ರಾಹುಲ್ ಭೇಟಿ; ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
ಚಿತ್ರದುರ್ಗ, ಆಗಸ್ಟ್, 03: ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಮುರುಘಾ ಶರಣರ ಆಶೀರ್ವಾದ ಪಡೆದು ನಂತರ ವಿವಿಧ ಮಠಾಧೀಶರ ಜೊತೆ ಸಂವಾದ ನಡೆಸಲಿದ್ದಾರೆ. ಮಠಾಧೀಶರ ಸಂವಾದದಲ್ಲಿ ಪಾಲ್ಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆದಿದೆ.
ಹುಬ್ಬಳ್ಳಿಯಿಂದ ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಬರುತ್ತಿದ್ದು, ಮಳೆ ಕಾರಣಕ್ಕೆ ವಿಳಂಬವಾಗುತ್ತಿದೆ. ಬೆಳಗ್ಗೆ 11ರಿಂದ 11.50ರವರೆಗೆ ಸಭೆ ನಿಗದಿಯಾಗಿದೆ. ರಾಹುಲ್ ಭೇಟಿ ಹಿನ್ನೆಲೆಯಲ್ಲಿ ಮಠಕ್ಕೆ ಭಾರೀ ಭದ್ರತೆ ಕಲ್ಪಿಸಲಾಗಿದೆ. ಮಠದ ಪ್ರವೇಶ ಹಾಗೂ ಸಂವಾದದಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ವತಿಯಿಂದ ಪಾಸ್ ವ್ಯವಸ್ಥೆ ಮಾಡಲಾಗಿದೆ. ಪಾಸ್ ವಿತರಿಸುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಪರಸ್ಪರ ವಾಗ್ವಾದ ನಡೆಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಾಸಲು ಸತೀಶ್ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್ ಪೀರ್ ಏರುಧ್ವನಿಯಲ್ಲಿ ಗಲಾಟೆ ಮಾಡಿಕೊಂಡರು. ಪೊಲೀಸರು ಮಧ್ಯ ಪ್ರವೇಶಿಸಿ ಸಾಸಲು ಸತೀಶ್ ಅವರು ಸಭಾಂಗಣಕ್ಕೆ ತೆರಳಲು ಅವಕಾಶ ಮಾಡಿಕೊಟ್ಟರು. ಕಾಂಗ್ರೆಸ್ ಮುಖಂಡ ಮುರಳಿಧರ ಹಾಲಪ್ಪ ವಿರುದ್ಧ ಸತೀಶ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.












Click it and Unblock the Notifications