ಹಿರಿಯೂರು: ಅಬ್ಬರದ ಪ್ರಚಾರದಲ್ಲಿ ತೊಡಗಿದ ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್
ಚಿತ್ರದುರ್ಗ, ಏಪ್ರಿಲ್, 02: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಪ್ರಚಾರದಲ್ಲಿ ಕಾರ್ಯನಿರತರಾಗಿದ್ದಾರೆ. ಹಾಗೆಯೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಡಿ.ಸುಧಾಕರ್ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.
ಹಿರಿಯೂರು ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ, ಐನಳ್ಳಿ, ಬ್ಯಾಡರಹಳ್ಳಿ ಗೊಲ್ಲರಟ್ಟಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಬಿಸಿಲನ್ನು ಲೆಕ್ಕಿಸದೆ ಮನೆ ಮನೆ ಪ್ರಚಾರ ಕೈಗೊಂಡಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ. ನಂತರ ಮಾತನಾಡಿದ ಸುಧಾಕರ್, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿದ್ದು, ಬಹುಮತದಿಂದ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ
ಬಿಜೆಪಿ ಪಕ್ಷದ ದುರಾಡಳಿತ, 40% ಕಮಿಷನ್ ಭ್ರಷ್ಟಾಚಾರ, ಬೆಲೆ ಏರಿಕೆ, ಜನಸಾಮಾನ್ಯರ ವಿರೋಧಿ ಆಡಳಿತಕ್ಕೆ ಬೇಸತ್ತಿರುವ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷದ ಪರವಾಗಿ ಒಲವು ತೋರಿದ್ದಾರೆ. ರಾಜ್ಯದಲ್ಲಿ ಯಾವುದಾದರೂ ನುಡಿದಂತೆ ನಡೆಯುವ ಸರ್ಕಾರವಿದ್ದರೆ, ಅದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದರು.
2014ರಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿತ್ತು. ಈಗಾಗಲೇ ಕಾಂಗ್ರೆಸ್ ಗ್ಯಾರಂಟಿ ಎಂಬ ಯೋಜನೆಗಳನ್ನು ಜಾರಿಗೆ ತಂದಿದೆ. ನಮ್ಮ ಸರ್ಕಾರ ಬಂದ ತಕ್ಷಣ ಪ್ರತಿ ಮನೆ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಕೊಡುತ್ತೇವೆ. ಅಲ್ಲದೇ ಪ್ರತಿ ಮನೆಯ ನಿರ್ವಹಣೆಗೆ 2000 ಸಾವಿರ ರೂಪಾಯಿ ಹಣವನ್ನು ನೀಡಲಾಗುತ್ತದೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
2008ರಲ್ಲಿ ನಾನು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಪಡೆದು, ಬಿಜೆಪಿ ಸರ್ಕಾರದಲ್ಲಿ ಸಚಿವನಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದೇನೆ. ನಂತರ 2013ರಲ್ಲಿ ಮರು ಆಯ್ಕೆಯಾಗಿ ಕ್ಷೇತ್ರದಲ್ಲಿ ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ಕೃಷಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದೆ. ಈ ಬಾರಿಯು ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಾ ನಂದಿನಿ ಗೌಡ, ಶಶಿಕಲಾ ಸುರೇಶ್ ಬಾಬು, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾ ನಾಗಕುಮಾರ್, ಕೆಪಿಸಿಸಿ ಸದಸ್ಯ ಕಂದೀಕೆರೆ ಸುರೇಶ್ ಬಾಬು, ನಗರಸಭೆ ಮಾಜಿ ಅಧ್ಯಕ್ಷೆ ಶಿವರಂಜಿನಿ ಯಾದವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾಂಗ್ರೆಸ್, ಬಿಜೆಪಿ ನಡುವೆ ಪೈಪೋಟಿ
ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಯಾಗಿದ್ದ ಹಿರಿಯೂರು ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆದರೆ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 2023ರ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಡಲಿದೆ. ಒಟ್ಟಾರೆಯಾಗಿ ಅಧಿಕಾರಕ್ಕೆ ಬರಲು ಮೂರು ಪಕ್ಷಗಳು ಪೈಪೋಟಿ ನಡೆಸುತ್ತಿದ್ದು, ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಕೆ.ಪೂರ್ಣಿಮಾ ಪತಿಯ ಉಚ್ಛಾಟನೆ ವಾಪಸ್
ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿವಿಧ ರಾಜಕೀಯ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಈ ಬಾರಿ ಚುನಾವಣೆಯಲ್ಲಿ ಶತಾಯಗತಾಯ ಗೆಲುವು ಸಾಧಿಸಿ ಅಧಿಕಾರ ನಡೆಸಬೇಕೆಂದಿರುವ ಬಿಜೆಪಿ ಯಾವ ಕ್ಷೇತ್ರವೂ ಕೈತಪ್ಪದಂತೆ ಎಚ್ಚರವಾಗಿ ಹೆಜ್ಜೆ ಇಡುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಈ ಬೆಳವಣಿಗೆಯ ನಡುವೆಯೇ 23 /10/ 2020 ರಂದು ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಪತಿಯನ್ನು ಬಿಜೆಪಿ ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿದ್ದು, ಬಿಜೆಪಿ ಪಕ್ಷ ಉಚ್ಛಾಟನೆಯ ಆದೇಶವನ್ನು ಹಿಂಪಡೆದಿದೆ.
ಈ ಬಗ್ಗೆ ಡಿ.ಟಿ ಶ್ರೀನಿವಾಸ್ ಬಿಜೆಪಿ ಪತ್ರ ಬರೆದಿದ್ದು, ತಮ್ಮ ವಿರುದ್ಧ ದಿನಾಂಕ 23/10/2020 ರಂದು ಶಿಸ್ತು ಕ್ರಮಕೈಗೊಂಡು ಪಕ್ಷ ಪಕ್ಷದಿಂದ ಉಚ್ಛಾಟನೆ ಗೊಳಿಸಲಾಗಿತ್ತು. ತಮ್ಮ ವಿವರಣೆ ನಡವಳಿಕೆ ಪಕ್ಷದ ಬಗ್ಗೆ ನೀವು ತೋರಿದ ಬದ್ಧತೆಯನ್ನು ಪರಿಗಣಿಸಿ ತಮ್ಮ ಅಮಾನತ್ತನ್ನು ಹಿಂಪಡೆದುಕೊಳ್ಳಲಾಗಿದೆ.
ತಾವು ಪಕ್ಷ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಶಿಸ್ತಿನ ಸಿಪಾಯಿಯಂತೆ ಸಂಘಟನೆಯನ್ನು ಬಲಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರವೆಂದು ಆಶಿಸುತ್ತೇನೆ' ಎಂದು ಪತ್ರದಲ್ಲಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ್ ಪಾಟೀಲ್ ತಿಳಿಸಿದ್ದಾರೆ.












Click it and Unblock the Notifications