಾನೂನು ಪಾಲನೆಗೆ ಪೊಲೀಸರು ಸೇರಿದಂತೆ ಇತರೆ ಅಧಿಕಾರಿಗಳ ಸೇವೆಯೂ ಅವಶ್ಯಕವಾಗಿದ್ದು, ಚುನಾವಣೆಯನ್ನು ಎರಡು ಹಂತದಲ್ಲಿ ಮಾಡಿದ್ದಲ್ಲಿ ಬಂದೋಬಸ್ತ್ ಮಾಡಲು ಕಷ್ಟಸಾಧ್ಯವಾಗುತ್ತದೆ. ಬೇರೆ ಜಿಲ್ಲೆಯಲ್ಲೂ ಇದೇ ಸಂದರ್ಭ ಚುನಾವಣೆ ನಡೆಯುತ್ತಿದ್ದು ಬೇರೆ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲು ಸಾಧ್ಯವಾಗವುದಿಲ್ಲ. ಆದ್ದರಿಂದ ಒಂದೇ ಹಂತದಲ್ಲಿ ಚುನಾವಣೆ ನಡೆಸಿದ್ದೇ ಆದಲ್ಲಿ ಸಿಬ್ಬಂದಿ ವ್ಯವಸ್ಥೆ ಮಾಡಿಕೊಳ್ಳಬಹುದು ಎಂದು ಅನುಮತಿ ಕೋರಿದ್ದರು.
ಜಿಲ್ಲಾಧಿಕಾರಿಗಳ ಮನವಿಯನ್ನು ಅವಲೋಕಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ರಂಜಿತಾ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಹಸಿರು ನಿಶಾನೆ ತೋರಿದ್ದಾರೆ.












Click it and Unblock the Notifications