SSLC Result: ಚಿಕ್ಕಮಗಳೂರಿಗೆ 17ನೇ ಸ್ಥಾನ; ಜಿಲ್ಲೆಯ 7 ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್
ಚಿಕ್ಕಮಗಳೂರು, ಆಗಸ್ಟ್ 10: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟವಾಗಿದ್ದು, ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ 17ನೇ ಸ್ಥಾನ ಪಡೆದುಕೊಂಡಿದೆ.
ಕಳೆದ ವರ್ಷ ಕೊರೊನಾ ಸೋಂಕಿನ ನಡುವೆಯೂ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯು 21ನೇ ಸ್ಥಾನ ಪಡೆದುಕೊಂಡಿತ್ತು. ಈ ವರ್ಷ 17ನೇ ಸ್ಥಾನ ಪಡೆದುಕೊಳ್ಳುವ ಮೂಲಕ ನಾಲ್ಕು ಸ್ಥಾನ ಮೇಲೇರಿದೆ. ಬೆಂಗಳೂರು ಉತ್ತರ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಬೆಂಗಳೂರು ದಕ್ಷಿಣ ದ್ವಿತೀಯ, ರಾಮನಗರ ತೃತೀಯ ಸ್ಥಾನ, ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದು ಪಡಿಸಿದ್ದವು. ಆದರೆ ಕರ್ನಾಟಕದಲ್ಲಿ ಈ ಹಿಂದೆ ಶಿಕ್ಷಣ ಸಚಿವರಾಗಿದ್ದ ಎಸ್. ಸುರೇಶ್ ಕುಮಾರ್ ಬಹುಆಯ್ಕೆ ಪ್ರಶ್ನೆಗಳನ್ನೊಳಗೊಂಡ ಪ್ರಶ್ನೆಪತ್ರಿಕೆಯೊಂದಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು.

ರಾಜ್ಯದಲ್ಲಿ 157 ವಿದ್ಯಾರ್ಥಿಗಳು 625ಕ್ಕೆ 625 ಅಂಕ
ರಾಜ್ಯದಲ್ಲಿ 157 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದುಕೊಂಡರೆ, ಚಿಕ್ಕಮಗಳೂರು ಜಿಲ್ಲೆಯ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಳಸ ಪಟ್ಟಣದ ಜಗದೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಕೆ.ವಿ. ಆದ್ಯ ಮತ್ತು ಡಿ.ಎ. ಪವನ್ ಶೆಣೈ, ಚಿಕ್ಕಮಗಳೂರು ನಗರದ ಸೆಂಟ್ ಮೇರಿಸ್ ಶಾಲೆಯ ಗಣ್ಯ ವಿ. ಕರಬಾರ, ತೇಜಶ್ರೀ, ಚಿಕ್ಕಮಗಳೂರು ಜ್ಯೋತಿನಗರದ ಸಂತ ಜೋಸೆಫ್ ಬಾಲಕರ ಶಾಲೆಯ ಎಚ್.ಎಂ. ಹರ್ಷಿತ್, ಬಾಳೆಹೊನ್ನೂರು ಸಮೀಪದ ಕಡಬಗೆರೆಯ ಜ್ಯೋತಿರ್ವಿಕಾಸ್ ಶಾಲೆಯ ಎನ್.ಆರ್. ರಂಜಿತಾ 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

ಕೋವಿಡ್ ಸೆಂಟರ್ನಲ್ಲಿ ಪರೀಕ್ಷೆ ಬರೆಸಲಾಗಿತ್ತು
ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಪರೀಕ್ಷೆಗಳು ಸುಗಮ ನಡೆಯಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕಮಗಳೂರು ವಿಭಾಗ, ಪೊಲೀಸ್, ಆರೋಗ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಶಿಕ್ಷಣ ಇಲಾಖೆಯೊಂದಿಗೆ ಸಹಕರಿಸಿದ್ದರು. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಐದು ಮಂದಿ ವಿದ್ಯಾರ್ಥಿಗಳನ್ನು ಕೋವಿಡ್ ಸೆಂಟರ್ನಲ್ಲಿ ವೈದ್ಯರ ನೇತೃತ್ವದಲ್ಲಿ ಮತ್ತು ತರೀಕೆರೆ ತಾಲೂಕಿನ ಓರ್ವ ವಿದ್ಯಾರ್ಥಿ ಶೀತ, ಕೆಮ್ಮು ಕಾಣಿಸಿಕೊಂಡಿದ್ದರಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿತ್ತು.

ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣ
ಪರೀಕ್ಷೆಗೆ ಮುನ್ನ ಇಬ್ಬರು ವಿದ್ಯಾರ್ಥಿಗಳು ಕಾಲಿಗೆ ಪೆಟ್ಟುಮಾಡಿಕೊಂಡಿದ್ದು, ಅವರುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ, ಮುಖ್ಯೋಪಾಧ್ಯಾಯರು, ಗ್ರಾಮಸ್ಥರ ಸಹಾಯದಿಂದ ಆಟೋದಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆತರುವ ಮೂಲಕ ಪರೀಕ್ಷೆಯನ್ನು ಎದುರಿಸಲು ಸಹಕರಿಸಿದ್ದರು. ಹಾಗಾಗಿ ಪರೀಕ್ಷೆ ಬರೆಯದವರನ್ನು ಹೊರತು ಪಡಿಸಿದರೆ ಉಳಿದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾರ್ವಜನಿಕ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಶಪ್ಪ, "ಉತ್ತಮ ಫಲಿತಾಂಶಕ್ಕೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳು ಸಹಕರಿಸಿದ್ದಾರೆ, ಅವರುಗಳಿಗೆಲ್ಲ ಧನ್ಯವಾದಗಳನ್ನು ಅರ್ಪಿಸುತ್ತೇನೆ,'' ಎಂದರು.

ಶಾಲೆ ಪ್ರಾರಂಭದ ಕುರಿತು ಶಿಕ್ಷಣ ಸಚಿವರ ಹೇಳಿಕೆ
ಇನ್ನು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರಾರಂಭದ ಕುರಿತು ಮಾತನಾಡಿದ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, "ಆಗಸ್ಟ್ ತಿಂಗಳ ಕೊನೆ ವಾರದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಗಡಿ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಶಾಲೆ ಪ್ರಾರಂಭಿಸಲಾಗುತ್ತದೆ,'' ಎಂದು ತಿಳಿಸಿದರು.
"ಶಾಲೆ ಆರಂಭವಾಗುವುದು ವಿಳಂಬವಾದರೆ ಮತ್ತೆ ವಿದ್ಯಾಗಮ ಪ್ರಾರಂಭಿಸುತ್ತೇವೆ ಎಂದು ಹೇಳಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಆಗಸ್ಟ್ 23ರಿಂದ 9, 10, 11, 12ನೇ ತರಗತಿ ಆರಂಭವಾಗಲಿದೆ. ಇದೇ ರೀತಿ ಪ್ರಾಥಮಿಕ ತರಗತಿಗಳನ್ನೂ ಆರಂಭಿಸುವ ಕುರಿತು ಸಹ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ,'' ಎಂದು ಮಾಹಿತಿ ನೀಡಿದರು.
Recommended Video

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವನ್ನು ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದರು. ಇಂದು (ಆಗಸ್ಟ್ 9) 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಿದರು.
"ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಮೂಲಕ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ,'' ಎಂದು ಹೇಳಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications