ವಿದ್ಯಾರ್ಥಿ ನಿಲಯಗಳ ಆಹಾರ ಗುಣಮಟ್ಟ ಪರಿಶೀಲನೆಗೆ ತಂಡ ರಚನೆ: ಸಚಿವ ಬಿ.ಸಿ.ಪಾಟೀಲ್
ಚಿತ್ರದುರ್ಗ, ನವೆಂಬರ್, 05: ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಅನಿರೀಕ್ಷಿತ ಭೇಟಿ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟದ ಪರಿಶೀಲನೆ ಮಾಡಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆರೋಗ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡ ರಚನೆ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಎರಡನೇ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿಲ್ಲ ಎಂದು ಸಾಕಷ್ಟು ದೂರುಗಳು ಬರುತ್ತಿವೆ. ಆಹಾರ ಯಾರು ಪೂರೈಕೆ ಮಾಡುತ್ತಾರೆ? ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಪರೀಕ್ಷೆ ಮಾಡಬೇಕು. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ತಾಕೀತು ಮಾಡಿದರು.
ಚಿತ್ರದುರ್ಗ: ರೈತರಿಗೆ ₹99.28 ಕೋಟಿ ಬೆಳೆ ಹಾನಿ ಪರಿಹಾರ ಪಾವತಿ
ನಂತರ ವಿಧಾನ ಪರಿಷತ್ ಸಸದ್ಯ ಕೆ.ಎಸ್.ನವೀನ್ ಮಾತನಾಡಿ, ವಿದ್ಯಾರ್ಥಿ ನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಊಟ ಮಾಡಿ, ಆಹಾರದ ಗುಣಮಟ್ಟ ಪರೀಕ್ಷಿಸಲಾಗಿದೆಯೇ? ಸಮಾಜ ಕಲ್ಯಾಣ ಇಲಾಖೆ ನಡೆಸುತ್ತಿರುವ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಅಧಿಕಾರಿಗಳು ಊಟ ಮಾಡಬೇಕು. ಈ ಬಗ್ಗೆ ದಾವಣಗೆರೆ ಜಿಲ್ಲೆಯಲ್ಲಿ ನಿಯಮ ಜಾರಿಗೆ ತರಲಾಗಿದ್ದು, ಇದರಂತೆ ಜಿಲ್ಲೆಯಲ್ಲಿಯೂ ಅಗತ್ಯ ಕ್ರಮವಹಿಸಬೇಕು. ವಿದ್ಯಾರ್ಥಿಗಳು ಏನು ಸೇವಿಸುತ್ತಾರೆ ಎಂಬ ವಿಷಯ ನಮ್ಮ ಗಮನಕ್ಕ ಬರಬೇಕೆ ಎಂದು ತಿಳಿಸಿದರು.
ಸಣ್ಣ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ
ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ಟೀ ಕ್ಯಾಂಟೀನ್ಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಪರವಾನಗಿ ಹೊಂದಿರುವ ಕೆಲವು ಮದ್ಯ ಮಾರಾಟ ಅಂಗಡಿಯವರೇ ಮದ್ಯವನ್ನು ಗ್ರಾಮೀಣ ಪ್ರದೇಶದ ಕ್ಯಾಂಟೀನ್ ಹಾಗೂ ಸಣ್ಣಪುಟ್ಟ ಅಂಗಡಿಗಳಿಗೆ ತಲುಪಿಸಿ ಮಾರಾಟ ಮಾಡಿಸುತ್ತಿದ್ದಾರೆ. ಇದರಿಂದ ಅಪಘಾತ ಹಾಗೂ ಅನಗತ್ಯ ಗಲಾಟೆ ಸಂಘರ್ಷಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ನಿಯಮಿತವಾಗಿ ಕ್ರಮ ಕೈಗೊಳ್ಳಬೇಕು. ಅಂತಹ ಕ್ಯಾಂಟೀನ್ ಹಾಗೂ ಅಂಗಡಿಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.
ತೀವ್ರ ಪರಿಶೀಲನೆಗೆ ಬಿ.ಸಿ.ಪಾಟೀಲ್ ಸೂಚನೆ
ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಉತ್ತರಿಸಿದ ಅಬಕಾರಿ ಉಪ ಆಯುಕ್ತೆ ಅಶ್ವಿನಿ ಅವರು, ಅಕ್ರಮವಾಗಿ ಮದ್ಯ ಮಾರಾಟ ನಿಯಂತ್ರಿಸುವ ನಿಟ್ಟಿನಲ್ಲಿ ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ ಕಳೆದ ಏಪ್ರಿಲ್ನಿಂದ ಈವರೆಗೆ ಇಂತಹ ಒಟ್ಟು 463 ಪ್ರಕರಣಗಳನ್ನು ಅಲ್ಲದೆ 17 ತೀವ್ರ ತರಹ ಅಪರಾಧದ ಪ್ರಕರಣ ದಾಖಲಿಸಿ, ಕ್ರಮ ಕೈಗೊಂಡಿದ್ದೇವೆ ಎಂದರು. ನಂತರ ಎಸ್ಪಿ ಪರಶುರಾಮ್ ಮಾತನಾಡಿ, ಪೊಲೀಸ್ ಇಲಾಖೆಯಿಂದಲೂ ಇಂತಹ 332 ಪ್ರಕರಣಗಳನ್ನು ದಾಖಲಿಸಿದ್ದೇವೆ ಎಂದರು.
