ಮರಳಿ Congress ಗೂಡಿಗೆ ಶಾಸಕಿ ಕೆ.ಪೂರ್ಣಿಮಾ: ಇಲ್ಲಿದೆ ಬಿಜೆಪಿ-ಕಾಂಗ್ರೆಸ್ ಲಾಭನಷ್ಟದ ಲೆಕ್ಕಾಚಾರ!
ಕೋಟೆ ನೋಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಚಿತ್ರದುರ್ಗ, ಮಾರ್ಚ್ 18 : 2023ರ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇದ್ದು ಚುನಾವಣೆಯ ಕಾವು ರಂಗೇರುತ್ತಿದೆ. ಇತ್ತ ವಿವಿಧ ರಾಜಕೀಯ ಪಕ್ಷದ ನಾಯಕರುಗಳು ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. ಅದರಂತೆ ಕೋಟೆ ನೋಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.
ಕೆ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂತ್ರಗಾರಿಕೆ ರೂಪಿಸಿದ್ದಾರೆ. ಯಾಕೆಂದರೆ ಬಾದಾಮಿಯಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಇದೀಗ ಕೋಲಾರದಿಂದ ಸ್ಪರ್ಧಿಸಲಿದ್ದಾರೆ.
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 15 ಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿವೆ. ಇದಲ್ಲದೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆ ಒಳಗೊಂಡಂತೆ ಜಗಳೂರು, ಕೂಡ್ಲಿಗಿ, ಅರಸೀಕೆರೆ, ಹಾಸನ, ರಾಮನಗರ, ಮಾಗಡಿ, ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವು ಉತ್ತರ ಕರ್ನಾಟಕ ಭಾಗದಲ್ಲಿ ಸಹ ಗೊಲ್ಲ ಸಮುದಾಯದ ಮತಗಳು ಅಭ್ಯರ್ಥಿ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಲಿವೆ.
ಈ ನಿಟ್ಟಿನಲ್ಲಿ ಸುಮಾರು 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೊಲ್ಲ ಸಮುದಾಯದ ಮತಗಳು ಅಧಿಕವಾಗಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ ಕೆ. ಪೂರ್ಣಿಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಿದ್ದಾರೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ನನ್ನ ಗೆಲುವಿಗೆ ಹಾಗೂ ಇತರ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ ಎನ್ನುವ ದೃಷ್ಟಿಯಿಂದ ಪೂರ್ಣಿಮಾ ಅವರನ್ನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗುತ್ತಿದ್ದಾರೆ.
ಈಗಾಗಲೇ ಹಿರಿಯೂರು ಕ್ಷೇತ್ರದಲ್ಲಿ ಪೂರ್ಣಿಮಾ ಕಾಂಗ್ರೆಸ್ಗೆ ಎಂದು ಸದ್ಯ ಟ್ರೆಂಡಿಂಗ್ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಪೂರ್ಣಿಮಾ ಅವರು ಒಂದು ವಾರದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವಿಚಾರ ಎಲ್ಲೆಡೆ ಹರಿದಾಡುತ್ತಿದೆ.
ಬಿಜೆಪಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಪಕ್ಷಕ್ಕೆ ಬರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಲಾಭವಾಗಲಿದೆ ಏಕೆಂದರೆ ಸುಮಾರು 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೊಲ್ಲ ಸಮುದಾಯದ ಮತಗಳು ನಿರ್ಣಾಯಕ ಪಾತ್ರ ವಹಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಅಹಿಂದ ನಾಯಕ ಡಾ. ಸಾಸಲು ಸತೀಶ್ ಅವರಿಗೆ ಕೊನೆಗಳಿಗೆ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ಕಾಡುಗೊಲ್ಲರು ಮತ್ತು ಗೊಲ್ಲ ಸಮುದಾಯದ ಮತದಾರರು ಕಾಂಗ್ರೆಸ್ ಪಕ್ಷದ ಸೋಲಿಗೆ ಪ್ರಮುಖ ಕಾರಣರಾದರು ಎಂದು ಹೇಳಬಹುದು.
ಏಕೆಂದರೆ, ಶಿರಾ ಕ್ಷೇತ್ರದಲ್ಲಿ ಮಾಜಿ ಸಚಿವ ಟಿ ಬಿ ಜಯಚಂದ್ರ, ಹೊಳಲ್ಕೆರೆಯಲ್ಲಿ ಮಾಜಿ ಸಚಿವ ಎಚ್. ಆಂಜನೇಯ, ಹೊಸದುರ್ಗದಲ್ಲಿ ಮಾಜಿ ಶಾಸಕ ಬಿಜಿ ಗೋವಿಂದಪ್ಪ, ಹಿರಿಯೂರಿನಲ್ಲಿ ಮಾಜಿ ಸಚಿವ ಡಿ ಸುಧಾಕರ್, ಮಧುಗಿರಿಯಲ್ಲಿ ಕೆ ಎನ್. ರಾಜಣ್ಣ, ಚಿಕ್ಕನಾಯಕನಹಳ್ಳಿಯಲ್ಲಿ ಸಂತೋಷ್ ಜಯಚಂದ್ರ, ಕೊಳಗಂಡಂತೆ ಮೊಳಕಾಲ್ಮೂರು, ಚಿತ್ರದುರ್ಗ, ಕೂಡ್ಲಿಗಿ, ಸೇರಿದಂತೆ ಮತ್ತಿತರರ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದರು. ಅಲ್ಲದೇ ತುಮಕೂರು ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದರು.

