ಮಲೆನಾಡಿನ ಭಾಗದಲ್ಲಿ ಮತ್ತೆ ಧಾರಾಕಾರ ಮಳೆ: ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಚಿಕ್ಕಮಗಳೂರು, ಸೆಪ್ಟೆಂಬರ್ 20: ಮಲೆನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ಎರಡು ಅಡಿಯಷ್ಟು ನೀರು ಹರಿಯುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ ತಾಲ್ಲೂಕಿನಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಕಳಸ ಸುತ್ತಮುತ್ತ ಭಾರೀ ಮಳೆ ಸುರಿದಿದೆ.
ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮತ್ತೆ ಜಲಾವೃತಗೊಂಡಿದ್ದು, ಕಳೆದ ಆಗಸ್ಟ್ ನಲ್ಲಿ ಹಲವು ಬಾರಿ ಈ ಸೇತುವೆ ಮಳುಗಡೆಯಾಗಿದ್ದನ್ನು ನೆನಪಿಸಿಕೊಳ್ಳಬಹುದು.

ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಅಲ್ಲದೆ ಭದ್ರಾ ನದಿ ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿದೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗ ಭಾಗದಲ್ಲಿ ವರ್ಷಧಾರೆ ಮುಂದುವರೆದಿದೆ. ತುಂಗಾ ನದಿ ಕೂಡಾ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಶೃಂಗೇರಿ ಮಠದ ಗಾಂಧಿ ಮೈದಾನ ಪ್ರವಾಹದ ಭೀತಿಯಲ್ಲಿದೆ.
ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಬಾಳೂರು, ಚಾರ್ಮಾಡಿ ಘಾಟ್ ನಲ್ಲಿ ಧಾರಾಕಾರವಾಗಿ ಗಾಳಿ, ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಕಲ್ಲತ್ತಿಗಿರಿ ಜಲಪಾತ ಉಕ್ಕಿ ಹರಿಯುತ್ತಿದೆ
ಮಳೆಯ ಆರ್ಭಟಕ್ಕೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ಕ್ವಾಲಿಸ್ ಕಾರು ಪಲ್ಟಿಯಾಗಿದ್ದು, ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಹೋಗುವ ವೇಳೆ ಅವಘಡ ಸಂಭವಿಸಿದೆ. ಏಳು ಮಂದಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತರೀಕೆರೆ ತಾಲೂಕಿನಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಕಲ್ಲತ್ತಿಗಿರಿ ಜಲಪಾತ ಉಕ್ಕಿ ಹರಿಯುತ್ತಿದೆ. ಕೆಮ್ಮಣ್ಣಗುಂಡಿ ಭಾಗದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದೆ.

ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿಯುವ ಭೀತಿ
ಭಾರಿ ಮಳೆಯಿಂದ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದ್ದರೂ, ಪ್ರವಾಸಿಗರು ಜಲಪಾತಗಳ ಸುಂದರ ನೋಟವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್, ಆಗಸ್ಟ್ ತಿಂಗಳಲ್ಲಿ ಐದಾರು ಕಡೆ ಗುಡ್ಡ ಕುಸಿತವಾಗಿತ್ತು.
Recommended Video

ಮಳೆ ಮುನ್ಸೂಚನೆ
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಚದುರಿದಂತೆ ಅಲ್ಲಲ್ಲಿ ಅಧಿಕದಿಂದ ಅತ್ಯಧಿಕ ಭಾರಿ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ.












Click it and Unblock the Notifications