ಕುಂದೂರಿನಲ್ಲಿ ಅರಣ್ಯ ಇಲಾಖೆಯ ಕಳ್ಳಬೇಟೆ ನಿಗ್ರಹ ಶಿಬಿರ ಧ್ವಂಸ, ಜನಾಕ್ರೋಶ
ಚಿಕ್ಕಮಗಳೂರು, ನವೆಂಬರ್, 25: ಕಳೆದ ಭಾನುವಾರ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರ ಗುಂಪೊಂದು ಕುಂದೂರು ಗ್ರಾಮದ ಬಳಿ ಇರುವ ಅರಣ್ಯ ಇಲಾಖೆಯ ಕಳ್ಳಬೇಟೆ ನಿಗ್ರಹದಳದ ಶಿಬಿರವನ್ನು ಧ್ವಂಸ ಮಾಡಿದ್ದಾರೆ.
ಗ್ರಾಮಸ್ಥರು ಅರಣ್ಯ ಇಲಾಖೆಯ ಕಳ್ಳಬೇಟೆ ನಿಗ್ರಹದಳದ ಶಿಬಿರವನ್ನು ಧ್ವಂಸ ಮಾಡಿರುವ ವಿಡಿಯೋ ಶುಕ್ರವಾರ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ಭಾನುವಾರ ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಶೋಭಾ ಎಂಬ ರೈತ ಮಹಿಳೆಯ ಮೇಲೆ ಕಾಡಾನೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಸರ್ಕಾರ, ಜನಪ್ರತನಿಧಿಗಳ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಲ್ಲದೇ ಹುಲ್ಲೇಮನೆ, ಕುಂದೂರು ವ್ಯಾಪ್ತಿಯ ವಿವಿಧ ಗ್ರಾಮಗಳ ಜನರು ತೀವ್ರ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದಿಗ್ಬಂಧನ ವಿಧಿಸಿ ತರಾಟೆಗೆ ತೆಗೆದುಕೊಂಡಿದ್ದರು. ಘಟನಾ ಸ್ಥಳಕ್ಕೆ ತಡವಾಗಿ ಆಗಮಿಸಿದ್ದ ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನೂ ಕೂಡ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ಕಳ್ಳಬೇಟೆ ನಿಗ್ರಹ ಶಿಬಿರದ ಕಟ್ಟಡ ಧ್ವಂಸ
ಇದರ ಮಧ್ಯೆಯೇ ಅದೇ ದಿನ ಆಕ್ರೋಶಗೊಂಡ ಗ್ರಾಮದ ತಂಡವೊಂದು ಕುಂದೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಿಸಲಾಗಿದ್ದ ಕಳ್ಳ ಭೇಟಿ ನಿಗ್ರಹದಳದ ಶಿಬಿರದ ಮೇಲೂ ದಾಳಿ ಮಾಡಿದೆ. ಹಾಗೂ ಶಿಬಿರದಲ್ಲಿದ್ದ ವಸ್ತುಗಳನ್ನು ಪುಡಿಗಟ್ಟಿ, ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೂ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಶಿಬಿರದಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನೂ ತರಾಟೆಗೆ ತೆಗೆದುಕೊಂಡಿದ್ದ ಗ್ರಾಮಸ್ಥರು, "ಸರ್ಕಾರದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದೀರಿ. ಆದರೆ ಆನೆಗಳನ್ನು ಓಡಿಸಲು ಗ್ರಾಮಸ್ಥರಿಗೆ ಪಟಾಕಿ ಕೊಡಲೂ ಇಲಾಖೆಗೆ ಯೋಗ್ಯತೆ ಇಲ್ಲ. ಕಾಡಾನೆಗಳ ಹಾವಳಿಯಿಂದ ಇಲ್ಲಿನ ಗ್ರಾಮಸ್ಥರು ಪ್ರಾಣ ಭಯದಲ್ಲಿ ಬದುಕುತ್ತಿದ್ದಾರೆ.

ಜನರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಅಧಿಕಾರಿಗಳು, ಸಿಬ್ಬಂದಿಗೆ ಮಾತ್ರ ಸೋನ ಮಸೂರಿ ಅಕ್ಕಿಯ ಅಡುಗೆಯೇ ಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ಕಳ್ಳಬೇಟೆ ಶಿಬಿರದ ಮೇಲೆ ದಾಳಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.












Click it and Unblock the Notifications