ಭಾರಿ ಮಳೆ, ಜಲಾವೃತವಾಗಿದ್ದ ಬೆಳೆಗಳು
ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೆ 71,158 ಹೆಕ್ಟೇರ್ ಕೃಷಿ ಹಾನಿ ಸಂಭವಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 99.28 ಕೋಟಿ ರೂಪಾಯಿ ಪರಿಹಾರವನ್ನು ರೈತರಿಗೆ ಪಾವತಿಸಲಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 69 ಸಾವಿರ ಹೆಕ್ಟೇರ್ ಕೃಷಿ ಹಾನಿ ಸಂಭವಿಸಿದ್ದು, ಪರಿಹಾರ್ ತಂತ್ರಾಂಶದಲ್ಲಿ ದಾಖಲಿಸುವ ಕಾರ್ಯ ಆಗಿದೆ. ಇನ್ನು 90 ಕೋಟಿ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಂಟಿಕೃಷಿ ನಿರ್ದೇಶಕ ರಮೇಶ್ಕುಮಾರ್ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೆಪ್ಟೆಂಬರ್ ಅಂತ್ಯದವರೆಗೆ ಆದ ನಷ್ಟಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಹಣವನ್ನು ತ್ವರಿತವಾಗಿ ಪಾವತಿಸಬೇಕು. ಅಧಿಕಾರಿಗಳಿಗೆ ಈ ಬಗ್ಗೆ ಇಚ್ಛಾಶಕ್ತಿ ಇರಬೇಕು. ಜಿಲ್ಲೆಯಲ್ಲಿ ನಕಲಿ ಜೈವಿಕ ಗೊಬ್ಬರ ಹಾಗೂ ಕೀಟನಾಶಕಗಳು ರೈತರಿಗೆ ಮಾರಾಟ ಆಗುತ್ತಿದ್ದು, ಬೂದಿ ಮಿಶ್ರಣ ಮಾಡಿ ಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿವೆ. ನಕಲಿ ಗೊಬ್ಬರ ಮಾರಾಟ ಸಂಬಂಧ ದಾಖಲಾಗಿರುವ ಪ್ರಕರಣವನ್ನು ಈಗಾಗಲೇ ಸಿಒಡಿ ತನಿಖೆಗೆ ಒಪ್ಪಿಸಲಾಗಿದೆ. ಈ ಪ್ರಕರಣದ ತನಿಖೆಯು ಯಾವ ಹಂತದಲ್ಲಿದೆ ಎಂಬ ಕುರಿತು ಮಾಹಿತಿಗಾಗಿ ಸಿಇಡಿಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇನ್ನು ನಕಲಿ ಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರರ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ಪಾವತಿ ವಿಷಯದಲ್ಲಿಯೂ ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡಬೇಕು ಎಂದರು.
ವಿಶೇಷ ತಂಡ ರಚನೆ ಮಾಡಲು ಚಿಂತನೆ
ನಂತರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ನಕಲಿ ಜೈವಿಕ ಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರರನ್ನು ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಬೇಕು. ಅಗತ್ಯವಿದ್ದಲ್ಲಿ, ಇತರೆ ಇಲಾಖೆ ಅಧಿಕಾರಿಗಳನ್ನು ತಂಡಕ್ಕೆ ನೇಮಿಸಲಾಗುವುದು. ರೈತರ ಹಿತ ಕಾಯುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ನಕಲಿ ಬೀಜ, ಗೊಬ್ಬರ ಮುಂತಾದ ಕಾರಣಗಳಿಂದ ರೈತರು ನಷ್ಟಕ್ಕೆ ಒಳಗಾಗಬಾರದು ಎಂದರು. ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ರಮೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಇಂತಹ 36 ಮಾದರಿ ಸಂಗ್ರಹಿಸಿದ್ದು, ಈ ಪೈಕಿ 09- ಗೊಬ್ಬರ ಹಾಗೂ 05- ಕೀಟನಾಶಕ ನಕಲಿ ಪ್ರಕರಣಗಳು ಪತ್ತೆ ಆಗಿವೆ. ಇನ್ನು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಮುಖ ಎಣ್ಣೆಕಾಳು ಬೆಳೆಯಾದ ಶೇಂಗಾ ಬೆಳೆಯಲ್ಲಿ ಉತ್ಪಾದನೆ ಹೆಚ್ಚಿಸಲು ಕದರಿ ಲೇಪಾಕ್ಷಿ ತಳಿಯನ್ನು ಹೊಸದಾಗಿ ರೈತರಿಗೆ ಪರಿಚಯಿಸಲಾಗಿದೆ. ಈ ಕದರಿ ಲೇಪಾಕ್ಷಿ ತಳಿಗೆ ಜಿಲ್ಲೆಯಲ್ಲಿ ಮಾರುಕಟ್ಟೆ ಸಮಸ್ಯೆ ಎದುರಾಗಿದ್ದು, ಈ ಶೇಂಗಾವನ್ನು ಕೇವಲ ತಿನ್ನುವುದಕ್ಕಾಗಿ ಬಳಸಲಾಗುತ್ತಿದೆ ಎಂದರು.