ನೆಚ್ಚಿನ ತೋಟದ ಮನೆಯಲ್ಲಿಯೇ ಎಸ್. ಎಲ್. ಧರ್ಮೇಗೌಡರ ಅಂತ್ಯಕ್ರಿಯೆ
ಚಿಕ್ಕಮಗಳೂರು, ಡಿಸೆಂಬರ್ 29; ವಿಧಾನ ಪರಿಷತ್ನ ಉಪ ಸಭಾಪತಿ ಎಸ್. ಎಲ್. ಧರ್ಮೇಗೌಡ ಅವರ ಅಂತ್ಯಕ್ರಿಯೆ ಅವರ ನೆಚ್ಚಿನ ತೋಟದ ಮನೆಯಲ್ಲಿ ನಡೆಯಲಿದೆ. ಸಖರಾಯಪಟ್ಟಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Recommended Video
ಎಸ್. ಎಲ್. ಧರ್ಮೇಗೌಡ (65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಬಳಿಕ ಕಡೂರಿನ ಸಖರಾಯಪಟ್ಟಣಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸರಪನಹಳ್ಳಿಯಲ್ಲಿರುವ ಎಸ್. ಎಲ್. ಧರ್ಮೇಗೌಡರ ನೆಚ್ಚಿನ ತೋಟದ ಮನೆಯಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕಾಗಿ ತೋಟದ ಮನೆಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ, ಪೊಲೀಸ್ ಬಂದೋಬಸ್ತ್ ಸಹ ಮಾಡಲಾಗಿದೆ.

ಅಂತಿಮ ದರ್ಶನ; ಎಸ್. ಎಲ್. ಧರ್ಮೇಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಖರಾಯಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಹಲವಾರು ಗಣ್ಯರು ಅಂತಿಮ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಪೊಲೀಸ್ ಬಂದೋಬಸ್ತ್ ಸಹ ಮಾಡಲಾಗುತ್ತಿದೆ.

ಅಂತಿಮ ದರ್ಶನದ ಬಳಿಕ ಮಂಗಳವಾರ ಸಂಜೆ ವೇಳೆಗೆ ಗ್ರೀನ್ ಹೌಸ್ ಫಾರಂ ಎಂಬ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications