"ಮಮತಾ ಬ್ಯಾನರ್ಜಿ ಕಪಿಮುಷ್ಠಿಯಿಂದ ಪಶ್ಚಿಮ ಬಂಗಾಳ ಹೊರ ಬರಲಿದೆ''
ಚಿತ್ರದುರ್ಗ, ಜನೆವರಿ 2: ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರ ಕಪಿಮುಷ್ಠಿಯಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮುಂದೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಹೇಳಿದರು.
ಚಿತ್ರದುರ್ಗದಲ್ಲಿ ಮಾತನಾಡಿದ ಕೇಂದ್ರ ರಸಾಯನಿಕ ಹಾಗೂ ಗೊಬ್ಬರ ಸಚಿವ ಡಿ.ವಿ ಸದಾನಂದಗೌಡ, ದೇಶದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಭಾರೀ ಬದಲಾವಣೆ ಬಂದಿದೆ ಎಂದರು.
ಇಡೀ ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಮಮತಾ ಬ್ಯಾನರ್ಜಿ ಅವರ ಕಪಿಮುಷ್ಠಿಯಲ್ಲಿದ್ದ ಪಶ್ಚಿಮ ಬಂಗಾಳದಲ್ಲಿಯೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಎಲ್ಲಾ ರಾಜ್ಯಗಳ ಜನರು ಇತರೆ ರಾಜಕೀಯ ಪಕ್ಷಗಳನ್ನು ದೂರ ಇಡುತ್ತಿದ್ದಾರೆ. ನಮ್ಮ ಸರ್ಕಾರ ಕೊಟ್ಟ ಆಡಳಿದದಿಂದಾಗಿ ದೇಶದಲ್ಲಿ ಬಿಜೆಪಿ ಅಲೆ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದರು.
ನಮ್ಮ ಸರ್ಕಾರ ರೈತರ ಪರವಾಗಿದ್ದು, ಬೆಳೆಗಳಿಗೆ ಎಂ.ಎಸ್.ಪಿ ಕೊಟ್ಟಿದ್ದೇವೆ. ರೈತರು ತಮ್ಮ ಉತ್ಪಾದನೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಆದರೆ ಕೆಲವರು ರೈತರಿಗೆ ಅನುಕೂಲಕರವಾದ ಕಾನೂನಿನ ಬಗ್ಗೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಚಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
65 ಸಾವಿರ ಕೋಟಿ ರೂ. ಹಣವನ್ನು ರಸಗೊಬ್ಬರ ಸಬ್ಸಿಡಿಗೆ ಮೀಸಲಿಟ್ಟಿದ್ದೇವೆ. ರೈತರ ಮುಖವಾಡ ಹಾಕಿಕೊಂಡು ನಮ್ಮ ವಿರೋಧಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ ಮಾಡುತ್ತಾರೆ. ಪಕ್ಷ ಅಧಿಕಾರಕ್ಕೆ ಬರಲು ಕಾರಣರಾದವರಿಗೆ ಸಚಿವ ಸ್ಥಾನ ಕೊಡಬೇಕಿದೆ. ಹೀಗಾಗಿ ಹಲವಾರು ಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸಚಿವ ಸ್ಥಾನ ಕೊಡಲು ಆಗಿಲ್ಲ ಎಂದರು.
ಬಸನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಮಾತನಾಡುತ್ತಲೇ ಇರುತ್ತಾರೆ. ಯತ್ನಾಳ್ ಏಕೋಪಾಧ್ಯಾಯ ಶಿಕ್ಷಕರಾಗಲು ಸಾಧ್ಯವಿಲ್ಲ. ಬಿಜೆಪಿ ಜೊತೆ ಜೆಡಿಎಸ್ ವಿಲೀನದ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ್ದ ವೇಳೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.












Click it and Unblock the Notifications