ನ್ಯಾಯಾಂಗ ಬಂಧನದಲ್ಲಿರುವ ಬಸವರಾಜನ್ ಹೆಸರಿನಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಕೆ
ಚಿತ್ರದುರ್ಗ, ನವೆಂಬರ್ 16 : ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಕಾಂಗ್ರೆಸ್ನಲ್ಲಿ ಅರ್ಜಿ ಸಲ್ಲಿಕೆಗೂ ಪೈಪೋಟಿ ನಡೆದಿದ್ದು, ನವೆಂಬರ್ 15ರಂದು ಅನೇಕರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಹೆಚ್ಚಾಗಿರುವ ಕಾರಣ ನವೆಂಬರ್ 21ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿ ಸಮಯ ವಿಸ್ತರಣೆ ಮಾಡಿದ್ದಾರೆ.
ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಟಿಕೆಟ್ಗಾಗಿ ಅಭ್ಯರ್ಥಿಗಳ ಪಟ್ಟಿ ಹೆಚ್ಚುತ್ತಿದೆ. ವಿಶೇಷ ಎಂಬಂತೆ ಮುರುಘಾ ಮಠದ 47 ಫೋಟೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಠದ ಮಾಜಿ ಆಡಳಿತಾಧಿಕಾರಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಮುರುಘಾ ಮಠದಲ್ಲಿ 47 ಫೋಟೋ ಕಳ್ಳತನ ಕೇಸ್: ಪೊಲೀಸರ ವಶಕ್ಕೆ ಮಾಜಿ ಶಾಸಕ ಬಸವರಾಜನ್
ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಎಂಎಲ್ಸಿ ರಘು ಆಚಾರ್, ಹನುಮನುಲಿ ಷಣ್ಮುಗಪ್ಪ, ಜಿ.ಜಯರಾಮಯ್ಯ, ಉದ್ಯಮಿ ಕೆಸಿ. ವೀರೇಂದ್ರ ಪಪ್ಪಿ, ಮಾಜಿ ಶಾಸಕ ಎವಿ. ಉಮಾಪತಿ, ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸೇರಿದಂತೆ ಐದಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇವರೊಂದಿಗೆ ಎಸ್.ಕೆ. ಬಸವರಾಜನ್ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಬಾರಿ ಪೈಪೋಟಿ ಆರಂಭವಾಗಿದ್ದು, ಈಗಾಗಲೇ ಅಭ್ಯರ್ಥಿಗಳು 2 ಲಕ್ಷ ರೂಪಾಯಿ ಶುಲ್ಕ ನೀಡಿ ಅರ್ಜಿ ಸಲ್ಲಿಸಿದ್ದಾರೆ.
ಮುರುಘಾ ಮಠದಲ್ಲಿ 47 ಫೋಟೋ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಫೋಟೋ ಕಳ್ಳತನಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ಸಂಬಂಧ ತನಿಖೆ ಮುಂದುವರಿದಿದ್ದು, ಎಸ್.ಕೆ.ಬಸವರಾಜನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ನವೆಂಬರ್ 7 ರಂದು ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಇವರ ಜೊತೆಗೆ ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ ಹಾಗೂ ಎಸ್.ಜೆ.ಎಂ. ಕಾಲೇಜು ಉಪನ್ಯಾಸಕ ಶಿವಾನಂದ ಸ್ವಾಮಿ ಅವರನ್ನು ಬಂಧಿಸಲಾಗಿತ್ತು. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗಿತ್ತು.