ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ಮೂರು ಕೆಪಿಎಸ್ ಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ ಭರವಸೆ
ಚಿಕ್ಕಮಗಳೂರು, ಸೆಪ್ಟೆಂಬರ್, 28: ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ ಮೂರು ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಗುಂಪು ಆಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಿಯಾಗಿ ಓದಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಾವು ಈ ಬಾರಿ ಒಂದೇ ಕೆಪಿಎಸ್ ಶಾಲೆಗಳನ್ನು ತೆರೆಯಲು ನಿರ್ಧಾರ ಮಾಡಿದ್ದೇವೆ.

ಇದರಿಂದ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚುತ್ತದೆ. ಜೊತೆಗೆ ಶಿಕ್ಷಕರ ಕೊರತೆ ನೀಗುತ್ತದೆ ಎಂದು ತಿಳಿಸಿದರು. ವರ್ಷದಲ್ಲಿ ಮೂರು ಬಾರಿ ಬೋರ್ಡ್ ಪರೀಕ್ಷೆ ನಡೆಸಿರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ತಾವು ಒಂದೇ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಪರೀಕ್ಷೆ ನಡೆಸಿದ್ದರಿಂದ ಫೇಲಾದ ವಿದ್ಯಾರ್ಥಿಗಳಿಗೆ ಒಂದು ವರ್ಷ ವ್ಯರ್ಥ ಆಗುವುದು ತಪ್ಪಿತು. ರಾಜ್ಯದ 42 ಸಾವಿರ ವಿದ್ಯಾರ್ಥಿಗಳಿಗೆ ಆ ವರ್ಷದಲ್ಲೇ ಮತ್ತೆ ಪರೀಕ್ಷೆ ಎದುರಿಸಿ ಪಾಸ್ ಆಗಲು ಸಾಧ್ಯವಾಯಿತು. ಒಂದೇ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಎಕ್ಸಾಂ ನಡೆಸಿರುವುದು ದೇಶದ ಇತಿಹಾಸದಲ್ಲಿ ಇದೇ ಪ್ರಥಮವಾಗಿದೆ ಎಂದರು.
ಈ ಪರೀಕ್ಷೆಗಳಲ್ಲಿ ರಾಜ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದು, ಅದರಲ್ಲಿ 42 ಸಾವಿರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆ ಎಲ್ಲಾ ವಿದ್ಯಾರ್ಥಿಗಳು ಇದೇ ವರ್ಷ ಕಾಲೇಜಿಗೆ ದಾಖಲಾಗುತ್ತಾರೆ ಎಂದು ತಿಳಿಸಿದರು. ಹಾಗರೆಯೇ ಮುಂದಿನ ವರ್ಷ SSLCಗೂ ವರ್ಷದಲ್ಲಿ ಮೂರು ಬಾರಿ ಬೋರ್ಡ್ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
ಈ ಹಿಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಮೊಟ್ಟೆ ನೀಡಲಾಗುತ್ತಿತ್ತು. ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಕ್ಕಳ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಈಗ ಎರಡು ಮೊಟ್ಟೆ ನೀಡುವ ಕೆಲಸ ಆರಂಭಿಸಿದ್ದೇವೆ. ಅಲ್ಲದೆ ಮುಂದಿನ ವರ್ಷದಿಂದ ಮಕ್ಕಳ ಶಾಲಾ ಬ್ಯಾಗ್ನ ಹೊರೆಯನ್ನು ಅರ್ಧದಷ್ಟು ಕಡಿಮೆ ಮಾಡಲಾಗುವುದು. ಆ ದಿನಕ್ಕೆ ಅಗತ್ಯವಿರುವ ಪುಸ್ತಕಗಳನ್ನು ಮಾತ್ರ ತೆಗೆದುಕೊಂಡು ಹೋಗಲು ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಇಲಾಖೆ ಎದುರುಸುತ್ತಿರುವ ಸಮಸ್ಯೆಗಳು ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಎಲ್ಲವನ್ನೂ ಬಗೆಹರಿಸಲು ಸಾಧ್ಯವಾಗದಿದ್ದರೂ ಕೆಲವನ್ನಾದರೂ ಖಂಡಿತ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.












Click it and Unblock the Notifications