ಕಠಿಣ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ
ಚಿತ್ರದುರ್ಗ, ಮಾರ್ಚ್ 23: ಕೊರೊನಾ ವೈರಸ್ ರಾಜ್ಯದಲ್ಲಿ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಮಿತಿ ಮೀರಿದರೆ ಕಠಿಣ ಪರಿಸ್ಥಿತಿ ಎದುರಿಸಲು ಸಜ್ಜಾಗಿ ಎಂದು ಚಿತ್ರದುರ್ಗ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಚಿತ್ರದುರ್ಗದ ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು, ""ಜಿಲ್ಲೆಯಲ್ಲಿ 68 ಜನರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಚಿತ್ರದುರ್ಗದಲ್ಲಿ ಇದುವರೆಗೆ ಯಾರೊಬ್ಬರಿಗೂ ಕೊರೊನಾ ಸೋಂಕು ಪಾಸಿಟಿವ್ ಇಲ್ಲ'' ಎಂದರು.
ಮುಖ್ಯಮಂತ್ರಿಗಳ ಗಮನಕ್ಕೆ ಮೊದಲು KIAL ಲಾಕ್ ಡೌನ್ ಮಾಡ್ಸಿ
ಜಿಲ್ಲೆಯಲ್ಲಿನ ಜನತೆ ಭೀತಿಗೆ ಒಳಗಾಗುವ ಅಗತ್ಯವಿಲ್ಲ, ವಿದೇಶದಿಂದ ಬಂದವರು ತಕ್ಷಣ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಒಂದು ವೇಳೆ ಆರೋಗ್ಯ ಕೆಟ್ಟು, ತಡವಾಗಿ ಮಾಹಿತಿ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಖಡಕ್ ವಾರ್ನಿಂಗ್ ನೀಡಿದರು.
ಬೇರೆ ಜಿಲ್ಲೆಗಳಿಂದ ಬಸ್ ನಲ್ಲಿ ಅನೇಕ ಜನ ಬರುತ್ತಿದ್ದಾರೆ. ಬರುವ ಜನರನ್ನು ಥರ್ಮಾ ಸ್ಕ್ಯಾನರ್ ಮೂಲಕ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ, ಸದ್ಯಕ್ಕೆ ಎರಡು ಥರ್ಮಾ ಸ್ಕ್ಯಾನರ್ ಮಾತ್ರ ಇವೆ ಎಂದು ತಿಳಿಸಿದರು.
ಮನೆಯಲ್ಲಿ ಹಬ್ಬ ಆಚರಣೆ ಮಾಡಿ:
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಾರ್ಚ್ 24 ರಿಂದ 26 ರ ಯುಗಾದಿ ಹಬ್ಬದ ಕಾರ್ಯಕ್ರಮಕ್ಕೆ ಸಾರ್ವಜನಿಕರು ದೇವಸ್ಥಾನ ಮತ್ತು ಇತರೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಾಗಿ ಜನ ಸೇರುವುದರಿಂದ ಕೊರೊನಾ ವೈರಸ್ ಹೆಚ್ಚಾಗಿ ಹರಡುವ ಸಂಭವವಿದೆ ಎಂದು ಹಿರಿಯೂರು ತಹಶೀಲ್ದಾರ್ ಸತ್ಯನಾರಾಯಣ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಆದ್ದರಿಂದ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಹಬ್ಬದ ಕಾರ್ಯಕ್ರಮಗಳನ್ನು ಆಚರಿಸಿಕೊಳ್ಳಬೇಕು ಹಾಗೂ ಮನೆಯಿಂದ ಹೊರಗೆ ಬಂದು ದೇವಸ್ಥಾನ ಮತ್ತು ಇತರೆ ಸ್ಥಳಗಳಲ್ಲಿ ಸೇರಬಾರದು. ಸಾರ್ವಜನಿಕರು ಪೂರ್ಣ ರೀತಿಯಲ್ಲಿ ಸಹಕಾರ ನೀಡಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ಪೋಲಿಸ್ ಕಾಯ್ದೆ 1963 ರ ರೀತ್ಯಾ ಜೂಜಾಟವನ್ನು ಕಾನೂನು ಬಾಹಿರವೆಂದು ಪರಿಗಣಿಸಲಾಗಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಜೂಜಾಟ ನಡೆಯುವ ಮಾಹಿತಿ ಇದ್ದು, ಜೂಜಾಟ ದಲ್ಲಿ ತೊಡಗಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯೂರು ನಗರ ಪೋಲಿಸ್ ಠಾಣೆ ಪ್ರಕಟಣೆಯಲ್ಲಿ ಹೇಳಲಾಗಿದೆ.