ತುಮಕೂರು, ಚಿತ್ರದುರ್ಗ, ದಾವಣಗೆರೆ ನೂತನ ರೈಲ್ವೆ ಮಾರ್ಗದ 25 ಗ್ರಾಮಗಳ ಭೂಸ್ವಾಧೀನಕ್ಕೆ ಕ್ರಮ
ಚಿತ್ರದುರ್ಗ, ಜೂನ್ 23: ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸುವ ನೂತನ ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಬರುವ 46.58 ಕಿ.ಮೀ. ರೈಲ್ವೆ ಮಾರ್ಗದ ನಿರ್ಮಾಣ ಹಂತವಾಗಿ ಒಟ್ಟು 25 ಗ್ರಾಮಗಳ 444.12 ಎಕರೆ ಭೂ ಸ್ವಾಧೀನಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದರು.
Recommended Video
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಸಮಿತಿ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಮಾಹಿತಿ ನೀಡಿದರು.
ಈಗಾಗಲೇ ಭೂ-ಸ್ವಾಧೀನ ಕಾಯ್ದೆ 2013ರ ಅನ್ವಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಹೊಸ ರೈಲ್ವೆ ಮಾರ್ಗವು 201.47 ಕಿ.ಮೀ ಇದ್ದು, ತುಮಕೂರು ಜಿಲ್ಲೆಯಿಂದ ದಾವಣಗೆರೆ ಜಿಲ್ಲೆಯ ನಡುವಿನ ದೂರವನ್ನು 53.71 ಕಿ.ಮೀ. ಕಡಿಮೆ ಮಾಡಲಾಗಿದೆ.

ನೂತನ ರೈಲ್ವೆ ಮಾರ್ಗದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ 25 ಗ್ರಾಮಗಳ, ದೊಡ್ಡಸಿದ್ದವನಹಳ್ಳಿ ಗ್ರಾಮದಿಂದ ಹಂಪನೂರು ಗ್ರಾಮದವರೆಗೆ ಒಟ್ಟು 46.58 ಕಿ.ಮೀ. ರೈಲ್ವೆ ಮಾರ್ಗ ನಿರ್ಮಾಣವಾಗಬೇಕಿದೆ. ಇದಕ್ಕಾಗಿ ಒಟ್ಟು 444.12 ಎಕರೆ ಭೂಮಿ ಅಗತ್ಯವಿದ್ದು, ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕಳೆದ ಜೂ. 11 ರಂದು ಎಲ್ಲ ಗ್ರಾಮಗಳಲ್ಲಿ ಪುನರ್ ವ್ಯವಸ್ಥೆ ಮತ್ತು ಪುನರ್ ನಿರ್ಮಾಣ ಗ್ರಾಮಸಭೆಗಳನ್ನು ನಡೆಸಿ ಅಪೇಕ್ಷಣೆಗಳನ್ನು ಸ್ವೀಕರಿಸಲಾಗಿದೆ ಎಂದರು.
ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆಯನ್ನು ಈ ವರ್ಷಾಂತ್ಯದೊಳಗೆ ಹೊರಡಿಸಿ, ರೈಲ್ವೆ ಇಲಾಖೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲು ಅನುವು ಮಾಡಿಕೊಡಲಾಗುವುದು ಎಂದರು.

ಉದ್ದೇಶಿತ ನೂತನ ರೈಲ್ವೆ ಮಾರ್ಗದಲ್ಲಿ ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು, ಕಸಬಾ ಮತ್ತು ಭರಮಸಾಗರ ಹೋಬಳಿ ವ್ಯಾಪ್ತಿಯಲ್ಲಿನ 25 ಗ್ರಾಮಗಳ ವ್ಯಾಪ್ತಿಯ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಬೇಕಿದೆ. ಇದರಿಂದ ಬಾಧಿತರಾಗುವ ಸಂತ್ರಸ್ಥರಿಗೆ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಸೌಲಭ್ಯ ಕಲ್ಪಿಸಲು ಹಾಗೂ ಪರಾಮರ್ಶಿಸಲು ಹೊಸ ಭೂಸ್ವಾಧೀನ ಕಾಯ್ದೆ 2013 ರಂತೆ ಜಿಲ್ಲಾ ಮಟ್ಟದಲ್ಲಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಯೋಜನಾ ಸಮಿತಿಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ.
ಸಭೆಯಲ್ಲಿ ಸಂಸದ ಎ. ನಾರಾಯಣಸ್ವಾಮಿ, ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications