ಚಿತ್ರದುರ್ಗದಲ್ಲಿ ಐಐಟಿ ಸ್ಥಾಪಿಸಲು ಪ್ರಧಾನಿಗೆ ಪತ್ರ
ಚಿತ್ರದುರ್ಗ, ಮಾ. 24 : ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯನ್ನು ಚಿತ್ರದುರ್ಗದಲ್ಲಿ ಸ್ಥಾಪಿಸುವಂತೆ ಸಂಸದ ಬಿ.ಎನ್.ಚಂದ್ರಪ್ಪ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಹಾಸನ, ಧಾರವಾಡ, ರಾಯಚೂರು, ಮೈಸೂರು ಮುಂತಾದ ಜಿಲ್ಲೆಗಳು ಐಐಟಿ ಸ್ಥಾಪನೆಗಾಗಿ ಬೇಡಿಕೆ ಇಟ್ಟಿವೆ.
ಚಿತ್ರದುರ್ಗದ ಸಂಸದ ಬಿ.ಎನ್.ಚಂದ್ರಪ್ಪ (ಕಾಂಗ್ರೆಸ್) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯಲ್ಲಿ ಐಐಟಿ ಸ್ಥಾಪಿಸಿ ಎಂದು ಪತ್ರ ಬರೆದಿದ್ದಾರೆ. ಚಿತ್ರದುರ್ಗವು ರಾಜಧಾನಿ ಬೆಂಗಳೂರಿನಿಂದ 200 ಕಿ.ಮೀ ದೂರದಲ್ಲಿದ್ದರೂ ಉತ್ತಮ ಸಾರಿಗೆ ವ್ಯವಸ್ಥೆಯನ್ನು ಹೊಂದಿದೆ ಎಂದು ಪತ್ರದಲ್ಲಿ ಚಂದ್ರಪ್ಪ ತಿಳಿಸಿದ್ದಾರೆ. [ಐಐಟಿ ಹರಪನಹಳ್ಳಿಗೆ ಸಿಗಲಿ]

ಚಿತ್ರದುರ್ಗವು ಹಿಂದುಳಿದ ಪ್ರದೇಶವಾಗಿದ್ದರೂ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳಿವೆ. ಆದ್ದರಿಂದ ಐಐಟಿಯನ್ನು ಚಿತ್ರದುರ್ಗದಲ್ಲಿ ಸ್ಥಾಪನೆ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. [ಐಐಟಿ ಮೈಸೂರಿಗೆ ಬರಲಿ]
ದಾವಣಗೆರೆಯಲ್ಲಿ ಸ್ಥಾಪಿಸುವಂತೆ ಮನವಿ : ಕೆಲವು ದಿನಗಳ ಹಿಂದೆ ಕೇಂದ್ರ ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ರಾಜ್ಯ ಸಚಿವ ಜಿ.ಎಂ. ಸಿದ್ದೇಶ್ವರ ಅವರು ದಾವಣಗೆರೆ ಜಿಲ್ಲೆಯಲ್ಲಿ ಐಐಟಿ ಕೇಂದ್ರ ತೆರೆಯುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. [ಐಐಟಿ ಎಲ್ಲಿ ಸ್ಥಾಪನೆ ಆಗಬೇಕು? ಉತ್ತರ ಸಿಕ್ಕಿದೆ!]
ಅತ್ತ ಮೈಸೂರಿನಲ್ಲಿ ಐಐಟಿ ಸ್ಥಾಪನೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪ್ರಸಾದ್ ಪ್ರಯತ್ನ ನಡೆಸಿದ್ದಾರೆ. ಮೈಸೂರಿನಲ್ಲಿ ಮೂರು ಸ್ಥಳಗಳನ್ನು ಗುರುತಿಸಿ ಕೇಂದ್ರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅವರು ನಿರ್ಧರಿಸಿದ್ದಾರೆ.
ಒನ್ ಇಂಡಿಯಾ ಕನ್ನಡದ ಓದುಗರು ಧಾರವಾಡ ಅಥವ ರಾಯಚೂರಿನಲ್ಲಿ ಐಐಟಿ ಸ್ಥಾಪನೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಬೆಳಗಾವಿ ಮತ್ತು ಹಾಸನದಲ್ಲಿ ಐಐಟಿ ಸ್ಥಾಪನೆ ಮಾಡುವಂತೆಯೂ ಈಗಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ, ಯಾವ ಜಿಲ್ಲೆಗೆ ಐಐಟಿ?












Click it and Unblock the Notifications