ಚಿತ್ರದುರ್ಗ; ಅಪಘಾತದಲ್ಲಿ ಗಾಯಗೊಂಡಿದ್ದ ಉಪವಿಭಾಗಾಧಿಕಾರಿ ಸಾವು
ಚಿತ್ರದುರ್ಗ, ಮೇ 04; ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಚಿತ್ರದುರ್ಗ ಉಪವಿಭಾಗಾಧಿಕಾರಿ ಪ್ರಸನ್ನ ಅವರು ಮೃತಪಟ್ಟಿದ್ದಾರೆ. ವಾಕಿಂಗ್ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.
ಪ್ರಸನ್ನ (51) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಚಿತ್ರದುರ್ಗ ನಗರದ ಗೋನೂರು ರಸ್ತೆಯಲ್ಲಿ ವಾಕಿಂಗ್ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ತಲೆಗೆ ಗಂಭೀರವಾದ ಗಾಯವಾಗಿತ್ತು.
ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ಪ್ರಸನ್ನರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಪ್ರಸನ್ನ ಅವರು ಕಳೆದ 1 ವರ್ಷದಿಂದ ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸನ್ನ ಅವರು ಚಿತ್ರದುರ್ಗ ತಾಲೂಕಿನ ಕಡಬನಕಟ್ಟೆ ಗ್ರಾಮದವರಾಗಿದ್ದರು. ತಂದೆ-ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.
ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು ಪ್ರಸನ್ನ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.












Click it and Unblock the Notifications