Breaking: ಪ್ರೇಮ ವೈಫಲ್ಯ, ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಚಿಕ್ಕಮಗಳೂರು, ಮೇ 30: ಪ್ರೀತಿಸಿದ ಹುಡುಗಿ ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಮುತ್ತಿನ ಕೊಪ್ಪ ಬಳಿಯ ಶಂಕರಪುರದಲ್ಲಿ ನಡೆದಿದೆ.
ಚೇತನ್ ಎಂಬ 31 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡವರು. ಕಳೆದ 9 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದೆ. ಆದರೆ ವಿವಾಹವಾಗುವುದಾಗಿ ತಿಳಿಸಿ ನನಗೆ ಮೋಸ ಮಾಡಿದ್ದಾಳೆ ಎಂದು ಸಂಬಂಧಿಕರಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಚೇತನ್ ನೇಣಿಗೆ ಶರಣಾಗಿದ್ದಾರೆ.
ಯುವತಿ ನನ್ನ ಬಳಿ 4 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡಿದ್ದಾಳೆ ಎಂದು ಆರೋಪಿಸಿರುವ ಚೇತನ್ ಡೆತ್ನೋಟ್ನಲ್ಲಿ ನನ್ನ ಆತ್ಮಹತ್ಯೆಗೆ ಅವಳೇ ಕಾರಣ, ನನಗೆ ಮಾನಸಿಕ ಕಿರುಕುಳ ನೀಡಿದ್ದರಿಂದ ನಾನು ಸಾಯುತ್ತಿದ್ದೇನೆ. ನನ್ನ ಸಾವಿಗೆ ನ್ಯಾಯ ಸಿಗಬೇಕಾದರೆ ಆಕೆಗೆ ಶಿಕ್ಷೆಯಾಗಬೇಕು ಎಂದು ಬರೆದುಕೊಂಡಿದ್ದಾರೆ.

ಜೊತೆಗೆ ಪ್ರಿಯತಮೆ ಬರುವತನಕ ತನ್ನ ಶವವನ್ನು ಕೆಳಗಿಸಬೇಡಿ, ಆಕೆಯೇ ನನ್ನ ಚಿತೆಗೆ ಬೆಂಕಿ ಇಡಬೇಕು ಎಂದು ಸಂಬಂಧಿಕರಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಚೇತನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಎನ್. ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications