ಆಸ್ಪತ್ರೆ ಇಲ್ಲದ ವಲಯ, ನಿಧಾನವಾಗಿ ಚಲಿಸಿ: ಶೃಂಗೇರಿಯಲ್ಲಿ ವಿಭಿನ್ನ ಬ್ಯಾನರ್
ಚಿಕ್ಕಮಗಳೂರು, ಆಗಸ್ಟ್ 21: ಸುಸಜ್ಜಿತ ಆಸ್ಪತ್ರೆ ಇಲ್ಲದ ವಲಯ, ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಠಿಯಿಂದ ವಾಹನಗಳನ್ನು ನಿಧಾನವಾಗಿ ಚಲಿಸಬೇಕೆಂದು ತಮ್ಮಲ್ಲಿ ವಿನಂತಿ ಎಂಬ ಬೋರ್ಡ್ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಕಂಡು ಬಂದಿದೆ.
Recommended Video
ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರುವ ಪ್ರವಾಸಿಗರು ಕೂಡ ಕುತೂಹಲ ಭರಿತರಾಗಿದ್ದಾರೆ. ಕಳೆದೊಂದು ವಾರದಿಂದ ಶೃಂಗೇರಿ ಜನ ಬ್ಯಾನರ್ ಅಂದರೆ ಬೆಚ್ಚಿ ಬೀಳುತ್ತಿದ್ದಾರೆ. ಶಂಕರಾಚಾರ್ಯರ ಪುತ್ಥಳಿ ಮೇಲೆ ಈದ್ ಮಿಲಾದ್ ಹಬ್ಬದಲ್ಲಿ ಶುಭ ಕೋರುವ ಬ್ಯಾನರ್ ಹಾಕಿದ್ದರಿಂದ ಶೃಂಗೇರಿಯಲ್ಲಿ ವಾದ-ವಿವಾದ, ಪ್ರತಿಭಟನೆಗಳೇ ನಡೆದಿದ್ದವು.
ಬುಧವಾರದಿಂದ ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳಿಗೆ ಸಂಚಾರ ಮುಕ್ತ
ನೋಡ-ನೋಡುತ್ತಿದ್ದಂತೆ ಶೃಂಗೇರಿ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಇದೀಗ, ಮತ್ತೆ ಬ್ಯಾನರ್ ಸುದ್ದಿ ಶಾರದಾಂಬೆ ಮಡಿಲಲ್ಲಿ ಸದ್ದು ಮಾಡುತ್ತಿದೆ. ಬದಲಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧದ ಬ್ಯಾನರ್ ಹಾಕಲಾಗುತ್ತದೆ. ಶೃಂಗೇರಿ ಪ್ರಸಿದ್ಧ-ಪುಣ್ಯ ಹಾಗೂ ಪ್ರವಾಸಿ ತಾಣ. ನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಬಂದು ಹೋಗುತ್ತಾರೆ.
ಆದರೆ, ಇಂತಹ ಪ್ರವಾಸಿ ತಾಣದಲ್ಲಿ ಬಡಜನರ ಗೋಳನ್ನು ಕೇಳುವವರಿಲ್ಲದಂತಾಗಿದೆ. ಸುಮಾರು 40-50 ಸಾವಿರಕ್ಕೂ ಅಧಿಕ ಜನಸಂಖ್ಯೆಯುಳ್ಳ ಶೃಂಗೇರಿಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲ. ಸಣ್ಣ-ಪುಟ್ಟ ಜ್ವರ-ಶೀತದಂತಹ ಕಾಯಿಲೆ ಹೊರತುಪಡಿಸಿ ಇನ್ಯಾವುದೇ ಖಾಯಿಲೆ ಇದ್ದರೂ ವೈದ್ಯರ ಬಾಯಲ್ಲಿ ಬರುವ ಮಾತು ಒಂದೇ. ಇಲ್ಲಿ ಆಗಲ್ಲ. ಮಣಿಪಾಲ್ವಗೆ ಹೋಗಿ ಅನ್ನುವುದು.
ಇದರಿಂದ ಸ್ಥಳೀಯರು ಕೂಡ ಸಂಕಷ್ಟಕ್ಕೀಡಾಗಿದ್ದಾರೆ. ಯಾಕೆಂದರೆ ಈಗಿರುವ ಆಸ್ಪತ್ರೆಯಲ್ಲಿ ಯಾವುದೇ ಮೂಲಭೂತ ವ್ಯವಸ್ಥೆಯಾಗಲಿ, ಸೌಲಭ್ಯವಾಗಲಿ ಇಲ್ಲ. ಎಲ್ಲಾ ವಿಭಾಗದಲ್ಲೂ ವೈದ್ಯರಿಲ್ಲ. ಮಣಿಪಾಲ್ ಅಥವಾ ಉಡುಪಿಗೆ ಹೋಗಲು ಶೃಂಗೇರಿಯಿಂದ ಸುಮಾರು 100 ಕಿ.ಮೀ ದೂರ ಇದೆ. ಅದು ಕೂಡ ಘಾಟಿಯ ರಸ್ತೆ.
ತುರ್ತು ಸಂದರ್ಭದಲ್ಲಿ ಅಲ್ಲಿಗೆ ಹೋಗಲು ಎರಡರಿಂದ ಮೂರು ಗಂಟೆ ಬೇಕು. ಅಷ್ಟು ದೂರ ಹೋಗುವಾಗ ಮಾರ್ಗ ಮಧ್ಯೆ ಏನು ಬೇಕಾದರೂ ಸಂಭವಿಸಬಹುದು. ಈಗಾಗಲೇ ಮಾರ್ಗ ಮಧ್ಯೆ ಕೊನೆಯುಸಿರೆಳೆದಿರುವವರು ಹಲವರಿದ್ದಾರೆ. ಮತ್ತೆ ಹಲವರು ಅಲ್ಲಿನ ಬಿಲ್ ನೋಡಿ ಜೀವ ಉಳಿದರೂ ಜೀವನವೇ ಹೋದಂತಾಗಿದೆ.
ಸಾಲ ತೀರಿಸಲು ಇನ್ನೂ ದುಡಿಯುತ್ತಲೇ ಇದ್ದಾರೆ. ಹಾಗಾಗಿ, ಶೃಂಗೇರಿ ತಾಲೂಕಿನ ಜನ ಅಲ್ಲಲ್ಲಿ ಈ ರೀತಿಯ ಬ್ಯಾನರ್ ಬರೆಸಿ ಹಾಕಿದ್ದಾರೆ. ಕೂಡಲೇ ತಾಲೂಕಿಗೊಂದು ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.