ನ.22ರಂದು ವಾಣಿ ವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಲಿರುವ ಸಿಎಂ ಬೊಮ್ಮಾಯಿ
ಚಿತ್ರದುರ್ಗ, ನವೆಂಬರ್ 15: ಮಧ್ಯ ಕರ್ನಾಟಕದ ಜಲಪಾತ್ರೆ ಎಂದು ಕರೆಸಿಕೊಳ್ಳುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯ 89 ವರ್ಷಗಳ ಬಳಿಕ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಇದೇ ತಿಂಗಳ ನವೆಂಬರ್ 22ರಂದು ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವ ಸಂಪುಟ ಕೆಲವು ಸಚಿವರು ಆಗಮಿಸಲಿದ್ದಾರೆ ಎಂದು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಬಾಗಿನ ಕಾರ್ಯಕ್ರಮದ ಪೂರ್ವಭಾವಿ ಸಭೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, 89 ವರ್ಷಗಳ ಬಳಿಕ ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದು ಇತಿಹಾಸ ಸೃಷ್ಟಿಸಿದೆ. ಈ ಜಲಾಶಯ ಭರ್ತಿಯಾಗಲು ವರುಣನ ಕೃಪೆ ಮತ್ತು ಭದ್ರಾ ಜಲಾಶಯದ ನೀರು ಹರಿಸಿರುವುದು ಕಾರಣ. ಇಂದು ಡ್ಯಾಂ ಭರ್ತಿಯಾಗಿದೆ ಎಂದರು.
ಚಿತ್ರದುರ್ಗ: ರೈತರಿಗೆ ₹99.28 ಕೋಟಿ ಬೆಳೆ ಹಾನಿ ಪರಿಹಾರ ಪಾವತಿ
ಇನ್ನು ಭದ್ರಾದಿಂದ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿಸುವ ಬಗ್ಗೆ ಈ ಹಿಂದೆ ರೈತ ಸಂಘದಿಂದ 543 ದಿನ ಧರಣಿ ಸತ್ಯಾಗ್ರಹ ನಡೆಸಲಾಯಿತು. ಅಂದಿನ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿ ಭದ್ರಾದಿಂದ ವಿವಿ ಸಾಗರಕ್ಕೆ 5 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಚಾಲನೆ ನೀಡಿದರು.
ಹಿರಿಯೂರು ರೈತರ ಹೋರಾಟ ನಮ್ಮ ಸರ್ಕಾರದ ಇಚ್ಛಾಶಕ್ತಿಯಿಂದ ಜಲಾಶಯ ಕೋಡಿ ಬಿದ್ದಿದೆ. ಕಳೆದ ಒಂದು ತಿಂಗಳ ಹಿಂದೆ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಮುಂದೂಡಲಾಯಿತು. ಜಿಲ್ಲೆಯ ಶಾಸಕರು, ಜಿಲ್ಲಾಧ್ಯಕ್ಷರ ಸೇರಿದಂತೆ ಮುಖ್ಯಮಂತ್ರಿಗಳ ಬಳಿ ಮಾತಾಡಿದಾಗ, ನವೆಂಬರ್ ತಿಂಗಳ 22ರಂದು ದಿನಾಂಕ ನಿಗದಿ ಪಡಿಸಿದ್ದಾರೆ ಎಂದು ತಿಳಿಸಿದರು.
ಅಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಅಭಿಲಾಷೆಯಂತೆ ಹೆಚ್ಚು ರೈತರು ಪಾಲ್ಗೊಳ್ಳಬೇಕು. ಈ ಕಾರ್ಯಕ್ರಮ ರೈತರಿಗೆ ಸಿಮೀತವಾಗಬೇಕು ಎಂದು ಸಿಎಂ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಜೆಸಿ ಮಾಧುಸ್ವಾಮಿ, ಗೋವಿಂದ ಕಾರಜೋಳ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಕೃಷಿ ಸಚಿವ ಬಿಸಿ ಪಾಟೀಲ್, ಸಚಿವ ಶ್ರೀರಾಮುಲು ಹಾಗೂ ಜಿಲ್ಲೆಯ ಶಾಸಕರು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.