ಪೂರ್ಣಿಮಾರನ್ನು ಮರಳಿ ತರುವಲ್ಲಿ ಕಾಂಗ್ರೆಸ್ ಯಶಸ್ವಿ
ಈ ಸೋಲಿನ ರುಚಿಯನ್ನು ಕಂಡ ಕಾಂಗ್ರೆಸ್ ನಾಯಕರು 2023ರ ಚುನಾವಣೆಯಲ್ಲಿ ಕಾಡುಗೊಲ್ಲರಿಗೆ ಅಥವಾ ಗೊಲ್ಲರಿಗೆ ಟಿಕೆಟ್ ನೀಡದೇ ಇದ್ದರೆ ನಮ್ಮ ರಾಜಕೀಯ ಭವಿಷ್ಯ ಅಂತ್ಯಗೊಳ್ಳಲಿದೆ ಎಂಬ ಗಟ್ಟಿ ನಿರ್ಧಾರದಿಂದ ವರಿಷ್ಠರ ಮೇಲೆ ಒತ್ತಡ ತಂದು ಚಿತ್ರದುರ್ಗ ಅಥವಾ ತುಮಕೂರು ಜಿಲ್ಲೆಯಲ್ಲಿ ಸಮುದಾಯವನ್ನು ಪರಿಗಣಿಸಿ ಒಂದು ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜಕೀಯ ನಾಯಕರ ತಂತ್ರಗಾರಿಕೆಯಿಂದ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಿ ಯಶಸ್ವಿಯಾಗುತ್ತಿದ್ದಾರೆ.
ಇನ್ನು ಪೂರ್ಣಿಮಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದರಿಂದ ಕಾಂಗ್ರೆಸ್ಗೆ ಬಹುದೊಡ್ಡ ಮಟ್ಟದಲ್ಲಿ ಲಾಭವಾಗುತ್ತಿದೆ. ಬಹುತೇಕ ಕಾಡುಗೊಲ್ಲರು ಹಾಗೂ ಗೊಲ್ಲ ಸಮುದಾಯದ ಮತಗಳು ಕಾಂಗ್ರೆಸ್ ಪರವಾಗಿ ಮತಗಳಿದ್ದವು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ನೀಡದ ಕಾರಣ ಬಿಜೆಪಿಯನ್ನು ಬೆಂಬಲಿಸಿ, ಕಾಂಗ್ರೆಸ್ ಪಕ್ಷದ ಸೋಲಿಗೆ ಕಾರಣರಾದರು ಹಾಗಾಗಿ ಕಳೆದ ಸೋಲಿನ ರುಚಿಯನ್ನು ಅರಿತ ಕಾಂಗ್ರೆಸ್ ಪಕ್ಷ ಮತ್ತೆ ಈ ರೀತಿ ತಪ್ಪು ಆಗದಂತೆ ದಿಟ್ಟ ಹೆಜ್ಜೆಯನ್ನು ಮುಂದಿಟ್ಟಿದೆ.

