ಅಧಿಕಾರ ಪಡೆಯಲು ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಶುರುಮಾಡಿಕೊಂಡಿದೆ: ಸಿಎಂ ಬೊಮ್ಮಾಯಿ
ಚಿತ್ರದುರ್ಗ, ಸೆಪ್ಟೆಂಬರ್ 24 : ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.
ಕಾಂಗ್ರೆಸ್ಸಿಗೆ ಭ್ರಷ್ಟಾಚಾರ ಬಗ್ಗೆ ಮಾತನಾಡಲು ಹಕ್ಕಿಲ್ಲ: ತನಿಖೆ ಎದುರಿಸಲು ಬಿಜೆಪಿ ಸಿದ್ಧ:ಸಿಎಂ
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಚರ್ಚೆ ನಡೆಯುತ್ತಿದೆ, ದೆಹಲಿಗೆ ಹೋಗಿ ಅಲ್ಲಿ ವರಿಷ್ಟರೊಂದಿಗೆ ಚರ್ಚೆ ಮಾಡಿ ಬಂದ ನಂತರ ತೀರ್ಮಾನ ಕೈಗೊಳ್ಳುತ್ತೇವೆ. ಮಾಧ್ಯಮಗಳ ಮೂಲಕ ಎಲ್ಲರಿಗೂ ತಿಳಿಸುತ್ತೇನೆ ಎಂದರು.
ಇನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆಲವು ಮಾಧ್ಯಮಗಳು ಸಮೀಕ್ಷೆ ನಡೆಸಿದ್ದು ಬಿಜೆಪಿಗೆ 90-100 ಸೀಟುಗಳು ಲಭಿಸಲಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಎಲ್ಲಾ ಸಮೀಕ್ಷೆಗಳು ಒಂದೊಂದು ರೀತಿಯಲ್ಲಿ ಬರುತ್ತಿವೆ. ನಮಗೆ ಜನರ ನಾಡಿಮಿಡಿತ ಗೊತ್ತಿದೆ. ನಾವು 35 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.