ಆಯುಷ್ಮಾನ್ ಭಾರತ್; ಚಿತ್ರದುರ್ಗದ ಸಾಧನೆಗೆ ಮೆಚ್ಚುಗೆ
ಚಿತ್ರದುರ್ಗ, ಮಾರ್ಚ್ 12; ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಚಿತ್ರದುರ್ಗ ಜಿಲ್ಲೆ ಸಾಧನೆ ಮಾಡಿದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಈ ಸಾಧನೆಗಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.
ಪ್ರತಿ ಮೂರು ತಿಂಗಳಿಗೊಮ್ಮೆ ಯೋಜನೆಯ ಪರಿಶೀಲನೆ ನಡೆಯುತ್ತದೆ. ಇದರಲ್ಲಿ ಎರಡು ಬಾರಿ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಮತ್ತು ಚಳ್ಳಕೆರೆ ಸಾರ್ವಜನಿಕ ತಾಲೂಕು ಆಸ್ಪತ್ರೆ ಮೊದಲ ಸ್ಥಾನವನ್ನುಗಳಿಸಿದೆ.
ಯೋಜನೆಯಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ರೋಗಿಗಳು ಸೇವೆ ಪಡೆದಿದ್ದಾರೆ. ಪ್ರಸಕ್ತ ಸಾಲಿನಲ್ಲಿ 7 ಸಾವಿರ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ. ತುಮಕೂರು, ಬೆಂಗಳೂರು ಗ್ರಾಮಂತರ, ಶಿವಮೊಗ್ಗ ಜಿಲ್ಲೆಗಳು ನಂತರದ ಸ್ಥಾನಗಳನ್ನು ಪಡೆದಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಎಬಿಎಆರ್ಕೆ ಅನುಷ್ಠಾನಕ್ಕೆ ಬಂದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಯೋಜನೆ ವ್ಯಾಪ್ತಿಯಲ್ಲಿವೆ. ಜಿಲ್ಲೆಯ 6 ಖಾಸಗಿ ಆಸ್ಪತ್ರೆಗಳು ಸಹ ಈ ಯೋಜನೆಯಲ್ಲಿ ಸೇವೆ ನೀಡುತ್ತಿವೆ.
ಜಿಲ್ಲಾ ಆಸ್ಪತ್ರೆ 6000 ಫಲಾನುಭವಿಗಳಿಗೆ ಚಿಕಿತ್ಸೆ ನೀಡಿದೆ. ಚಳ್ಳಕೆರೆ ತಾಲೂಕು ಆಸ್ಪತ್ರೆ 3,500 ರೋಗಿಗಳಿಗೆ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆ 500 ಜನರಿಗೆ ಸೇವೆ ನೀಡಿವೆ. 2009ರಿಂದ ಇದುವರೆಗೆ ಜಿಲ್ಲೆಯಲ್ಲಿ 12 ಸಾವಿರಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗಳನ್ನು ಪಡೆದಿದ್ದಾರೆ.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ವಾರ್ಷಿಕ 5 ಲಕ್ಷದವರೆಗೆ ಚಿಕಿತ್ಸೆ ಪಡೆಯಲು ಅವಕಾಶವಿದೆ. ಬಡತನ ರೇಖೆಗಿಂತ ಮೇಲಿರುವ (ಬಿಪಿಎಲ್) ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದವರೆಗೆ ಸೇವೆ ಲಭ್ಯವಿದೆ.
"ಆರೋಗ್ಯ ಮಿತ್ರ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ" ಎಂದು ಜಿಲ್ಲಾ ಸಂಯೋಜಕ ಎಬಿಎಆರ್ಕೆಯ ಡಾ. ಚಂದ್ರಶೇಖರರಾಜ್ ಮೆಚ್ಚುಗೆ ವ್ಯಕ್ತಪಡಿಸಿದರು.












Click it and Unblock the Notifications