₹50 ಲಕ್ಷ ವೆಚ್ಚದಲ್ಲಿ ರಸ್ತೆ ದುರಸ್ತಿ: ಮೂರೇ ದಿನಕ್ಕೆ ಕಳಪೆ ಕಾಮಗಾರಿ ಬಯಲು
ಚುನಾವಣೆ ಸಮೀಪಿಸುತ್ತಿದ್ದಂತೆ ರಸ್ತೆ ಕಾಮಗಾರಿಗಳ ಭರದಿಂದ ಸಾಗುತ್ತಿದ್ದು, ಕಳಪೆ ಕಾಮಗಾರಿ ಕೂಡ ಜೋರಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಹೋಬಳಿಯ ಖಂಡೇನಹಳ್ಳಿ ಗ್ರಾಮದ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸಿದ್ದು ರಾಜಕೀಯ ಜಟಾಪಟಿಗೆ ಕ
ಚಿತ್ರದುರ್ಗ, ಜನವರಿ 27 : ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸಾಕಷ್ಟು ಹಣ ಬರುತ್ತದೆ. ಆದರೆ ಚಿತ್ರದುರ್ಗ ಜಿಲ್ಲೆಯ ರಸ್ತೆಗೆ ಡಾಂಬರೀಕರಣ ಮಾಡಿ ಮೂರು ದಿನ ಕಳೆಯುವುದರೊಳಗೆ ರಸ್ತೆ ಕಿತ್ತು ಹೋಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆ ಕಿತ್ತು ಹೋಗಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಧರ್ಮಪುರ ಹೋಬಳಿಯ ಖಂಡೇನಹಳ್ಳಿ ಗ್ರಾಮದ ಕಾವಲು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸಿದ್ದು, ರಸ್ತೆಗೆ ಮೂರು ದಿನದ ಹಿಂದೆ ಡಾಬರ್ ಹಾಕಿದ್ದಾರೆ. ಆದರೆ ಮೂರ್ನಾಲ್ಕು ದಿನಗಳು ಕಳೆಯುವುದರೊಳಗೆ ರಸ್ತೆಯ ಡಾಂಬರ್ ರೊಟ್ಟಿಯಂತೆ ಎಳೆ ಎಳೆಯಾಗಿ ಕಿತ್ತು ಬರುತ್ತಿದೆ. ಇನ್ನು ಇದರಿಂದ ರಸ್ತೆ ಸಂಪೂರ್ಣ ಕಳಪೆ ಕಾಮಗಾರಿ ಗುಣಮಟ್ಟ ಹೊಂದಿದೆ ಎಂದು ಬಿಜೆಪಿ ಸರ್ಕಾರ, ಕಾಮಗಾರಿ ಗುತ್ತಿಗೆದಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಇತ್ತ ವಿಧಾನಸಭೆ ಚುನಾವಣೆ ಸಮೀಪ ಇರುವಾಗಲೇ ರಸ್ತೆ ಕಳಪೆ ಕಾಮಗಾರಿಯನ್ನೇ ಬಂಡವಾಳ ಮಾಡಿಕೊಂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರ ತೆರಿಗೆ ಹಣದಲ್ಲಿ ರಸ್ತೆಗೆ ಡಾಂಬರೀಕರಣ ಮಾಡಿರುವುದು ನೆಪ ಮಾತ್ರಕ್ಕೆ ಅಷ್ಟೇ. ಇದರಲ್ಲಿ ಒಂದಿಷ್ಟು ಜಲ್ಲಿಕಲ್ಲು ಚೆಲ್ಲಿ ಡಾಂಬರು ಹಾಕಿ ಗುತ್ತಿಗೆದಾರ ಕೈ ತೊಳೆದುಕೊಂಡಿದ್ದಾನೆ. ಡಾಂಬರು ರಸ್ತೆಯನ್ನು ಉಜ್ಜಿದರೆ ಡಾಂಬರು ಪುಡಿ, ಮಣ್ಣು ಬರುತ್ತಿದೆ. ಸಣ್ಣ ವಾಹನ ಓಡಾಡಿದರೂ ರಸ್ತೆಯಲ್ಲಿ ಗುಂಡಿಗಳು ಬೀಳುವಂತಾಗಿದೆ. ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಕಳಪೆ ರಸ್ತೆಯನ್ನು ಸರಿಪಡಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಫೋಟೋವನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಬಿಜೆಪಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ. ಯಾವುದೇ ಕಾಮಗಾರಿ ನಡೆಸಿದರೂ ಅದರಲ್ಲಿ ಕಳಪೆ ಗುಣಮಟ್ಟದ ಕಾಮಗಾರಿ ಹೊಂದಿರುತ್ತದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯವರ ಕಮಿಷನ್ ಆಸೆಗಾಗಿ ಇಂತಹ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶಿರ್ವಾದ ಮಾಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಮನವಿ ಮಾಡುತ್ತಿದ್ದರೆ, ಮತ್ತೊಂದೆಡೆ ಜೆಡಿಎಸ್ ಪಕ್ಷಕ್ಕೆ ಒಮ್ಮೆ ಅವಕಾಶ ನೀಡಿ ಎಂದು ಎಂದು ಜೆಡಿಎಸ್ ಕಾರ್ಯಕರ್ತರು ಕಳಪೆ ಕಾಮಗಾರಿಯ ಫೋಟೋ ಹಂಚಿಕೊಂಡು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.