ಚಿಕ್ಕಮಗಳೂರು ಜಿಲ್ಲೆಗೆ ಮೊದಲ ಬಾರಿಗೆ ಮಹಿಳಾ ಎಸ್ಪಿ ನೇಮಕ!
ಚಿಕ್ಕಮಗಳೂರು, ಆಗಸ್ಟ್ 9 : ಚಿಕ್ಕಮಗಳೂರು ಜಿಲ್ಲೆಯ ನೂತನ ಹಾಗೂ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ. ಎಚ್. ಅಕ್ಷಯ್ ರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶನಿವಾರ ಆದೇಶಿಸಿದ್ದು, ಬೆಂಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಅವರನ್ನು ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿಯನ್ನಾಗಿ ನೇಮಿಸಿ ವರ್ಗಾವಣೆ ಮಾಡಿತ್ತು.
ಅದರಂತೆ ಎಸ್ಪಿ ಕಚೇರಿಗೆ ಆಗಮಿಸಿದ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ರನ್ನು ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಗೌರವಗಳೊಂದಿಗೆ ಬರ ಮಾಡಿಕೊಂಡರು. ನಂತರ ನಿರ್ಗಮಿತ ಪೊಲೀಸ್ ಅಧಿಕಾರಿ ಎಂ. ಎಚ್. ಅಕ್ಷಯ್ ಅವರಿಂದ ಉಮಾ ಪ್ರಶಾಂತ್ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಈ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಎಚ್. ಅಕ್ಷಯ್ ಅವರು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ. ಅವರಂತೆ ತಾನೂ ಉತ್ತಮವಾಗಿ ಕೆಲಸ ಮಾಡುವುದಾಗಿ ತಿಳಿಸಿದ ಅವರು, ಜಿಲ್ಲಾ ಪೊಲೀಸ್ ಇಲಾಖೆ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಒಟ್ಟುಗೂಡಿ ಕಾರ್ಯನಿರ್ವಹಿಸುತ್ತೇನೆ. ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ಮಾಡುವುದಾಗಿ" ತಿಳಿಸಿದರು.
"ಈ ಹಿಂದೆ ಕುಣಿಗಲ್, ಕಾರವಾರ, ಮಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದೇನೆ. ಮಹಿಳೆಯರ ಸಮಸ್ಯೆ ಸೇರಿದಂತೆ ಎಲ್ಲಾ ವರ್ಗದ ಜನರ ಸಮಸ್ಯೆಗಳಿಗೆ ಪೊಲೀಸ್ ಇಲಾಖೆ ತಕ್ಷಣ ಸ್ಪಂದಿಸಲಿದೆ. ಜಿಲ್ಲೆಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರ ಭೇಟಿ ನೀಡುತ್ತಿದ್ದು, ಪ್ರವಾಸಿಗರಿಂದ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುಲಾಗುತ್ತದೆ. ಜನರ ಸಮಸ್ಯೆಗಳಿಗೆಗ ಶೀಘ್ರವೇ ಸ್ಪಂಧಿಸಿ ಬಗೆಹರಿಸಲಾಗುವುದು" ಎಂದರು.
ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಎಚ್. ಅಕ್ಷಯ್ ಅವರು ಮಾತನಾಡಿ, "2 ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದು, ಕೋವಿಡ್ ಸಂದರ್ಭವನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕಾರದಿಂದ ಅತ್ಯಂತ ಸಮರ್ಥವಾಗಿ ಎದುರಿಸಿದ್ದೇವೆ. ದತ್ತಜಯಂತಿ ಸಂದರ್ಭ ಸೇರಿದಂತೆ ಇತರ ಸಂದರ್ಭಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಾರೆ" ಎಂದು ಹೇಳಿದರು.

"ಜಿಲ್ಲೆ ಬಯಲುಸೀಮೆ, ಮಲೆನಾಡು ಭಾಗವನ್ನು ಒಳಗೊಂಡಿದ್ದು, ಉತ್ತಮ ಅನುಭವವನ್ನು ನೀಡಿದೆ. ಜಿಲ್ಲೆಯಲ್ಲಿ 2 ವರ್ಷಗಳ ಕಾಲ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಸಂತೋಷ ತಂದಿದೆ. ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರಿಗೆ ಜಿಲ್ಲೆಯ ಜನತೆ ಸಹಕಾರ ನೀಡುವಂತೆ" ಮನವಿ ಮಾಡಿದರು.












Click it and Unblock the Notifications