ಸಚಿವ ಸ್ಥಾನದಿಂದ ಶಶಿಕಲಾ ಜೊಲ್ಲೆಗೆ ಕೊಕ್? ಕೆ.ಪೂರ್ಣಿಮಾಗೆ ಸ್ಥಾನ!
ಚಿತ್ರದುರ್ಗ, ಆಗಸ್ಟ್ 11: ಮುಂಬರುವ ದಿನಗಳಲ್ಲಿ ಯಾವುದೇ ಸಂದರ್ಭದಲ್ಲಿ ಸಂಪುಟ ಪುನಾರಚನೆ ಮಾಡುವ ಸಂಭವವಿದ್ದು, ಸಚಿವ ಸಂಪುಟದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಕ್ ನೀಡುವುದು ಬಹುತೇಕ ಖಚಿತವಾಗಿದೆ. ಇವರ ಬದಲಿಗೆ ಹಿರಿಯೂರು ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾಗೆ ಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Recommended Video
ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವರಾಗಿರುವ ಶಶಿಕಲಾ ಜೊಲ್ಲೆ ಅಧಿಕಾರ ಸ್ವೀಕರಿಸಿ ಒಂದು ವರ್ಷ ಕಳೆದರೂ ಯಾವುದೇ ಬದಲಾವಣೆ ಆಗಿಲ್ಲ, ನಿರೀಕ್ಷೆಗೆ ತಕ್ಕಂತೆ ಇಲಾಖೆಯಲ್ಲಿ ಪ್ರಗತಿ ಸಾಧಿಸಲು ವಿಫಲರಾಗಿದ್ದು, ಇಲಾಖೆಯಲ್ಲಿ ಯಾವುದೇ ಸುಧಾರಣೆ ಮಾಡದಿರುವುದೇ ಪ್ರಮುಖ ಕಾರಣ ಎಂದು ಸಚಿವ ಸಂಪುಟದಿಂದ ಸಚಿವೆ ಶಶಿಕಲಾ ಜೊಲ್ಲೆಗೆ ಸಂಪುಟದಿಂದ ಕೊಕ್ ಸಿಗುವ ಸಾಧ್ಯತೆ ಎನ್ನಲಾಗಿದೆ.

ದೆಹಲಿಯಿಂದ ಬರಿಗೈಲಿ ಹಿಂತಿರುಗಿದ್ದ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮಂತ್ರಿ ಸ್ಥಾನ ತಪ್ಪಬಹುದು ಎನ್ನುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಜೊಲ್ಲೆ ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಂಪುಟದಿಂದ ಕೈಬಿಡದಂತೆ ಮುಖ್ಯಮಂತ್ರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರು. ಆದರೆ ಅವರ ಈ ಪ್ರಯತ್ನಕ್ಕೆ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಹೀಗಾಗಿ ಬಂದ ದಾರಿಗೆ ಸುಂಕವಿಲ್ಲ ಎಂದು ದೆಹಲಿಯಿಂದ ಬರಿಗೈಯಲ್ಲಿ ಹಿಂತಿರುಗಿದ್ದರು.

ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ?
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅತ್ಯಂತ ಪ್ರಮುಖ ಇಲಾಖೆಯಾಗಿದ್ದು, ಜೊಲ್ಲೆ ಅವರು ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ತಂದೆಯ ಹಾದಿಯಲ್ಲಿ ಸಾಗಿ ಬಂದಿರುವ ಕೆ. ಪೂರ್ಣಿಮಾ ಶ್ರೀನಿವಾಸ್ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದರು. ಕಳೆದ ಬಾರಿಯೇ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬ ಕೂಗು ಕೇಳಿಬಂದಿತ್ತು.

ಕೂದಲೆಳೆ ಅಂತರದಲ್ಲಿ ತಪ್ಪಿದ್ದ ಸಚಿವ ಸ್ಥಾನ
ಕೊನೆ ಕ್ಷಣದಲ್ಲಿ ಜೊಲ್ಲೆಗೆ ಅದೃಷ್ಟ ಕೈ ಹಿಡಿದಿದ್ದರಿಂದ ಕೂದಲೆಳೆ ಅಂತರದಲ್ಲಿ ಪೂರ್ಣಿಮಾ ಶ್ರೀನಿವಾಸ್ ಗೆ ಸಚಿವ ಸ್ಥಾನ ಕೈ ತಪ್ಪಿತ್ತು. ಹೀಗಾಗಿ ಹಿರಿಯೂರಿನ ಕೆ. ಪೂರ್ಣಿಮಾ ಶ್ರೀನಿವಾಸ್ ಅವರನ್ನು ಸಂಪುಟಕ್ಕೆ ತೆಗೆದುಕೊಂಡರೆ ಮಧ್ಯ ಕರ್ನಾಟಕದಲ್ಲಿ ಗೊಲ್ಲ ಸಮುದಾಯ ಮತ್ತು ಹಿಂದುಳಿದ ವರ್ಗಗಳು ಹೆಚ್ಚಾಗಿ ಇರುವುದರಿಂದ ಪಕ್ಷ ಸಂಘಟನೆಗೆ ಹೆಚ್ಚು ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರ ಬಿಜೆಪಿ ಹೈಕಮಾಂಡ್ ನದ್ದಾಗಿದೆ.

ಸಚಿವ ಸ್ಥಾನದ ಭರವಸೆ ನೀಡಿದ್ದ ಬಿಎಸ್ ವೈ
ಹಿಂದುಳಿದ ವರ್ಗದ ನಾಯಕಿಯಾಗಿರುವ ಕೆ. ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಣೆ ಹಾಕಿ ಸಚಿವ ಸಂಪುಟದಲ್ಲಿ ಸೇರಿಸಿಕೊಂಡರೂ ಅಚ್ಚರಿ ಇಲ್ಲ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬಿಎಸ್ವೈ ಪೂರ್ಣಿಮಾ ಅವರನ್ನು ಗೆಲ್ಲಿಸಿದರೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಅದರಂತೆ ಕ್ಷೇತ್ರದ ಕಾರ್ಯಕರ್ತರು ಸಹ ಪೂರ್ಣಿಮಾಗೆ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸುತಿದ್ದಾರೆ.












Click it and Unblock the Notifications