ಲೋಕಸಭಾ ಚುನಾವಣೆ : ಕೋಟೆ ನಾಡಿನಲ್ಲಿ ನೆಲ ಕಚ್ಚಿದ ಕಾಂಗ್ರೆಸ್
ಚಿತ್ರದುರ್ಗ, ಮೇ 24: ಲೋಕಸಭಾ ಚುನಾವಣೆಯಲ್ಲಿ ಕೋಟೆ ನಾಡು ಚಿತ್ರದುರ್ಗದಲ್ಲಿ ಬಿಜೆಪಿಯ ಅಭ್ಯರ್ಥಿ ಆನೇಕಲ್ ಎ. ನಾರಾಯಣಸ್ವಾಮಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಸಂಸದ ಬಿ.ಎನ್ ಚಂದ್ರಪ್ಪ ವಿರುದ್ಧ ಎ. ನಾರಾಯಣ ಸ್ವಾಮಿ ಸುಮಾರು 80178 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲುವ ಮೂಲಕ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ.
ಮೈತ್ರಿಯಿಂದ ಕಾಂಗ್ರೆಸ್ ಗೆ ಧಕ್ಕೆ: ಮಾಜಿ ಸಚಿವ ಆಂಜನೇಯ
ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಕೂಡ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆಯುವ ಮೂಲಕ ಕಾಂಗ್ರೆಸ್ ಧೂಳಿಪಟವಾಗುಂತೆ ಮಾಡಿತ್ತು. ಈ ಬಾರಿಯೂ ಅದೇ ಸ್ಥಿತಿ ಮುಂದುವರೆದಿದೆ. ಚಿತ್ರದುರ್ಗ ಜಿಲ್ಲೆಯ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಚಿವ ಡಿ. ಸುಧಾಕರ್, ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ. ಮಾಜಿ ಶಾಸಕ ಮೊಳಕಾಲ್ಮೂರು ತಿಪ್ಪೇಸ್ವಾಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದರು. ಇನ್ನು ಚಳ್ಳಕೆರೆ ಕಾಂಗ್ರೆಸ್ ಶಾಸಕ ಟಿ. ರಘುಮೂರ್ತಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಹೇಳಿಕೊಳ್ಳುವಂತಹ ಆಟ ನಡೆಯಲಿಲ್ಲ, ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಮಾಜಿ ಶಾಸಕ ಎ.ವಿ. ಉಮಾಪತಿ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಅಭ್ಯರ್ಥಿ ಚಂದ್ರಪ್ಪನವರನ್ನು ಗೆಲ್ಲಿಸುವಲ್ಲಿ ವಿಫಲವಾಗಿದ್ದು, ಮೈತ್ರಿ ಮಾಡಿಕೊಂಡಿದ್ದರಿಂದ ಜೆಡಿಎಸ್ ಮುಖಂಡರು ಕೂಡ ಅಭ್ಯರ್ಥಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ.
ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಚಂದ್ರಪ್ಪನವರನ್ನು ಮತದಾರ ತಿರಸ್ಕರಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಜಯ ಸಾಧಿಸಿದ್ದ ಚಂದ್ರಪ್ಪ ಜನಸಮಾನ್ಯರಂತೆ ಓಡಾಡಿಕೊಂಡು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದರು.ಈ ಬಾರಿ ಇನ್ನೂ ಹೆಚ್ಚಿನ ಕಾರ್ಯ ಮಾಡುವುದಾಗಿ ಮರು ಆಯ್ಕೆ ಬಯಸಿದ್ದರು. ಆದರೆ ಈ ಬಾರಿ ಚಿತ್ರದುರ್ಗದ ಮತದಾರರು ಮೋದಿ ಅಲೆಯಲ್ಲಿ ಕಾಂಗ್ರೆಸ್ ನೆಲ ಕಚ್ಚುವಂತೆ ಮಾಡಿದ್ದಾರೆ. ಕೋಟೆ ನಾಡಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇದೆಯಾ ಎಂಬುದೇ ಸದ್ಯಕ್ಕೆ ಉಳಿದಿರುವ ಪ್ರಶ್ನೆ.