ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನ, ಚಿತ್ರನಟಿ ಭಾವನಾ ಬಿಜೆಪಿ ತೆಕ್ಕೆಗೆ?
Recommended Video

ಚಿತ್ರದುರ್ಗ, ಮೇ 04: ಕಾಂಗ್ರೆಸ್ನಿಂದ ಚಿತ್ರದುರ್ಗ ಕ್ಷೇತ್ರದ ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದ ಚಿತ್ರನಟಿ ಚಂದ್ರಮುಖಿ ಪ್ರಾಣಸಖಿ ಖ್ಯಾತಿಯ ಭಾವನಾ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂದು ಈಗ ಬಿಜೆಪಿಗೆ ಸೇರ್ಪಡೆಗೊಳ್ಳುವ ತಯಾರಿ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೊಡನೆ ಈ ಬಗ್ಗೆ ಬಹಳ ಹೊತ್ತು ದೂರವಾಣಿಯ ಮೂಲಕ ಭಾವನಾ ಅವರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದ್ದು, ಇಂದೇ ಭಾವನಾ ಅವರು ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ.
ಚಿತ್ರದುರ್ಗದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಟಿ ಭಾವನಾ ಅವರು ಚಳ್ಳಕೆರೆ ಸಮೀಪ ಮನೆಯೊಂದನ್ನು ಬಾಡಿಗೆಗೆ ಪಡೆದು ಕ್ಷೇತ್ರದಲ್ಲಿ ಓಡಾಡುತ್ತಿದ್ದರು. ಅಲ್ಲದೆ ಅಲ್ಲಿನ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿಶ್ವಾಸ ಸಂಪಾದಿಸುವ ಕಾರ್ಯದಲ್ಲಿಯೂ ಅವರು ತೊಡಗಿದ್ದರು.

ಟಿಕೆಟ್ ಘೋಷಣೆ ಆಗುವ ಮುಂಚೆ ಕಾಂಗ್ರೆಸ್ ಪರ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ಭಾವನಾ ಟಿಕೆಟ್ ಕೈತಪ್ಪಿದ ನಂತರ ಸಾರ್ವಜನಿಕವಾಗಿ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರಲಿಲ್ಲ, ಪ್ರಚಾರಕ್ಕೂ ಹೋಗಿರಲಿಲ್ಲ. ಈಗ ಏಕಾಏಕಿ ಕಾಂಗ್ರೆಸ್ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ.
ಇಂದು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ಇದ್ದು, ಅದೇ ಕಾರ್ಯಕ್ರಮದಲ್ಲಿ ಭಾವನಾ ಅವರು ಬಿಜೆಪಿ ಸೇರುವ ಸಾಧ್ಯತೆ ದಟ್ಟವಾಗಿದೆ. ನಟ ಶಶಿಕುಮಾರ್ ಅವರು ಕೂಡಾ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು ಅಲ್ಲಿ ಟಿಕೆಟ್ ಸಿಗದ ಕಾರಣ ಅವರು ಜೆಡಿಎಸ್ ಸೇರ್ಪಡೆಗೊಂಡಿದ್ದರು.












Click it and Unblock the Notifications