ಕಾಂಗ್ರೆಸ್ಗೆ ಮರಳಿದ ತರೀಕೆರೆ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ
ಚಿಕ್ಕಮಗಳೂರು, ಅಕ್ಟೋಬರ್ 09 : ತರೀಕೆರೆ ಕ್ಷೇತ್ರದ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ ಅವರು ಕಾಂಗ್ರೆಸ್ ಸೇರಿದ್ದಾರೆ. 2018ರ ಚುನಾವಣೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 33,253 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಮಾಜಿ ಶಾಸಕರಾದ ಜಿ.ಎಚ್.ಶ್ರೀನಿವಾಸ ಮತ್ತು ಟಿ.ಎಚ್.ಶಿವಶಂಕರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾದರು.
ಸಮಾರಂಭದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಎಲ್ಲರೂ ಒಗ್ಗಟ್ಟಾಗುತ್ತಿದ್ದೇವೆ. ಪಕ್ಷದ ಬಗ್ಗೆ ಒಲವಿರುವ ಎಲ್ಲರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ತರೀಕೆರೆಯಲ್ಲಿ ಶ್ರೀನಿವಾಸ ಅವರ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ' ಎಂದರು.
'2013ರ ಚುನಾವಣೆಯಲ್ಲಿ ಶ್ರೀನವಾಸ ಅವರು ನಮ್ಮ ಪಕ್ಷದಿಂದಲೇ ಆಯ್ಕೆಯಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಅವರು ಪಕ್ಷಕ್ಕೆ ವಾಪಸ್ ಆಗುತ್ತಿದ್ದು, ಅವರನ್ನು ಸ್ವಾಗತಿಸುತ್ತೇವೆ' ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಬಿಟ್ಟಿದ್ದರು
ಜಿ.ಎಚ್.ಶ್ರೀನಿವಾಸ ಅವರು 2013ರ ವಿಧಾನಸಭೆ ಚುನಾವಣೆಯಲ್ಲಿ ತರೀಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ 35,817 ಮತಗಳನ್ನು ಪಡೆದು ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಎಸ್.ಎಂ.ನಾಗರಾಜು ಅವರಿಗೆ ಟಿಕೆಟ್ ನೀಡಿತ್ತು. ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅವರು ಪಕ್ಷವನ್ನು ಬಿಟ್ಟು ಜೆಡಿಎಸ್ ಸೇರಿದ್ದರು.

ಜೆಡಿಎಸ್ ಟಿಕೆಟ್ ಕೈ ತಪ್ಪಿತ್ತು
ಕಾಂಗ್ರೆಸ್ ಟಿಕೆಟ್ ಸಿಗದ ಶ್ರೀನಿವಾಸ ಅವರು ಜೆಡಿಎಸ್ ಪಕ್ಷ ಸೇರಿದ್ದರು. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದರು. ಆದರೆ, ಜೆಡಿಎಸ್ ಪಕ್ಷದ ಸ್ಥಳೀಯ ಕಾರ್ಯಕರ್ತರು ಶ್ರೀನಿವಾಸ ಸೇರ್ಪಡೆ ವಿರೋಧಿಸಿದ್ದರು. ಅಚ್ಚರಿ ಎಂಬಂತೆ ಪಕ್ಷ ಕೊನೆ ಕ್ಷಣದಲ್ಲಿ ಶ್ರೀನಿವಾಸ ಅವರಿಗೆ ಟಿಕೆಟ್ ನೀಡದೆ ಟಿ.ಎಚ್.ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡಿತ್ತು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ
ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಜಿ.ಎಚ್.ಶ್ರೀನಿವಾಸ ಅವರು 2018ರ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಬಿಜೆಪಿಯ ಡಿ.ಎಸ್.ಸುರೇಶ್ ವಿರುದ್ಧ ಸೋಲು ಅನುಭವಿಸಿದರು.
ಸುರೇಶ್ 44940 ಮತಗಳನ್ನು ಪಡೆದರೆ, ಜಿ.ಎಚ್.ಶ್ರೀನಿವಾಸ ಅವರು 33253 ಮತಗಳನ್ನು ಪಡೆದರು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ಚುನಾವಣೆಯಲ್ಲಿ 2ನೇ ಸ್ಥಾನಗಳಿಸಿದರು.

ಎಲ್ಲರೂ ಒಗ್ಗಟ್ಟಾಗಿದ್ದೇವೆ
ಜಿ.ಎಚ್.ಶ್ರೀನಿವಾಸ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ಈಗ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಕೆಲವು ಕಾರಣದಿಂದ ಜಿ.ಎಚ್.ಶ್ರೀನಿವಾಸ ಅವರಿಗೆ ಟಿಕೆಟ್ ನೀಡಲು ಸಾಧ್ಯವಾಗಿಲ್ಲ. ಒಟ್ಟಾಗಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ' ಎಂದರು.












Click it and Unblock the Notifications