ಬಿಜೆಪಿ ವಿರುದ್ಧ ಸಮುದಾಯದ ಅಸಮಾಧಾನ
ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷ ಸೇರುವುದರಿಂದ ಬಿಜೆಪಿಗೆ ನಷ್ಟ ಉಂಟಾಗಲಿದೆ. ಸರ್ಕಾರದಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎಂದು ಕೊನೆ ಗಳಿಗೆಯಲ್ಲಿ ಸಚಿವ ಸ್ಥಾನವನ್ನು ತಪ್ಪಿಸಿದರು. ಎಲ್ಲೋ ಒಂದು ಕಡೆ ನಾನು ಮಂತ್ರಿ ಆಗುತ್ತೇನೆ ಎಂಬ ಆಸೆಯನ್ನು ಇಟ್ಟುಕೊಂಡಿದ್ದ ಪೂರ್ಣಿಮಾ ಅವರಿಗೆ ನಿರಾಸೆ ಉಂಟಾಯಿತು.
ಹಿಂದುಳಿದ ವರ್ಗದ ಏಕೈಕ ಮಹಿಳಾ ಶಾಸಕಿಯಾಗಿರುವ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಂತ್ರಿ ಸ್ಥಾನ ನೀಡಲಿಲ್ಲ ಎನ್ನುವುದು ಕಾಡುಗೊಲ್ಲ ಸಮುದಾಯದ ಬಹುದೊಡ್ಡ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿ ಪಕ್ಷ ಕೊಟ್ಟ ಮಾತಿನಂತೆ ನಡೆಯಲಿಲ್ಲ ಎಂಬ ಅಂಶವನ್ನು ಇಟ್ಟುಕೊಂಡು ಸಮುದಾಯ ಇದೀಗ ಬಿಜೆಪಿ ವಿರುದ್ಧ ತಿರುಗಿ ಬಿಳತೊಡಗಿದೆ.

ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿದ್ದ ಸುಧಾಕರ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣಿಮಾ ವಿರುದ್ಧ ಸೋಲು ಕಂಡಿದ್ದ ಮಾಜಿ ಸಚಿವ ಡಿ ಸುಧಾಕರ್ ಅವರು ಈ ಬಾರಿ ನಾನೇ ಅಭ್ಯರ್ಥಿ, ಕಾಂಗ್ರೆಸ್ ಟಿಕೆಟ್ ಬಿ. ಫಾರಂ ನನ್ನ ಜೇಬಿನಲ್ಲಿದೆ ಕಾರ್ಯಕರ್ತರೇ ಹೆದರಬೇಡಿ ಎಂದು ಕಾಲಿಗೆ ಚಕ್ರ ಕಟ್ಟಿಕೊಂಡು ಹಳ್ಳಿಗಳಿಗೆ ಸುತ್ತಾಡುತ್ತಿದ್ದ ಸುಧಾಕರ್ ಅವರಿಗೆ ಹಾವನ್ನು ಹೊಡೆದು ಹದ್ದಿಗೆ ಹಾಕಿದಂತಾಗಿದೆ. ಏಕೆಂದರೆ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿಕೊಂಡು ಬಂದಿರುವ ಸುಧಾಕರ್ ಅವರಿಗೆ ಟಿಕೆಟ್ ಕೈ ತಪ್ಪಲಿದೆ.
ಒಂದು ವೇಳೆ ಸುಧಾಕರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ, 15 ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದು ಕೊಳ್ಳುವ ಸ್ಥಿತಿ ಕಾಂಗ್ರೆಸ್ನದ್ದಾಗಿದೆ. ಹಾಗಾಗಿ ಒಂದು ಕ್ಷೇತ್ರ ಕಳೆದುಕೊಂಡು 15 ಕ್ಷೇತ್ರಗಳನ್ನು ಉಳಿಸಿಕೊಳ್ಳಬೇಕು ಎನ್ನುವುದು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಕ್ಕಾಚಾರವಾಗಿದೆ.

ಹಿರಿಯೂರು ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯತ್ತ ಚಿತ್ತ
ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿರುವ ಸಂಕಲ್ಪ ಯಾತ್ರೆ ಶುಕ್ರವಾರ ಜಿಲ್ಲೆಯ ಚಳ್ಳಕೆರೆ ನಗರ ತಲುಪಿತ್ತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ರಾಜ್ಯದ ಕೆಲವು ಸಚಿವರು, ಶಾಸಕರು ಆಗಮಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರು ಗೈರಾಗಿದ್ದರು. ಇದೀಗ ಮಾರ್ಚ್ 20ರಂದು ಬಿಜೆಪಿ ಸಂಕಲ್ಪ ಯಾತ್ರೆ ಭಾನುವಾರ ಹಿರಿಯೂರು ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ನತ್ತ ಮುಖ ಮಾಡಿರುವ ಶಾಸಕಿ ಕೆ ಪೂರ್ಣಿಮಾ ಇರದೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಎಷ್ಟರ ಮಟ್ಟಿಗೆ ನಡೆಯುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.












Click it and Unblock the Notifications